Yadgiri | ಭೀಮಾನದಿಯಲ್ಲಿ ತೆಪ್ಪ ಉರುಳಿ ಮೀನುಗಾರ ಮೃತ್ಯು
ಯಾದಗಿರಿ : ತಾಲೂಕಿನ ತಳಕ ಗ್ರಾಮದ ಸಮೀಪದ ಭೀಮಾ ನದಿಯಲ್ಲಿ ಮೀನುಗಾರಿಕೆಗೆ ತೆರಳಿದ್ದ ಯುವಕ ತೆಪ್ಪ ಉರುಳಿ ನೀರಲ್ಲಿ ಬಿದ್ದು ಮೃತಪಟ್ಟ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ.
ತಳಕ ಗ್ರಾಮದ ನಿವಾಸಿ ಹಣಮಂತ (ಚಂದಪ್ಪ ಅವರ ಪುತ್ರ) ಮೃತಪಟ್ಟ ಮೀನುಗಾರ. ಕುಟುಂಬದ ಜೀವನೋಪಾಯಕ್ಕಾಗಿ ಹಲವು ವರ್ಷಗಳಿಂದ ಭೀಮಾ ನದಿಯಲ್ಲಿ ಮೀನು ಹಿಡಿಯುತ್ತಿದ್ದ ಹಣಮಂತ ಗುರುವಾರ ಬೆಳಿಗ್ಗೆ ಸುಮಾರು 6.30ಕ್ಕೆ ಮೀನಿನ ಬಲೆ ಬಿಡುವ ವೇಳೆ ಬಿರುಗಾಳಿಯಿಂದ ತೆಪ್ಪ ಉರುಳಿದೆ. ಈ ವೇಳೆ ಮೀನಿನ ಬಲೆ ತಲೆಗೆ ಸುತ್ತಿಕೊಂಡು ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನೆ ತಿಳಿಯುತ್ತಿದ್ದಂತೆ ಗ್ರಾಮಸ್ಥರು ನದಿ ದಡಕ್ಕೆ ಧಾವಿಸಿ ಸಾಮಾಜಿಕ ಹೋರಾಟಗಾರ ಉಮೇಶ್ ಕೆ. ಮುದ್ನಾಳ ಅವರಿಗೆ ಮಾಹಿತಿ ನೀಡಿದರು. ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪೊಲೀಸ್ ಹಾಗೂ ಮೀನುಗಾರಿಕೆ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದರು.
ಬಳಿಕ ಸ್ಥಳಕ್ಕೆ ಆಗಮಿಸಿದ ಯಾದಗಿರಿ ಗ್ರಾಮೀಣ ಪೊಲೀಸ್ ಠಾಣೆ ಅಧಿಕಾರಿಗಳು ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾ ಆಸ್ಪತ್ರೆಗೆ ರವಾನಿಸಿದರು. ಈ ಸಂಬಂಧ ಯಾದಗಿರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಘಟನೆಯ ಬಳಿಕ ಮಾತನಾಡಿದ ಸಾಮಾಜಿಕ ಹೋರಾಟಗಾರ ಉಮೇಶ್ ಕೆ. ಮುದ್ನಾಳ, ಮೃತರ ಕುಟುಂಬ ಅತ್ಯಂತ ಬಡತನದಲ್ಲಿದ್ದು, ಸರ್ಕಾರದಿಂದ ಸೂಕ್ತ ಪರಿಹಾರ ದೊರಕಿಸಲು ಜಿಲ್ಲಾಧಿಕಾರಿ ಹಾಗೂ ಸ್ಥಳೀಯ ಶಾಸಕರ ಗಮನಕ್ಕೆ ತರುವುದಾಗಿ ಹೇಳಿದರು. ಅಲ್ಲದೆ, ಮೃತರ ಕುಟುಂಬಕ್ಕೆ ಅಗತ್ಯ ನೆರವು ಒದಗಿಸುವ ಭರವಸೆ ನೀಡಿದರು.