‘ಉಳಿಸಿದ ಹನಿ ನೀರು ಭವಿಷ್ಯದಲ್ಲಿ ಜೀವಜಲ’
ಬೆಂಗಳೂರು, ಮಾ. 22: ವಿಶ್ವದ ಎಲ್ಲೆಡೆ ನೀರಿನ ಸಮಸ್ಯೆಬಿಗಡಾಯಿಸುತ್ತಿರುವ ಹಿನ್ನೆಲೆಯಲ್ಲಿ ಭವಿಷ್ಯದ ದೃಷ್ಟಿಯಿಂದ ಪ್ರತಿಯೊಬ್ಬರು ನೀರನ್ನು ಸಂರಕ್ಷಿಸುವಂತೆ ಹಾಗೂ ಉಳಿಸುವಂತೆ ಗಮನ ಹರಿಸಬೇಕಾಗಿದ್ದು ಇಂದು ಉಳಿಸಿದ ಹನಿ ನೀರು ಭವಿಷ್ಯದಲ್ಲಿ ಜೀವ ಜಲವಾಗಲಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ರಮೇಶ್ ಅಭಿಪ್ರಾಯಪಟ್ಟಿದ್ದಾರೆ.
ಮಂಗಳವಾರ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಲ ಸಂಪನ್ಮೂಲ ಇಲಾಖೆ ಹಾಗೂ ಸಣ್ಣ ನೀರಾವರಿ ಇಲಾಖೆಗಳ ವತಿಯಿಂದ ಬೆಂ.ಗ್ರಾ.ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ವಿಶ್ವ ಜಲ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ನೀರು ಉಳಿಸಿ ಜೀವ ಉಳಿಸಿ ಜನ ಜಾಗತಿ ಜಾಥಾ ಉದ್ಘಾಟಿಸಿ ಅವರು ಮಾತನಾಡಿದರು.
ನೀರಿನ ಮಹತ್ವ ಮತ್ತು ಉಳಿಸಿ ಸಂರಕ್ಷಿಸುವ ಕಡೆ ಜನರಲ್ಲಿ ಜಾಗೃತಿ ಮೂಡಿಸಲು ಈ ಜಾಥಾ ಹಮ್ಮಿಕೊಳ್ಳಲಾಗಿದೆ. ನೀರಿನ ಮಹತ್ವ ಮತ್ತು ಅದರ ಸದ್ಬಳಕೆ ಹಾಗೂ ಭವಿಷ್ಯದ ದೃಷ್ಟಿಯಿಂದ ನೀರಿನ ಸಂರಕ್ಷಣೆಯ ಮಹತ್ವವನ್ನು ಜನರಿಗೆ ಅರಿವು ಮೂಡಿಸಲಾಗುವುದು ಎಂದರು.ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಎಸ್.ಪಾಲಯ್ಯ ಜಾಥಾ ವಾಹನಗಳಿಗೆ ಹಸಿರು ನಿಶಾನೆ ತೋರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.





