ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆ : ಸಂಪೂರ್ಣ ಸುರಕ್ಷಾ ಯೋಜನೆ ವಿಸ್ತರಣೆ
ಬೆಳ್ತಂಗಡಿ, ಮಾ. 29: ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಪಾಲುದಾರ ಸದಸ್ಯರು ಮತ್ತು ಕ್ಷೇತ್ರದ ಸಿಬ್ಬಂದಿಗೆ ಮಾತ್ರ ಪ್ರಸ್ತುತ ಇರುವ ಸಂಪೂರ್ಣ ಸುರಕ್ಷಾ ಯೋಜನೆಯನ್ನು ಮುಂದಿನ ವರ್ಷ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಅನುಷ್ಠಾನಗೊಳಿಸಲಾಗುವುದು. ಇದರಿಂದಾಗಿ 3.25 ಲಕ್ಷ ಕುಟುಂಬಗಳ 11.95 ಲಕ್ಷ ಸದಸ್ಯರಿಗೆ ವಿಮಾ ಸೌಲಭ್ಯ ದೊರಕಲಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ತಿಳಿಸಿದರು.
ಧರ್ಮಸ್ಥಳದಲ್ಲಿ ತಮ್ಮ ನಿವಾಸದಲ್ಲಿ ಅವರು ಮಂಗಳವಾರ ನಾಲ್ಕು ವಿಮಾ ಕಂಪನಿಗಳಿಗೆ ಮುಂದಿನ ವರ್ಷದ ವಿಮಾ ಸೌಲಭ್ಯ ನೀಡುವುದಕ್ಕಾಗಿ 45.40 ಕೋಟಿ ರೂ. ಪ್ರೀಮಿಯಂ ಹಸ್ತಾಂತರಿಸಿ ಮಾತನಾಡಿದರು.
ಸದಸ್ಯರಾದವರಿಗೆ ರಿಯಾಯಿತಿ ದರದಲ್ಲಿ ನಗದು ರಹಿತ ಚಿಕಿತ್ಸೆ ನೀಡುವುದಕ್ಕಾಗಿ ಈಗಾಗಲೇ 150 ಅಸ್ಪತ್ರೆಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಫಲಾನುಭವಿಗಳ ಆರೋಗ್ಯ ಸಮಸ್ಯೆಯಿಂದಾಗುವ ಆರ್ಥಿಕ ಹೊರೆಯನ್ನು ತಗ್ಗಿಸುವ ಉದ್ದೇಶದಿಂದ ಹೆಗ್ಗಡೆಯವರು 2004ರಲ್ಲಿ ಆರಂಭಿಸಿದ ಸಂಪೂರ್ಣ ಸುರಕ್ಷಾ ಯೋಜನೆಯಡಿಯಲ್ಲಿ ಕಳೆದ 12 ವರ್ಷಗಳಲ್ಲಿ 7.75 ಲಕ್ಷ ಜನರಿಗೆ 332 ಕೋಟಿ ರೂ. ಮೌಲ್ಯದ ವಿವಿಧ ಸೌಲಭ್ಯಗಳನ್ನು ನೀಡಲಾಗಿದೆ.
ಹೇಮಾವತಿ ವಿ. ಹೆಗ್ಗಡೆ ಮತ್ತು ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್.ಎಚ್. ಮಂಜುನಾಥ್ ಉಪಸ್ಥಿತರಿದ್ದರು.