Yadgiri | ವೃತ್ತಿಧರ್ಮಕ್ಕೆ ಒತ್ತು ನೀಡಿದಾಗಲೇ ನೈಜ ಪತ್ರಿಕೋದ್ಯಮ ಉಳಿಯುತ್ತದೆ: ಶಿವಾನಂದ ತಗಡೂರು

ಜಿಲ್ಲಾ ಮಟ್ಟದ ಪತ್ರಿಕಾ ‌ದಿನಾಚರಣೆ ಕಾರ್ಯಕ್ರಮ

Update: 2026-07-28 17:13 IST

ಯಾದಗಿರಿ: ಯಾರು ಏನೇ ಟೀಕೆ-ಟಿಪ್ಪಣಿ ಮಾಡಿದರೂ ಪತ್ರಕರ್ತರು ವೃತ್ತಿಧರ್ಮಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ನೈಜ ಪತ್ರಿಕೋದ್ಯಮವನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬ ಪತ್ರಕರ್ತನ ಜವಾಬ್ದಾರಿಯಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಹೇಳಿದರು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜಿಲ್ಲಾ ಪತ್ರಿಕಾ ಭವನದಲ್ಲಿ ಮಂಗಳವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪತ್ರಕರ್ತರು ವೃತ್ತಿ ಧರ್ಮವನ್ನು ಕಟ್ಟುನಿಟ್ಟಾಗಿ ಪಾಲಿಸಿದಾಗ ಮಾತ್ರ ನೈಜ ಪತ್ರಿಕೋದ್ಯಮ ಉಳಿಯಲು ಸಾಧ್ಯ. ಇತ್ತೀಚಿನ ದಿನಗಳಲ್ಲಿ ನಕಲಿ ಪತ್ರಕರ್ತರ ಹಾವಳಿ ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದ್ದು, ಇದಕ್ಕೆ ಕಡಿವಾಣ ಹಾಕುವುದು ಅಗತ್ಯವಾಗಿದೆ. ನೈಜ ಪತ್ರಕರ್ತರ ಗೌರವ ಮತ್ತು ಅಸ್ತಿತ್ವವನ್ನು ಕಾಪಾಡಲು ಎಲ್ಲರೂ ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದು ಹೇಳಿದರು.

ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಪತ್ರಿಕಾ ಭವನಗಳನ್ನು ನಿರ್ಮಿಸುವ ಅಗತ್ಯವಿದೆ. ಇದರಿಂದ ಗ್ರಾಮೀಣ ಭಾಗದ ಪತ್ರಕರ್ತರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ತಿಳಿಸಿದರು.

ಸಂಘದ ಪದಾಧಿಕಾರಿಗಳಾಗಿ ಜವಾಬ್ದಾರಿಯಿಂದ ಕೆಲಸ ಮಾಡಲು ಸಾಧ್ಯವಾಗದವರು ರಾಜೀನಾಮೆ ನೀಡಿ ಹೊರಬರಬೇಕು. ಸಂಘದ ಸದಸ್ಯತ್ವ ಪಡೆದ ಬಳಿಕ ಬೇಜವಾಬ್ದಾರಿತನ ತೋರುವುದು ಸರಿಯಲ್ಲ. ಸಂಘದ ವಿರುದ್ಧ ನಡೆದುಕೊಳ್ಳುವವರು ಅಥವಾ ಪತ್ರಕರ್ತರಲ್ಲದವರು ಸಂಘದ ಹೆಸರಿನಲ್ಲಿ ಚಟುವಟಿಕೆ ನಡೆಸಿದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಜಿಲ್ಲಾ ಸಂಘದ ಅಧ್ಯಕ್ಷ ಮಲ್ಲಪ್ಪ ಸಂಕೀನ್ ಅವರು ಹಲವು ಸವಾಲುಗಳ ನಡುವೆಯೂ ಸಂಘವನ್ನು ಮುನ್ನಡೆಸುತ್ತಿದ್ದಾರೆ. ಎಲ್ಲವೂ ಸುಗಮವಾಗಿರುವಾಗ ಅಧ್ಯಕ್ಷರಾಗುವುದು ಸುಲಭ, ಆದರೆ ಸವಾಲುಗಳ ನಡುವೆಯೂ ಸಂಘವನ್ನು ಮುನ್ನಡೆಸುವುದು ದೊಡ್ಡ ಜವಾಬ್ದಾರಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಮಾಹಿತಿ ಆಯೋಗದ ಕಲಬುರಗಿ ಪೀಠದ ಮಾಹಿತಿ ಆಯುಕ್ತ ಬಿ. ವೆಂಕಟಸಿಂಗ್ ಮಾತನಾಡಿ, ಪತ್ರಿಕೋದ್ಯಮವನ್ನು ವೃತ್ತಿಯಾಗಿ ಆಯ್ಕೆ ಮಾಡಿಕೊಂಡಿರುವವರು ಅದರ ಘನತೆಯನ್ನು ಕಾಪಾಡಬೇಕು. ಆಡಳಿತ, ರಾಜಕೀಯ ಸೇರಿದಂತೆ ಎಲ್ಲ ಕ್ಷೇತ್ರಗಳೂ ಸವಾಲುಗಳನ್ನು ಎದುರಿಸುತ್ತಿರುವ ಇಂದಿನ ಸಂದರ್ಭದಲ್ಲಿ ಪತ್ರಕರ್ತರು ಹೆಚ್ಚಿನ ಜಾಗರೂಕತೆಯಿಂದ ಕೆಲಸ ಮಾಡಬೇಕಾಗಿದೆ ಎಂದರು.

ನೈಜ ಪತ್ರಕರ್ತರು ಕಣ್ಮರೆಯಾದರೆ ಪ್ರಜಾಪ್ರಭುತ್ವಕ್ಕೆ ಧಕ್ಕೆಯಾಗುತ್ತದೆ. ತನಿಖಾ ಪತ್ರಿಕೋದ್ಯಮಕ್ಕೆ ಮಾಹಿತಿ ಹಕ್ಕು ಆಯೋಗ (ಆರ್‌ಟಿಐ) ಪ್ರಮುಖ ಅಸ್ತ್ರವಾಗಿದ್ದು, ಅದನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಮಲ್ಲಪ್ಪ ಸಂಕೀನ್ ಮಾತನಾಡಿ, ಹಲವು ಸವಾಲುಗಳ ನಡುವೆಯೂ ಸಂಘವನ್ನು ಮುನ್ನಡೆಸುತ್ತಿದ್ದು, ಮುಂದೆಯೂ ಪತ್ರಕರ್ತರ ಹಕ್ಕುಗಳು ಮತ್ತು ಸೌಲಭ್ಯಗಳಿಗಾಗಿ ಹೋರಾಟ ಮುಂದುವರಿಸುವುದಾಗಿ ಹೇಳಿದರು.

ಕಾರ್ಯಕ್ರಮದಲ್ಲಿ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರನ್ನು ವಿವಿಧ ಸಂಘ-ಸಂಸ್ಥೆಗಳ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಕಲಬುರಗಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಬಾಬುರಾವ್ ಯಡ್ರಾಮಿ, ಹಿರಿಯ ಪತ್ರಕರ್ತರಾದ ಭವಾನಿಸಿಂಗ್ ಠಾಕೂರ್, ದೇವಿಂದ್ರಪ್ಪ ಕಪನೂರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಪತ್ರಕರ್ತ ಸಿದ್ಧರಾಜರೆಡ್ಡಿ ನಿರೂಪಿಸಿ, ವಂದಿಸಿದರು.

ಸಂಘದ ಪದಾಧಿಕಾರಿಗಳಾಗಿ ಕೆಲಸ ಮಾಡಲು ಆಗದಿದ್ದವರು ರಾಜೀನಾಮೆ ಕೊಟ್ಟು ಹೋಗಲಿ. ಸಂಘದ ವಿರುದ್ಧ ನಡವಳಿಕೆ ಮತ್ತು ಚಟುವಟಿಕೆ ನಡೆಸಿದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು.

-ಶಿವಾನಂದ ತಗಡೂರು, ರಾಜ್ಯಾಧ್ಯಕ್ಷರು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News