×
Ad

Yadgiri | ದಲಿತರ ಹಕ್ಕುಗಳಿಗಾಗಿ ಜು.3ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ದಲಿತ ಜನಾಗ್ರಹ ಸಮಾವೇಶ

ಭೂಮಿ, ವಸತಿ, ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ

Update: 2026-06-18 16:23 IST

ಯಾದಗಿರಿ: ಭೂಮಿ, ವಸತಿ, ಸರ್ಕಾರಿ ಉದ್ಯೋಗಗಳಲ್ಲಿನ ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿ, ವಿಶೇಷ ಘಟಕ ಯೋಜನೆಗಳ ಸಮರ್ಪಕ ಅನುಷ್ಠಾನ ಹಾಗೂ ಏಕಗವಾಕ್ಷಿ ನೀತಿ ಜಾರಿಗೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ವತಿಯಿಂದ ಜುಲೈ 3ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ದಲಿತ ಜನಾಗ್ರಹ ಸಮಾವೇಶ ಹಾಗೂ ಅನಿರ್ದಿಷ್ಟಾವಧಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಸಮಿತಿ ಸದಸ್ಯ ನಾಗಣ್ಣ ಬಡಿಗೇರ ತಿಳಿಸಿದ್ದಾರೆ.

ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭಿವೃದ್ಧಿಗಾಗಿ 2013ರಲ್ಲಿ ಜಾರಿಗೆ ಬಂದ ಎಸ್‌ಸಿಎಸ್‌ಪಿ ಹಾಗೂ ಟಿಎಸ್‌ಪಿ ಕಾಯ್ದೆಗಳ ಮೂಲ ಉದ್ದೇಶಗಳು ಇನ್ನೂ ಪರಿಣಾಮಕಾರಿಯಾಗಿ ಅನುಷ್ಠಾನಗೊಂಡಿಲ್ಲ ಎಂದು ಆರೋಪಿಸಿದರು.

ಜನಸಂಖ್ಯೆಗೆ ಅನುಗುಣವಾಗಿ ಮೀಸಲಿಟ್ಟ ಅನುದಾನದಿಂದ ಎಷ್ಟು ಕುಟುಂಬಗಳು ಬಡತನ ರೇಖೆಯಿಂದ ಹೊರಬಂದಿವೆ ಎಂಬ ಸ್ಪಷ್ಟ ಮಾಹಿತಿ ಸರ್ಕಾರದ ಬಳಿ ಇಲ್ಲ. ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಲಾಗುತ್ತಿದೆ ಎಂಬ ಸರ್ಕಾರದ ನಿಲುವು ದಲಿತ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಅವರು ದೂರಿದರು.

ದಲಿತರಿಗೆ ಭೂಮಿ, ವಸತಿ, ಗುಣಮಟ್ಟದ ಶಿಕ್ಷಣ ಹಾಗೂ ಸರ್ಕಾರಿ ಉದ್ಯೋಗಗಳಲ್ಲಿ ಸಮರ್ಪಕ ಅವಕಾಶಗಳು ಇನ್ನೂ ದೊರೆಯುತ್ತಿಲ್ಲ. ವಿವಿಧ ಇಲಾಖೆಗಳಲ್ಲಿನ ಬ್ಯಾಕ್‌ಲಾಗ್ ಹುದ್ದೆಗಳು ಖಾಲಿಯೇ ಉಳಿದಿದ್ದು, ಅವುಗಳನ್ನು ಕೂಡಲೇ ಭರ್ತಿ ಮಾಡಬೇಕು ಎಂದು ಆಗ್ರಹಿಸಿದರು.

ಅಂಬೇಡ್ಕರ್ ಅಭಿವೃದ್ಧಿ ನಿಗಮದ ಮೂಲಕ ಭೂ ಒಡೆತನಕ್ಕಾಗಿ ಸಲ್ಲಿಕೆಯಾಗಿರುವ ಸಾವಿರಾರು ಅರ್ಜಿಗಳು ವರ್ಷಗಳಿಂದ ವಿಲೇವಾರಿಯಾಗದೆ ಉಳಿದಿವೆ. ಅನುದಾನದ ಕೊರತೆಯ ನೆಪ ಹೇಳಿ ಫಲಾನುಭವಿಗಳನ್ನು ಅಲೆದಾಡಿಸಲಾಗುತ್ತಿದ್ದು, ತಮ್ಮ ಮೂಲಭೂತ ಹಕ್ಕುಗಳಿಗಾಗಿ ಬಡವರು ಕಚೇರಿಗಳ ಸುತ್ತ ಸುತ್ತುವಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರದ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ನಡೆಯಲಿರುವ ಜನಾಗ್ರಹ ಸಮಾವೇಶದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಸಾವಿರಾರು ಜನರು ಭಾಗವಹಿಸಲಿದ್ದು, ಯಾದಗಿರಿ ಜಿಲ್ಲೆಯಿಂದಲೇ 1,000ಕ್ಕೂ ಹೆಚ್ಚು ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ನಾಗಣ್ಣ ಬಡಿಗೇರ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ರಾಜ್ಯ ಸಂಘಟನಾ ಸಂಚಾಲಕ ರಾಮಣ್ಣ ಕಲ್ಲದೇವನಹಳ್ಳಿ, ಜಿಲ್ಲಾ ಸಂಚಾಲಕ ಮಾಳಪ್ಪ ಕೀರದಳ್ಳಿ, ಮರಳುಸಿದ್ದಪ್ಪ ನಾಯ್ಕಲ್, ನಿಂಗಣ್ಣ ಬೀರನಾಳ, ಪರಶುರಾಮ ಮಹಲರೋಜ್, ಶರಣಪ್ಪ ತಳವರಗೇರಾ, ಆಂಜನೇಯ ಬಳಿಚಕ್ರ, ಅನಿಲ್ ಅನ್ವಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News