ಯುವಕರನ್ನು ದಾರಿ ತಪ್ಪಿಸುತ್ತಿರುವ ಆರೆಸ್ಸೆಸ್, ಎಬಿವಿಪಿ: ಸಚಿವ ಡಾ.ಪರಮೇಶ್ವರ್ ಆಕ್ರೋಶ

ಬೆಂಗಳೂರು, ಫೆ.20: ಸಂಘಪರಿವಾರ ಹಾಗೂ ಎಬಿವಿಪಿ ಮೂಲಕ ವಿದ್ಯಾರ್ಥಿಗಳ ವಾಕ್ ಹಾಗೂ ಅಭಿವ್ಯಕ್ತಿ ಸ್ವಾತಂತ್ರವನ್ನು ಹತ್ತಿಕ್ಕುವ ಕೆಲಸವಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಕಿಡಿಕಾರಿದ್ದಾರೆ.
ಶನಿವಾರ ನಗರದ ಕ್ವೀನ್ಸ್ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಜವಾಹರ್ಲಾಲ್ ನೆಹರು ವಿಶ್ವವಿದ್ಯಾನಿಲಯದಲ್ಲಿ ನಡೆದಿರುವ ಘಟನೆ ಅತ್ಯಂತ ಖಂಡನಾರ್ಹ. ವಿವಿಗಳನ್ನು ತನ್ನ ಗುಪ್ತ ಕಾರ್ಯಸೂಚಿ ಅನುಷ್ಠಾನಗೊಳಿಸುವ ಕೇಂದ್ರ ಸ್ಥಾನಗಳನ್ನಾಗಿ ಪರಿವರ್ತಿಸಲು ಬಿಜೆಪಿ ಮುಂದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಆರೆಸ್ಸೆಸ್ ಹಾಗೂ ಎಬಿವಿಪಿ ಮೂಲಕ ದೇಶದ ಯುವಕರನ್ನು ವ್ಯವಸ್ಥೆಯ ವಿರುದ್ಧ ಎತ್ತಿಕಟ್ಟಲಾಗುತ್ತಿದೆ. ಜೆಎನ್ಯು ಆವರಣದಲ್ಲಿ ದೇಶದ್ರೋಹಿ ಘೋಷಣೆ ಗಳನ್ನು ಕೂಗಿದ ಆರೋಪಿಗಳನ್ನು ಬಂಧಿಸಿ, ಅವರನ್ನು ಕಾನೂನಿನ ಚೌಕಟ್ಟಿನಲ್ಲಿ ತರಲು ದಿಲ್ಲಿಯ ಪೊಲೀಸರಿಗೆ ಈವರೆಗೆ ಸಾಧ್ಯವಾಗಿಲ್ಲ ಎಂದು ಪರಮೇಶ್ವರ್ ಹೇಳಿದರು. ಉಪ ಚುನಾವಣೆ ಸೋಲು
ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಬಹುದು ಎಂಬ ಆಶಯವಿತ್ತು. ಆದರೆ, ಬಿಜೆಪಿ ವಶದಲ್ಲಿದ್ದ ಬೀದರ್ ಕ್ಷೇತ್ರವನ್ನು ಮಾತ್ರ ನಾವು ಗೆಲ್ಲಲು ಸಾಧ್ಯವಾಯಿತು. ದೇವದುರ್ಗ ಹಾಗೂ ಹೆಬ್ಬಾಳ ಕ್ಷೇತ್ರದ ಸೋಲಿನ ಕುರಿತು ಜಿಲ್ಲಾ ಕಾಂಗ್ರೆಸ್ ಸಮಿತಿಗಳು ವರದಿ ಸಲ್ಲಿಸಿದ್ದು, ಈ ಸಂಬಂಧ ಪಕ್ಷದ ಕಾರ್ಯಕಾರಿಣಿ ಸಭೆಯಲ್ಲಿ ಪರಾಮರ್ಶಿಸುತ್ತೇವೆ ಎಂದು ಅವರು ಹೇಳಿದರು.
ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 3.76 ಲಕ್ಷ ಮತಗಳು ಚಲಾವಣೆಯಾಗಿದ್ದು, ಈ ಪೈಕಿ ಕಾಂಗ್ರೆಸ್ಗೆ 1.67 ಲಕ್ಷ, ಬಿಜೆಪಿಗೆ 1.80 ಲಕ್ಷ ಹಾಗೂ ಜೆಡಿಎಸ್ಗೆ 17,243 ಮತಗಳು ಬಂದಿವೆ. ಶೇಕಡವಾರು ಮತಗಳ ಪೈಕಿ ಕಾಂಗ್ರೆಸ್ಗೆ 44, ಬಿಜೆಪಿಗೆ 48 ಹಾಗೂ ಜೆಡಿಎಸ್ಗೆ ಶೇ.4ರಷ್ಟು ಮತಗಳು ಸಿಕ್ಕಿವೆ ಎಂದು ಪರಮೇಶ್ವರ್ ತಿಳಿಸಿದರು.
ರಾಜ್ಯ ಸರಕಾರದ ಕಾರ್ಯಕ್ರಮಗಳು ಹಾಗೂ ಯೋಜನೆಗಳು ಜನಸಾಮಾನ್ಯರಿಗೆ ತಲುಪಿದ್ದು, ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಕ್ಕಿಂತ ಹೆಚ್ಚಿನ ಸ್ಥಾನಗಳನ್ನು ಕಾಂಗ್ರೆಸ್ ಗೆಲ್ಲಲಿದೆ. ಅಲ್ಲದೆ, ಅತೀ ಹೆಚ್ಚು ಜಿಲ್ಲಾ ಹಾಗೂ ತಾಲೂಕು ಪಂಚಾಯತ್ಗಳಲ್ಲಿ ಅಧಿಕಾರದ ಚುಕ್ಕಾಣಿಯನ್ನು ಕಾಂಗ್ರೆಸ್ ಹಿಡಿಯಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಕೆಪಿಸಿಸಿ ಉಪಾಧ್ಯಕ್ಷ ಪ್ರೊ.ಬಿ.ಕೆ.ಚಂದ್ರಶೇಖರ್ ಮಾತನಾಡಿ, ಸಂಘಪರಿವಾರವೇನಾದರೂ ನರೇಂದ್ರಮೋದಿಗೆ ಈ ವಿಚಾರದಲ್ಲಿ ಯಾವುದೆ ಪ್ರತಿಕ್ರಿಯೆ ನೀಡಬಾರದು ಎಂದು ಸುಮ್ಮನಾಗಿಸಿದೆಯೆ ಅಥವಾ ಅವರು ಬಲಹೀನರಾಗಿದ್ದಾರೆಯೆ ಎಂಬುದು ಗೊತ್ತಾಗು ತ್ತಿಲ್ಲ. ಪೊಲೀಸರು ಏಕಪಕ್ಷೀಯವಾಗಿ ವರ್ತನೆ ಮಾಡುತ್ತಿದ್ದಾರೆ. ದಿಲ್ಲಿಯ ಪೊಲೀಸ್ ಆಯುಕ್ತ ಖಾಕಿ ಸಮವಸ್ತ್ರದಲ್ಲಿರುವ ರಾಜಕಾರಣಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪಟಿಯಾಲ ನ್ಯಾಯಾಲಯದಲ್ಲಿ ಜೆಎನ್ಯು ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯಾಕುಮಾರ್ ವಿಚಾರಣೆ ನಡೆಯುವಾಗ ನ್ಯಾಯಾಲಯದ ಆವರಣದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡಬೇಕಾದದ್ದು ನಿಮ್ಮ ಜವಾಬ್ದಾರಿ ಎಂದು ದಿಲ್ಲಿಯ ಪೊಲೀಸ್ ಆಯುಕ್ತರಿಗೆ ಸುಪ್ರೀಂಕೋರ್ಟ್ ಸೂಚನೆ ನೀಡಿತ್ತು. ಆದರೂ, ನ್ಯಾಯಾಲಯದ ಆವರಣದಲ್ಲಿ ವಿದ್ಯಾರ್ಥಿಗಳು ಹಾಗೂ ಪತ್ರಕರ್ತರ ಮೇಲೆ ಹಲ್ಲೆ ನಡೆದಿದೆ.
ಜೆಎನ್ಯು ಘಟನೆ ವಿರುದ್ಧ ಶಾಂತಯುತ ಪ್ರತಿಭಟನೆಗೆ ಕರೆ
ಜೆಎನ್ಯು ಆವರಣದಲ್ಲಿ ನಡೆದಂತಹ ಘಟನೆಯನ್ನು ವಿರೋಧಿಸಿ ರಾಜ್ಯದ ಎಲ್ಲ ವಿಶ್ವವಿದ್ಯಾನಿಲಯಗಳಲ್ಲಿ ವಿದ್ಯಾರ್ಥಿಗಳು ಶಾಂತಯುತ ಪ್ರತಿಭಟನೆ ನಡೆಸುವ ಮೂಲಕ ತಮ್ಮ ಅಸಮಾಧಾನವನ್ನು ಕೇಂದ್ರ ಸರಕಾರಕ್ಕೆ ಮನದಟ್ಟು ಮಾಡಿಕೊಡಬೇಕು ಎಂದು ಅವರು ಕರೆ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ವಿಧಾನಪರಿಷತ್ ಸದಸ್ಯ ಎಂ.ನಾರಾಯಣಸ್ವಾಮಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಬಿಜೆಪಿ ಹಾಗೂ ಆರೆಸ್ಸೆಸ್ ತನ್ನ ಕಾರ್ಯಸೂಚಿಯನ್ನು ಗುಪ್ತವಾಗಿಟ್ಟಿಲ್ಲ. ಇದೀಗ ಬಹಿರಂಗವಾಗಿಯೆ ಅದನ್ನು ಅನುಷ್ಠಾನಗೊಳಿಸಲು ಪ್ರಯತ್ನ ಪಡುತ್ತಿದೆ. ಜೆಎನ್ಯು ಆವರಣದಲ್ಲಿ ನಡೆದಂತಹ ಘಟನೆಯು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುತ್ತಿದ್ದರೂ ನಮ್ಮ ಪ್ರಧಾನಿ ನರೇಂದ್ರಮೋದಿ ಮಾತ್ರ ಯಾಕೆ ದಿವ್ಯವೌನ ವಹಿಸಿದ್ದಾರೆ ಎಂಬುದು ಅರ್ಥವಾಗುತ್ತಿಲ್ಲ. ಪ್ರೊ.ಬಿ.ಕೆ.ಚಂದ್ರಶೇಖರ್, ಕೆಪಿಸಿಸಿ ಉಪಾಧ್ಯಕ್ಷ.







