‘ಇನ್ವೆಸ್ಟ್-ಕರ್ನಾಟಕ’ ಹೂಡಿಕೆದಾರರ ಸಮಾವೇಶ: 1 5 ಲಕ್ಷ ಉದ್ಯೋಗ ಸೃಷ್ಟಿ

5 ಲಕ್ಷ ಕೋಟಿ ರೂ.ಬಂಡವಾಳ: ಸಿಎಂ
ಬೆಂಗಳೂರು, ಫೆ.1: ರಾಜ್ಯದಲ್ಲಿ ಮುಂದಿನ 5 ವರ್ಷಗಳಲ್ಲಿ 5 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆಯೊಂದಿಗೆ 15 ಲಕ್ಷ ಉದ್ಯೋಗ ಸೃಷ್ಟಿಸುವ ನಿಗದಿತ ಗುರಿಯನ್ನು ಅವಧಿಗೆ ಒಂದು ವರ್ಷ ಮೊದಲೇ ತಲುಪುವುದು ನಿಶ್ಚಿತ ಎಂದು ಸಿಎಂ ಸಿದ್ದರಾಮಯ್ಯ ಇಂದಿಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸೋಮವಾರ ನಗರದ ಖಾಸಗಿ ಹೊಟೇಲ್ನಲ್ಲಿ ದಿನ ಪತ್ರಿಕೆಗಳು ಹಾಗೂ ಸುದ್ದಿ ವಾಹಿನಿಗಳ ಸಂಪಾದಕರೊಂದಿಗೆ ನಡೆದ ಸಂವಾದದಲ್ಲಿ ಮಾತನಾಡಿದ ಅವರು, ನೂತನ ಕೈಗಾರಿಕಾ ನೀತಿಯನ್ವಯ 5 ಲಕ್ಷ ಕೋಟಿ ರೂ.ಬಂಡವಾಳ ಹೂಡಿಕೆ ಗುರಿ ಹೊಂದಿದ್ದು, ಅದನ್ನು ನಾಲ್ಕು ವರ್ಷಗಳಲ್ಲೇ ತಲುಪುತ್ತೇವೆ ಎಂದು ನುಡಿದರು.
ರಾಜ್ಯದಲ್ಲಿ ಈವರೆಗೂ 1.34ಲಕ್ಷ ಕೋಟಿ ರೂ.ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದ್ದು, ಅನುಷ್ಠಾನದ ವಿವಿಧ ಹಂತದಲ್ಲಿವೆ. ಇದರಿಂದ ರಾಜ್ಯದಲ್ಲಿ 2.5 ಲಕ್ಷಕ್ಕೂ ಅಧಿಕ ಉದ್ಯೋಗಗಳು ಸೃಷ್ಟಿಯಾಗಲಿವೆ. ರಾಜ್ಯದಲ್ಲಿದು ಹೊಸ ದಾಖಲೆಯಾಗಲಿದೆ ಎಂದು ಸಿದ್ಧರಾಮಯ್ಯ ಹೇಳಿದರು.
ಹೂಡಿಕೆಯ ತಾಣ: ಕೈಗಾರಿಕಾ ಸ್ನೇಹಿ ರಾಜ್ಯವಾಗಿರುವ ಕರ್ನಾಟಕ ವಿಫುಲ ನೈಸರ್ಗಿಕ ಹಾಗೂ ಮಾನವ ಸಂಪತ್ತನ್ನು ಹೊಂದಿದ್ದು, ಬಂಡವಾಳ ಹೂಡಿಕೆದಾರರಿಗೆ ನೆಚ್ಚಿನ ತಾಣ. ಎಲ್ಲರನ್ನೂ ಒಳಗೊಂಡ ಸಮರ್ಥನೀಯ ಹಾಗೂ ಸಮತೋಲಿತ ಕೈಗಾರಿಕಾಭಿವೃದ್ಧಿಗೆ ವಿಶೇಷ ಆದ್ಯತೆ ನೀಡಲಾಗಿದೆ ಎಂದು ಹೇಳಿದರು.
ಪ್ರಗತಿಪರ: ಸರಕಾರ ಜಾರಿಗೆ ತಂದಿರುವ ‘ಹೊಸ ಕೈಗಾರಿಕಾ ನೀತಿ’ ದೇಶಕ್ಕೆ ಮಾದರಿಯಾಗಿದೆ. ಹಿಂದುಳಿದ ಜಿಲ್ಲೆಗಳಲ್ಲಿ ಕೈಗಾರಿಕಾಭಿವೃದ್ಧಿ ಹಾಗೂ ಮಹಿಳೆಯರು ಮತ್ತು ಎಸ್ಸಿ-ಎಸ್ಟಿ ವರ್ಗದ ಉದ್ಯಮಿಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಅತ್ಯಂತ ಪ್ರಗತಿಪರ ನೀತಿ ಇದಾಗಿದೆ ಎಂದು ಸಿದ್ದರಾಮಯ್ಯ ಬಣ್ಣಿಸಿದರು.
ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆಗೈದಿರುವ ಬೆಂಗಳೂರು ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಲಾಗಿದ್ದು, ಉತ್ತರ-ದಕ್ಷಿಣ, ಪೂರ್ವ-ಪಶ್ಚಿಮಕ್ಕೆ ಸಂಪರ್ಕ ಕಲ್ಪಿಸುವ ಎಲಿವೇಟೆಡ್ ಕಾರಿಡಾರ್, ಪೆರಿಫೆರಲ್ ರಸ್ತೆ ನಿರ್ಮಾಣ, ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಿದ್ದರಾಮಯ್ಯ ವಿವರಿಸಿದರು.
‘ಇನ್ವೆಸ್ಟ್-ಕರ್ನಾಟಕ’ ಹೂಡಿಕೆದಾರರ ಸಮಾವೇಶದಲ್ಲಿ ಒಪ್ಪಂದ ಮಾಡಿಕೊಳ್ಳುವ ಕಂಪೆನಿಗಳಿಗೆ ಅಗತ್ಯ ಭೂಮಿ ನೀಡಲು ಈಗಾಗಲೇ ಕೆಐಎಡಿಬಿ ಬಳಿ 30 ಸಾವಿರ ಎಕರೆ ಭೂಮಿಯನ್ನು ಕಾಯ್ದಿರಿಸಲಾಗಿದೆ.
ಕೈಗಾರಿಕೆಗಳ ಸ್ಥಾಪನೆಗೆ ಭೂಮಿಯ ಕೊರತೆ ರಾಜ್ಯದಲ್ಲಿಲ್ಲ ಎಂದು ಸಿದ್ದರಾಮಯ್ಯ ಇದೇ ವೇಳೆ ಪ್ರಶ್ನೆಯೊಂದಕ್ಕೆ ಸ್ಪಷ್ಟನೆ ನೀಡಿದರು.
ಹೊರ ಹೋಗಿಲ್ಲ: ಕೋರ್ಟ್ ತೀರ್ಪಿನಿಂದ ಉಕ್ಕು ಉತ್ಪಾದನಾ ಕಂಪೆನಿಗಳು ಹಿಂದೆ ಸರಿದಿರುವುದನ್ನು ಹೊರತುಪಡಿಸಿದರೆ ರಾಜ್ಯದಿಂದ ಯಾವುದೇ ಕೈಗಾರಿಕೆಗಳು ಹೊರಹೋಗಿಲ್ಲ. ನೆರೆಯ ಆಂಧ್ರದ 40ಕ್ಕೂ ಹೆಚ್ಚು ಔಷಧ ಉದ್ದಿಮೆ ಕಂಪೆನಿಗಳಿಗೆ ಹಾಗೂ ಹಿಂದೂಸ್ಥಾನ್, ಕೋಕಾಕೋಲಾ ಕಂಪೆನಿಗೆ ಭೂಮಿ ನೀಡಲಾಗಿದೆ ಎಂದು ತಿಳಿಸಿದರು.
ಸ್ಥಳೀಯರಿಗೆ ಉದ್ಯೋಗ: ಕೈಗಾರಿಕೆಗಳಲ್ಲಿ ಕಡ್ಡಾಯವಾಗಿ ಸ್ಥಳೀಯರಿಗೆ ಉದ್ಯೋಗ ನೀಡಬೇಕೆಂಬ ಷರತ್ತನ್ನು ವಿಧಿಸಲಾಗುತ್ತಿದೆ. ಅಲ್ಲದೆ, ಕೈಗಾರಿಕೆಗಾಗಿ ಭೂಮಿ ಕಳೆದುಕೊಳ್ಳುವವರಿಗೆ ಶೇ.100ರಷ್ಟು ಉದ್ಯೋಗ ನೀಡಲೇಬೇಕೆಂದು ಸೂಚನೆ ನೀಡಲಾಗುತ್ತಿದೆ ಎಂದು ಸಿದ್ದರಾಮಯ್ಯ ನುಡಿದರು.
ಈ ವೇಳೆ ಬೃಹತ್ ಕೈಗಾರಿಕಾ ಸಚಿವ ಆರ್.ವಿ.ದೇಶಪಾಂಡೆ, ಮೂಲಸೌಕರ್ಯ ಅಭಿವೃದ್ಧಿ ಸಚಿವ ಆರ್.ರೋಷನ್ ಬೇಗ್, ಮಾಹಿತಿ ತಂತ್ರಜ್ಞಾನ ಸಚಿವ ಎಸ್. ಆರ್.ಪಾಟೀಲ್, ಕಾನೂನು ಮತ್ತು ಸಂಸದೀಯ ವ್ಯವಹಾರ ಖಾತೆ ಸಚಿವ ಟಿ.ಬಿ. ಜಯಚಂದ್ರ, ಮೇಲ್ಮನೆ ಸದಸ್ಯ ಗೋವಿಂದರಾಜು, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಅರವಿಂದ್ ಜಾಧವ್, ವಾಣಿಜ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ರತ್ನಪ್ರಭಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.







