Yadgiri | ಶಿಕ್ಷಕರ ನೇಮಕಾತಿಯಲ್ಲಿ 5 ವರ್ಷ ವಯೋಮಿತಿ ಸಡಿಲಿಕೆಗೆ ಆಗ್ರಹ

Update: 2026-08-17 20:46 IST

ಯಾದಗಿರಿ: ಶಿಕ್ಷಕರ ನೇಮಕಾತಿಯಲ್ಲಿ ಐದು ವರ್ಷ ವಯೋಮಿತಿ ಸಡಿಲಿಕೆ ನೀಡಬೇಕು ಹಾಗೂ ವಿಷಯವಾರು ಶಿಕ್ಷಕರ ಹುದ್ದೆಗಳನ್ನು ಸೇರ್ಪಡೆಗೊಳಿಸಬೇಕು ಎಂದು ಆಗ್ರಹಿಸಿ ಎಐಡಿವೈಒ ಸಂಘಟನೆ ನೇತೃತ್ವದಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಎಐಡಿವೈಒ ರಾಜ್ಯ ಸಹ ಸಂಚಾಲಕ ಚನ್ನಬಸವ ಜಾನೆಕಲ್ ಮಾತನಾಡಿ, ಸಾರ್ವಜನಿಕ ಶಿಕ್ಷಣ ಇಲಾಖೆ 15 ಸಾವಿರ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಿರುವುದನ್ನು ಎಐಡಿವೈಒ ಹಾಗೂ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ಸ್ವಾಗತಿಸುತ್ತದೆ. ಹಲವು ವರ್ಷಗಳ ಹೋರಾಟದ ಬಳಿಕ ನೇಮಕಾತಿ ಅಧಿಸೂಚನೆ ಹೊರಬಂದಿರುವುದು ಉದ್ಯೋಗಾಕಾಂಕ್ಷಿಗಳಲ್ಲಿ ಆಶಾಭಾವನೆ ಮೂಡಿಸಿದೆ ಎಂದರು.

ರಾಜ್ಯ ಸರ್ಕಾರವು 2026ರ ಜನವರಿ 29ರಂದು ಹೊರಡಿಸಿರುವ ಆದೇಶದಂತೆ, 2027ರ ಡಿಸೆಂಬರ್ 31ರವರೆಗೆ ರಾಜ್ಯ ಸರ್ಕಾರದ ಎಲ್ಲಾ ನೇರ ನೇಮಕಾತಿಗಳಲ್ಲಿ ಐದು ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ. ಆದರೆ 15 ಸಾವಿರ ಶಿಕ್ಷಕರ ನೇಮಕಾತಿ ಅಧಿಸೂಚನೆಯಲ್ಲಿ ಈ ಸಡಿಲಿಕೆಯನ್ನು ಪರಿಗಣಿಸದಿರುವುದು ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ ಎಂದು ಅವರು ಆರೋಪಿಸಿದರು.

ಅನೇಕ ಅಭ್ಯರ್ಥಿಗಳು ಟಿಇಟಿ ಸೇರಿದಂತೆ ಅಗತ್ಯ ಅರ್ಹತೆಗಳನ್ನು ಪಡೆದುಕೊಂಡಿದ್ದರೂ, ವಯೋಮಿತಿ ಮೀರುವ ಆತಂಕದಲ್ಲಿದ್ದಾರೆ. ಸರ್ಕಾರವೇ ನಿರ್ಧರಿಸಿರುವ ಐದು ವರ್ಷಗಳ ವಯೋಮಿತಿ ಸಡಿಲಿಕೆಯನ್ನು ಶಿಕ್ಷಕರ ನೇಮಕಾತಿಗೂ ಅನ್ವಯಿಸಬೇಕು ಎಂದು ಆಗ್ರಹಿಸಿದರು.

ಇದೇ ವೇಳೆ, ಸುಮಾರು 11 ವರ್ಷಗಳ ಬಳಿಕ 4 ಸಾವಿರಕ್ಕೂ ಹೆಚ್ಚು ಹೈಸ್ಕೂಲ್ ಶಿಕ್ಷಕರ ನೇಮಕಾತಿ ನಡೆಯುತ್ತಿದ್ದು, ಗಣಿತ ಸೇರಿದಂತೆ ಹಲವು ವಿಷಯಗಳ ಶಿಕ್ಷಕರ ಹುದ್ದೆಗಳನ್ನು ಸೇರ್ಪಡೆ ಮಾಡಿಲ್ಲ. ಇದರಿಂದ ಬಿಎಡ್‌ನಲ್ಲಿ ಗಣಿತ, ಹಿಂದಿ, ಉರ್ದು ಸೇರಿದಂತೆ ವಿವಿಧ ವಿಷಯಗಳನ್ನು ಅಧ್ಯಯನ ಮಾಡಿರುವ ಉದ್ಯೋಗಾಕಾಂಕ್ಷಿಗಳಿಗೆ ಅನ್ಯಾಯವಾಗಲಿದೆ ಎಂದು ತಿಳಿಸಿದರು.

ಆದ್ದರಿಂದ 15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಐದು ವರ್ಷಗಳ ವಯೋಮಿತಿ ಸಡಿಲಿಕೆ ನೀಡಬೇಕು ಹಾಗೂ ಹೈಸ್ಕೂಲ್ ಶಿಕ್ಷಕರ ನೇಮಕಾತಿಯಲ್ಲಿ ಗಣಿತ ಸೇರಿದಂತೆ ಅಗತ್ಯವಿರುವ ಇತರೆ ವಿಷಯಗಳ ಹುದ್ದೆಗಳನ್ನು ಸೇರ್ಪಡೆಗೊಳಿಸಿ ಪೂರಕ ಅಧಿಸೂಚನೆ ಹೊರಡಿಸಬೇಕು ಎಂದು ಪ್ರತಿಭಟನಾಕಾರರು ಸರ್ಕಾರವನ್ನು ಒತ್ತಾಯಿಸಿದರು.

ನಂತರ ಮುಖ್ಯಮಂತ್ರಿಗಳಿಗೆ ಬರೆದ ಮನವಿಯನ್ನು ಜಿಲ್ಲಾಧಿಕಾರಿಗಳ ಮೂಲಕ ಸಲ್ಲಿಸಿದರು.ಈ ಸಂದರ್ಭದಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿಯ ಮುಖಂಡರಾದ, ಲಕ್ಷ್ಮೀ ರೆಡ್ಡಿ, ವೆಂಕಟಯ್ಯ, ಸಾಹೇಬ್, ಅಬ್ದುಲ್ ಪಟೇಲ್ ಮುಂತಾದವರು ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News