ಎ.1ರಂದು ಸು.ಕೋರ್ಟ್ ವಿಚಾರಣೆ
ಕರ್ನಾಟಕ- ಮಹಾ ಗಡಿ ಸಮಸ್ಯೆ
ಬೆಳಗಾವಿ, ಮಾ.26: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಕುರಿತು ಮಹಾರಾಷ್ಟ್ರ ಸರಕಾರವು ಸುಪ್ರೀಂಕೋರ್ಟ್ನಲ್ಲಿ ಸಲ್ಲಿಸಿರುವ ಪ್ರಕರಣವು ಎ.1ರಂದು ವಿಚಾರಣೆಗೆ ಬರಲಿದ್ದು, ರಾಜ್ಯ ಸರಕಾರ ಇದಕ್ಕೆ ಸಂಬಂಧಿಸಿದಂತೆ ಎಲ್ಲ ರೀತಿಯ ಕಾನೂನಾತ್ಮಕ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ಗಡಿ ಸಂರಕ್ಷಣಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ.
ಸುಪ್ರೀಂಕೋರ್ಟ್ನಲ್ಲಿ ಪ್ರಕರಣ ವಿಚಾರಣೆಗೆ ಬರುತ್ತಿರುವ ಹಿನ್ನೆಲೆಯಲ್ಲಿ ಶನಿವಾರ ಕನ್ನಡಪರ ಸಂಘಟನೆಗಳು, ಸಾಹಿತಿಗಳು, ಬರಹಗಾರರು, ಕನ್ನಡ ಹೋರಾಟಗಾರರು ಮತ್ತು ಕಲಾವಿದರ ಸಭೆ ನಡೆಸಿ ಅವರು ಮಾತನಾಡಿದರು.
ಈ ವಿಷಯಕ್ಕೆ ಸಂಬಂಧಿಸಿದಂತೆ ಈಗಾಗಲೇ ಕಾನೂನು ತಜ್ಞರೊಂದಿಗೆ ಎರಡು ಸುತ್ತಿನ ಮಾತುಕತೆ ಯನ್ನು ನಡೆಸಲಾಗಿದೆ. ಕನ್ನಡಿಗರು ಯಾವುದೇ ಆತಂಕಕ್ಕೆ ಒಳಗಾಗುವ ಆವಶ್ಯಕತೆಯಿಲ್ಲ ಎಂದು ಅವರು ತಿಳಿಸಿದರು.
ರಾಜ್ಯಕ್ಕೆ ಸಂಬಂಧಿಸಿದಂತೆ ಮಹಾಜನ ವರದಿಯೆ ಅಂತಿಮ ಅಥವಾ ಯಥಾಸ್ಥಿತಿ ಮುಂದುವರಿಯುವುದು ರಾಜ್ಯದ ನಿಲುವಾಗಿದೆ. ಕರ್ನಾಟಕ ಅನವಶ್ಯಕವಾಗಿ ಯಾರೊಂದಿಗೂ ಜಗಳ ಹಾಗೂ ತಗಾದೆ ತೆಗೆಯುವ ರಾಜ್ಯವಲ್ಲ. ನಮ್ಮ ನಿಲುವಿಗೆ ವಿರುದ್ಧವಾಗಿ ಯಾರಾ ದರೂ ಬಂದರೆ ಅದಕ್ಕೆ ಸೂಕ್ತವಾಗಿ ಪ್ರತಿಕ್ರಿಯಿಸುವ ಜನ ನಾವಾಗಿದ್ದೇವೆ ಎಂದು ಅವರು ತಿಳಿಸಿದರು.
ನಾಡಿನ ನೆಲ-ಜಲ ರಕ್ಷಣೆಗೆ ಸರಕಾರವು ಎಲ್ಲ ರೀತಿಯ ಕ್ರಮಗಳನ್ನು ತೆಗೆದುಕೊಂಡಿದೆ. ಗಡಿ ವಿಷಯಕ್ಕೆ ಸಂಬಂಧಿಸಿದಂತೆ ಮಹಾಜನ ವರದಿಯನ್ನು ಒಪ್ಪಿಕೊಳ್ಳಲಾಗುವುದು ಎಂದು ಕರ್ನಾಟಕ ಹಾಗೂ ಮಹಾರಾಷ್ಟ್ರ ಅಂದು ಒಪ್ಪಿಕೊಂಡಿದ್ದವು. ಆದರೆ, ವರದಿ ಸಲ್ಲಿಕೆ ನಂತರ ಮಹಾರಾಷ್ಟ್ರ ಮಹಾಜನ ವರದಿಯನ್ನು ತಿರಸ್ಕರಿಸುವಂತೆ ಒತ್ತಾಯಿಸುತ್ತಿರುವುದು ದುರದೃಷ್ಟಕರ ಎಂದು ಎಚ್.ಕೆ.ಪಾಟೀಲ್ ಹೇಳಿದರು.
ಸಂವಿಧಾನದಲ್ಲಿಯೂ ಗಡಿರೇಖೆಯನ್ನು ಅಂತಿಮ ಗೊಳಿಸುವ ಅಧಿಕಾರ ಸಂಸತ್ತಿಗೆ ಮಾತ್ರ ಇದೆ ಎಂಬುದು ಸ್ಪಷ್ಟವಾಗಿದ್ದು, ಇದು ಸುಪ್ರೀಂಕೋರ್ಟ್ ವ್ಯಾಪ್ತಿಗೆ ಬರುತ್ತದೊ ಇಲ್ಲವೊ ಎಂಬ ವಿಷಯವನ್ನು ನಾವು ಇಲ್ಲಿ ಚರ್ಚಿಸುವುದು ಬೇಡ ಎಂದು ಅವರು ತಿಳಿಸಿದರು.
ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ನಲ್ಲಿ ಕಾನೂನಾತ್ಮಕ ಹೋರಾಟವನ್ನು ಮಾಡಲು ರಾಜ್ಯವು ತಜ್ಞ ಮತ್ತು ಹಿರಿಯ ವಕೀಲರನ್ನೆ ನೇಮಕ ಮಾಡಿದೆ. ಗಡಿ ಸಮಸ್ಯೆ ಕುರಿತು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಿಸ್ತೃತವಾಗಿ ಚರ್ಚೆ ಯನ್ನು ಮಾಡಲಾಗಿದೆ ಎಂದು ಎಚ್.ಕೆ.ಪಾಟೀಲ್ ಹೇಳಿದರು.
ಬೆಳಗಾವಿ ನಗರ ಹಾಗೂ ಜಿಲ್ಲೆಯ ಜನರು 1970 ರಿಂದಲೂ ಈ ಭಾಗದಲ್ಲಿ ಜಾಗೃತರಾಗಿ ಕೆಲಸವನ್ನು ಮಾಡುತ್ತಿದ್ದಾರೆ. ಕನ್ನಡಪರ ಸಂಘಟನೆಗಳ ಹೋರಾಟ ನಿಜಕ್ಕೂ ಪ್ರಶಂಸನೀಯ. ಈ ಭಾಗದ ಜನರ ಸಲಹೆ-ಅಭಿಪ್ರಾಯ ಪಡೆದು ಕಾನೂನಾತ್ಮಕ ಹೋರಾಟಕ್ಕೆ ಅವುಗಳನ್ನು ಬಳಸಿಕೊಳ್ಳಲಾಗುವುದು. ಗಡಿ ವಿವಾದಕ್ಕೆ ಸಂಬಂಧಿಸಿದ ಯಾವುದೇ ದಾಖಲಾತಿ ಗಳಿದ್ದಲ್ಲಿ ಅವುಗಳನ್ನು ಗಡಿ ಸಲಹಾ ಸಮಿತಿಗೆ ಸಲ್ಲಿಸು ವಂತೆ ಅವರು ಮನವಿ ಮಾಡಿದರು.
ಸಭೆಯಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ಸ್ಥಳೀಯ ಕನ್ನಡಪರ ಸಂಘಟನೆಗಳ ವಿಶ್ವಾಸವನ್ನು ಪಡೆದುಕೊಂಡು ರಾಜ್ಯ ಸರಕಾರ ಈ ವಿಷಯದಲ್ಲಿ ತನ್ನ ಹೋರಾಟವನ್ನು ಮುಂದುವರಿಸಲಿದೆ ಎಂದು ಹೇಳಿದರು.
ಸಭೆಯಲ್ಲಿ ಸಂಸದ ಸುರೇಶ್ ಅಂಗಡಿ, ರಾಜ್ಯಸಭಾ ಸದಸ್ಯ ಪ್ರಭಾಕರ್ ಕೋರೆ, ಚಿಂಚಣಿ ಶ್ರೀ ಅಲ್ಲಮಪ್ರಭುಸ್ವಾಮಿ, ಸರಕಾರದ ಮುಖ್ಯಸಚೇತಕ ಅಶೋಕ ಪಟ್ಟಣ್, ಶಾಸಕರಾದ ಸಂಜಯ ಪಾಟೀಲ್, ಮಹಾಂತೇಶ ಕೌಜಲಗಿ, ಪಿ.ರಾಜೀವ್, ಜಿಲ್ಲಾಧಿಕಾರಿ ಎನ್.ಜಯರಾಮ್ ಹಾಗೂ ಇತರ ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಭಾಗವಹಿಸಿದ್ದರು.





