Yadgiri | ರೈತರು ಕಡ್ಡಾಯವಾಗಿ ಬೆಳೆ ವಿಮೆ ಮಾಡಿಸಿಕೊಳ್ಳಿ: ಚಂದ್ರಶೇಖರಗೌಡ ಮಾಗನೂರ
ಯಾದಗಿರಿ, ಜು.10: ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಮಳೆಯ ಅಭಾವದಿಂದ ಬರಗಾಲದಂತಹ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ರೈತರು ರಾಜ್ಯ ಸರ್ಕಾರದ ಯೋಜನೆಗಳ ಜೊತೆಗೆ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಕಡ್ಡಾಯವಾಗಿ ಬೆಳೆ ವಿಮೆ ಮಾಡಿಸಿಕೊಳ್ಳಬೇಕು ಎಂದು ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಚಂದ್ರಶೇಖರಗೌಡ ಮಾಗನೂರ ಸಲಹೆ ನೀಡಿದರು.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಬೆಳೆ ನಷ್ಟದ ಕುರಿತು ಕೃಷಿ ಇಲಾಖೆಯಿಂದ ಸಮಗ್ರ ಮಾಹಿತಿ ಪಡೆದು ಗ್ರಾಮ ಮಟ್ಟ, ನಾಡ ಕಚೇರಿ, ಜಂಟಿ ಕೃಷಿ ನಿರ್ದೇಶಕರ ಕಚೇರಿ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಹಾಗೂ ಹೋಬಳಿ ಮಟ್ಟದ ಕೃಷಿ ಅಧಿಕಾರಿಗಳ ಮೂಲಕ ನಿಗದಿತ ಅವಧಿಯೊಳಗೆ ಬೆಳೆ ವಿಮೆ ಮಾಡಿಸಿಕೊಳ್ಳಬೇಕು ಎಂದು ಹೇಳಿದರು.
ಮುಂಗಾರು ವಿಳಂಬದಿಂದ ಉಂಟಾಗುವ ನಷ್ಟದಿಂದ ರಕ್ಷಣೆ ಪಡೆಯಲು ರಾಜ್ಯ ಹಾಗೂ ಕೇಂದ್ರ ಸರ್ಕಾರದ ಯೋಜನೆಗಳ ಸೌಲಭ್ಯವನ್ನು ರೈತರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರೈತರು ಸದ್ಯ ಉಳುಮೆ ಮಾಡಬಾರದು ಎಂದು ಹೇಳಿರುವುದನ್ನು ಟೀಕಿಸಿದ ಅವರು, ರಾಜ್ಯದ ಶೇ.70ಕ್ಕೂ ಹೆಚ್ಚು ಜನರು ಕೃಷಿಯನ್ನು ಅವಲಂಬಿಸಿದ್ದಾರೆ. ಬಿತ್ತನೆ ಮಾಡದಿದ್ದರೆ ರೈತರು ಬದುಕುವುದು ಹೇಗೆ? ಸರ್ಕಾರವೇ ಬಿತ್ತನೆ ಮಾಡಬೇಡಿ ಎಂದು ಹೇಳುವುದಾದರೆ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ಘೋಷಿಸಬೇಕು ಎಂದು ಆಗ್ರಹಿಸಿದರು.
ರಾಜ್ಯದಲ್ಲಿ ಇದುವರೆಗೆ ಕೃಷಿ ಸಚಿವರನ್ನು ನೇಮಿಸದಿರುವುದನ್ನೂ ಪ್ರಶ್ನಿಸಿದ ಅವರು, ಕಲ್ಯಾಣ ಕರ್ನಾಟಕ ಭಾಗದ ಬಗ್ಗೆ ಸರ್ಕಾರಕ್ಕೆ ನಿಜವಾದ ಕಾಳಜಿ ಇದ್ದರೆ ಕೂಡಲೇ ಕೃಷಿ ಸಚಿವರನ್ನು ನೇಮಿಸಿ ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.
ಸುರಪುರ ತಾಲ್ಲೂಕಿನ ನಾರಾಯಣಪುರ ಬಸವಸಾಗರ ಜಲಾಶಯದ ವ್ಯಾಪ್ತಿಯಲ್ಲಿ ಸುಮಾರು 4 ಲಕ್ಷ ಹೆಕ್ಟೇರ್ ನೀರಾವರಿ ಪ್ರದೇಶವಿದ್ದರೂ ಜಲಾಶಯಕ್ಕೆ ನೀರಿನ ಒಳಹರಿವು ಶೂನ್ಯವಾಗಿದೆ. ಕುಡಿಯುವ ನೀರಿಗಾಗಿ ಮಾತ್ರ ನೀರನ್ನು ಕಾಯ್ದಿರಿಸಲಾಗಿದ್ದು, ಅಲ್ಪ ಪ್ರಮಾಣದ ಮಳೆಯನ್ನು ನಂಬಿ ಈಗಾಗಲೇ ಶೇ.95ರಷ್ಟು ರೈತರು ಬಿತ್ತನೆ ಮಾಡಿದ್ದಾರೆ. ಮುಖ್ಯಮಂತ್ರಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಭೇಟಿ ನೀಡಿ ರೈತರೊಂದಿಗೆ ವಿಶೇಷ ಸಭೆ ನಡೆಸಿ ಅವರ ಅಹವಾಲು ಆಲಿಸಬೇಕು ಎಂದು ಮಾಗನೂರ ಒತ್ತಾಯಿಸಿದರು.