ವೈದ್ಯರಿಗೆ ಬಿ.ಸಿ. ರಾಯ್ ಮಾದರಿಯಾಗಲಿ

ಎಲ್ಲವೂ ವ್ಯಾಪಾರೀಕರಣವಾಗುತ್ತಿರುವ ಮತ್ತು ಮಾನವೀಯ ಸಂಬಂಧಗಳು ನಶಿಸುತ್ತಿರುವ ಈ ಕಾಲಘಟ್ಟದಲ್ಲಿ ವೈದ್ಯ ಮತ್ತು ರೋಗಿ ಸಂಬಂಧ ಮೊದಲಿನಂತೆ ಉಳಿದಿಲ್ಲ. ‘ವೈದ್ಯೋ ನಾರಾಯಣೋ ಹರಿ’ ಎಂಬ ಮಾತು ಈಗ ಬಹುಶಃ ಎಲ್ಲ ವೈದ್ಯರಿಗೂ ಅನ್ವಯಿಸಲಾರದು. ಅದೇ ರೀತಿ, ಇಂದಿನ ರೋಗಿಗಳು ಕೂಡ ವೈದ್ಯರನ್ನು ಪೂರ್ತಿ ವಿಶ್ವಾಸದಿಂದ ನೋಡುವ ಸ್ಥಿತಿಯಿಲ್ಲಿಲ್ಲ. ತಮ್ಮ ವೃತ್ತಿ ಜೀವನ ಏಳು ಬೀಳುಗಳತ್ತ ದೃಷ್ಟಿ ಹರಿಸಿ ತನ್ನ ತಪ್ಪು ಒಪ್ಪುಗಳನ್ನು ಪುನರ್ ವಿಮರ್ಶಿಸಿಕೊಂಡು ಸಾಧನೆ ಮಜಲುಗಳತ್ತ ಹಿನ್ನೋಟ ಬೀರಿ, ತನ್ನ ತನು ಮನ ಧನಗಳನ್ನು ತನ್ನ ವೃತ್ತಿಗೆ ಪುನಃ ಅರ್ಪಿಸಿಕೊಳ್ಳುವ ದಿನ ಇಂದು.
ಜುಲೈ 1, 1882ರಂದು ಭಾರತ ಕಂಡ ಮಹಾನ್ ವೈದ್ಯ, ಪ್ರಾಮಾಣಿಕ ರಾಜಕಾರಣಿ, ಅಪ್ರತಿಮ ದೇಶಸೇವಕ ಮತ್ತು ಮಹಾನ್ ಸ್ವಾತಂತ್ರ್ಯ ಹೋರಾಟಗಾರ, ಶಿಕ್ಷಣ ತಜ್ಞ ಡಾ. ಬಿದನ್ ಚಂದ್ರ ರಾಯ್ ಜನ್ಮವೆತ್ತ ದಿನ. ಈ ಮಹಾನ್ ಚೇತನದ ನೆನಪಿನ ಕುರುಹಾಗಿ ದೇಶದಾದ್ಯಂತ ಜುಲೈ 1ರಂದು ವೈದ್ಯರ ದಿನ ಎಂದು ಸಂಭ್ರಮದಿಂದ ಆಚರಿಸಲಾಗುತ್ತದೆ. ಸುಮಾರು 80 ವರ್ಷಗಳ ಕಾಲ ತುಂಬು ಜೀವನ ನಡೆಸಿದ ಡಾ. ಬಿ.ಸಿ. ರಾಯ್ ಜೀವನದುದ್ದಕ್ಕೂ ಸರಳ ಮತ್ತು ಉದಾತ್ತ ಜೀವನ ನಡೆಸಿ ಬಡ ಬಗ್ಗರ, ದೀನದಲಿತರ, ನೊಂದ ಜೀವಗಳ ಸಾಂತ್ವನಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದರು. ಬಡವರಿಗೆ ಉಚಿತ ಚಿಕಿತ್ಸೆ ನೀಡಿ ಮಾನವೀಯತೆಯನ್ನು ಜೀವನ ಪರ್ಯಂತ ಮೆರೆದರು. ಗಾಂಧೀಜಿಯವರ ಜೀವನ ಆದರ್ಶಗಳಿಂದ ಬಹಳಷ್ಟು ಪ್ರಭಾವಿತರಾಗಿದ್ದ ಶ್ರೀಯುತರು ಬಡವರ ಉದ್ಧಾರಕ್ಕಾಗಿ ಯಾವತ್ತೂ ಶ್ರಮಿಸುತ್ತಿದ್ದರು. ಬಡವರಿಗಾಗಿ ಬಂಗಾಳದ ಕೋಲ್ಕತಾದಲ್ಲಿ ಆಸ್ಪತ್ರೆಯನ್ನು ತೆರೆದರು.
ಕೋಲ್ಕತಾದಲ್ಲಿ ಪ್ರಾಥಮಿಕ ವೈದ್ಯಕೀಯ ಶಿಕ್ಷಣ ಪಡೆದು ಇಂಗ್ಲೆಂಡ್ನಲ್ಲಿ ಉನ್ನತ ಶಿಕ್ಷಣ ಪಡೆದ ಬಳಿಕ ತಾಯ್ನಾಡಿನ ಸೆಳೆತಕ್ಕೊಳಗಾಗಿ ಭಾರತಕ್ಕೆ ಹಿಂದಿರುಗಿದರು. ತಾವು ನಂಬಿದ ತತ್ವ, ಆದರ್ಶ, ಧ್ಯೇಯಗಳನ್ನು ಬಲಿಗೊಡದೆ ವೈದ್ಯಕೀಯ ವೃತ್ತಿಯನ್ನೂ ಪ್ರಾಮಾಣಿಕವಾಗಿ ನಡೆಸಿ ನುಡಿದಂತೆ ನಡೆದು ಇತರರಿಗೂ ಆದರ್ಶ ಪ್ರಾಯರಾದರು. ಸ್ವಾತಂತ್ರ್ಯಾನಂತರದ ದಿನಗಳಲ್ಲಿ ಗಾಂಧೀಜಿಯವರ ಆದೇಶದಂತೆ ರಾಜಕೀಯ ಪ್ರವೇಶಿಸಿ 1948ರಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿದರು. ಮುಖ್ಯಮಂತ್ರಿಯಾದ ಬಳಿಕವೂ ಹಲವಾರು ಆಸ್ಪತ್ರೆಗಳನ್ನು ತೆರೆದು ಬಡವರಿಗೆ ಉಚಿತ ಚಿಕಿತ್ಸೆಯನ್ನು ನೀಡಿದರು. ಹಲವಾರು ಶಿಕ್ಷಣ ಸಂಸ್ಥೆಗಳನ್ನು ತೆರೆದು ಉಚಿತ ಶಿಕ್ಷಣವನ್ನು ನೀಡಿದರು. ಹೀಗೆ ರಾಜಕೀಯ, ವೈದ್ಯಕೀಯ, ಶಿಕ್ಷಣ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡು 80 ವರ್ಷಗಳ ತುಂಬು ಜೀವನ ನಡೆಸಿ 1962ರ ಜುಲೈ 1ರಂದು ವಿಧಿವಶರಾದರು. ಅವರ ಅಪ್ರತಿಮ ಸೇವೆಗಾಗಿ ಭಾರತ ಸರಕಾರ 1961ರಲ್ಲಿ ಭಾರತ ರತ್ನ ನೀಡಿ ಗೌರವಿಸಿತ್ತು. 1976ರಿಂದ ವೈದ್ಯಕೀಯ ರಂಗದಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದ ವೈದ್ಯರಿಗಾಗಿ ಬಿ.ಸಿ.ರಾಯ್ ಪ್ರಶಸ್ತಿಯನ್ನು ಆರಂಭಿಸಲಾಯಿತು. ಇದು ವೈದ್ಯಕೀಯ ಕ್ಷೇತ್ರದ ಪರಮೋಚ್ಚ ಪ್ರಶಸ್ತಿ ಎಂದರೂ ತಪ್ಪಲ್ಲ. ಇಂತಹ ಮಹಾನ್ ಚೇತನದ ನೆನಪಿಗಾಗಿ ದೇಶದ್ಯಾಂತ ಜುಲೈ 1ರಂದು ವೈದ್ಯರ ದಿನ ಎಂದು ಆಚರಿಸಲಾಗುತ್ತದೆ. ಹಾಗೆಯೇ ದೇಶಾದ್ಯಂತ ವೈದ್ಯ ಬಂಧುಗಳು ತಮ್ಮ ವೃತ್ತಿ ಜೀವನ ಮಜಲುಗಳತ್ತ ದೃಷ್ಟಿ ಹಾಯಿಸಿಕೊಂಡು, ತಪ್ಪನ್ನು ತಿದ್ದಿಕೊಂಡು ಮಾನವಕುಲದ ಸೇವೆಗೆ ತಮ್ಮನ್ನು ಮಗದೊಮ್ಮೆ ಸಮರ್ಪಿಸಿಕೊಳ್ಳುವ ಸುದಿನವೂ ಹೌದು.
ನಮಗೆ ಸ್ವಾತಂತ್ರ್ಯ ಲಭಿಸಿ 79 ವರ್ಷಗಳು ಕಳೆದಿವೆ. ಕಾಲ ಬದಲಾದಂತೆ ನಮ್ಮ ಜೀವನಶೈಲಿ, ಆದರ್ಶಗಳೂ ಬದಲಾಗಿವೆ. ವೈದ್ಯಕೀಯ ಕ್ಷೇತ್ರದಲ್ಲಿ ಅದ್ಭುತ ಕ್ರಾಂತಿಗಳು, ಆವಿಷ್ಕಾರಗಳು ನಡೆದಿವೆ. ಹೊಸ ಹೊಸ ರೋಗಗಳು ಮತ್ತು ಹೊಸ ಹೊಸ ಔಷಧಿಗಳೂ ಹುಟ್ಟಿಕೊಂಡಿವೆ. ಇನ್ನೊಂದೆಡೆ ರೋಗಿ ಮತ್ತು ವೈದ್ಯರ ನಡುವಿನ ಭಾವನಾತ್ಮಕ ಸಂಬಂಧ ಶಿಥಿಲವಾಗುತ್ತಿದೆ. ಇಂದು ವೈದ್ಯಕೀಯ ಕ್ಷೇತ್ರದಲ್ಲಿ ವ್ಯಾಪಾರಿ ಮನೋಭಾವನೆ ಹೆಚ್ಚಾಗುತ್ತಿರುವುದು ವಿಷಾದನೀಯ.
ಮೊದಲೆಲ್ಲಾ ವೈದ್ಯ ವೃತ್ತಿಯನ್ನು ಪವಿತ್ರ ವೃತ್ತಿ ಎಂದು ಕರೆಯಲಾಗುತ್ತಿತ್ತು. ಕಾಲಕ್ರಮೇಣ ಬಹಳಷ್ಟು ಬದಲಾವಣೆಗಳಾದವು. ಎಲ್ಲವೂ ವ್ಯಾಪಾರೀಕರಣವಾಗುತ್ತಿರುವ ಕಾಲಘಟ್ಟದಲ್ಲಿ ವೈದ್ಯಕೀಯ ವೃತ್ತಿಯಲ್ಲಿಯೂ ಬಹಳಷ್ಟು ಪರಿವರ್ತನೆಯಾಯಿತು. ಮೊದಲಿದ್ದ ವೈದ್ಯ-ರೋಗಿಯ ಸಂಬಂಧ ಈಗ ಉಳಿದಿಲ್ಲ. ಎಲ್ಲವನ್ನೂ ಸಂಶಯದ ದೃಷ್ಟಿಯಿಂದ ನೋಡುವ ಕಾಲಘಟ್ಟದಲ್ಲಿ ನಾವಿದ್ದೇವೆ. ಇದರಲ್ಲಿ ರೋಗಿ ಮತ್ತು ವೈದ್ಯರ ಇಬ್ಬರ ತಪ್ಪೂ ಇದೆ. ಪ್ರತೀ ವೈದ್ಯ ತನ್ನ ಇತಿಮಿತಿಯೊಳಗೆ ವೃತ್ತಿ ಧರ್ಮ ಮತ್ತು ರೋಗಿ ತನ್ನ ಹೊಣೆಗಾರಿಕೆಯಿಂದ ವ್ಯವಹರಿಸಿದ್ದಲ್ಲಿ ಈ ರೀತಿಯ ಸಂಘರ್ಷ ತಪ್ಪಿಸಬಹುದು. ಸಾವು ಸಮೀಪಿಸಿದಾಗ ವೈದ್ಯ ದೇವರಾಗಿಯೂ, ಚಿಕಿತ್ಸೆ ಆರಂಭಿಸಿದಾಗ ದೇವಮಾನವನಾಗಿಯೂ, ಚಿಕಿತ್ಸೆ ಫಲಿಸಿದಾಗ ಸಾಮಾನ್ಯ ಮನುಷ್ಯನಾಗಿಯೂ, ಶುಲ್ಕ ಕೇಳಿದಾಗ ಧನದಾಹಿಯಾಗಿಯೂ, ಚಿಕಿತ್ಸೆ ಫಲಿಸದಾಗ ಕೊಲೆಗಡುಕ ಎಂದೂ ಜನರು ವೈದ್ಯರನ್ನು ಹೊಗಳುತ್ತಾರೆ ಮತ್ತು ತೆಗಳುತ್ತಾರೆ. ಆದರೆ ಈ ಎಲ್ಲಾ ಹೊಗಳಿಕೆಗೆ ಹಿಗ್ಗದೆ, ತೆಗಳಿಕೆಗೆ ಕುಗ್ಗದೆ ಸಮಚಿತ್ತದಿಂದ ವರ್ತಿಸಿ ವೃತ್ತಿ ಧರ್ಮವನ್ನು ಪಾಲಿಸಿ ರೋಗಿ ಗುಣಮುಖವಾಗಲು ಪ್ರಾಮಾಣಿಕವಾಗಿ ಪ್ರಯತ್ನಿಸುವವನೇ ನಿಜವಾದ ವೈದ್ಯ. ಅಂತಹ ವೈದ್ಯ ದೇವರಾಗದಿದ್ದರೂ ಮನುಷ್ಯನಾಗುವುದಂತೂ ಖಂಡಿತ ಸತ್ಯ. ಈ ರೀತಿ ತನ್ನ ವೈದ್ಯಕೀಯ ಕ್ಷೇತ್ರದಲ್ಲಿ ರೋಗಿಗಳ ಸೇವೆ ಮಾಡುತ್ತಿರುವ ಸಾವಿರಾರು ವೈದ್ಯರು ನಮ್ಮ ಸಮಾಜದಲ್ಲಿ ಇದ್ದಾರೆ. ಅವರು ಹಾಕಿದ ಆದರ್ಶ ಮತ್ತು ತತ್ವಗಳು ಇತರರಿಗೆ ಮಾದರಿಯಾಗಲಿ. ವೈದ್ಯರ ದಿನದಂದು ನನ್ನೆಲ್ಲಾ ವೈದ್ಯ ಸಹೋದ್ಯೋಗಿ ಬಂಧುಗಳಿಗೆ ಶುಭಾಶಯಗಳು.






