ಆರ್ಟಿಐ ಕಾರ್ಯಕರ್ತನ ಕೊಲೆ ಪ್ರಕರಣ
ಯುವ ಬ್ರಿಗೇಡ್ ಮುಖಂಡನ ಬಂಧನಕ್ಕೆ ಆಗ್ರಹ
ಮಂಗಳೂರು, ಎ.4: ಹತ್ಯೆಗೊಳಗಾದ ಆರ್ಟಿಐ ಕಾರ್ಯಕರ್ತ ವಿನಾಯಕ್ ಬಾಳಿಗಾರ ಕುಟುಂಬಕ್ಕೆ ಸರಕಾರ ಪರಿಹಾರವನ್ನು ನೀಡಬೇಕು. ಪ್ರಕರಣದಲ್ಲಿ ಭಾಗಿಯಾಗಿರುವ ಯುವ ಬ್ರಿಗೇಡ್ ಮುಖಂಡ ನರೇಶ್ ಶೆಣೈಯನ್ನು ಕೂಡಲೇ ಪತ್ತೆಹಚ್ಚಿ ಬಂಧಿಸಬೇಕು ಎಂದು ಸಿಪಿಎಂ ರಾಜ್ಯ ಕಾರ್ಯದರ್ಶಿ ಜಿ.ವಿ. ಶ್ರೀರಾಮರೆಡ್ಡಿ ಆಗ್ರಹಿಸಿದ್ದಾರೆ.
ಹತ್ಯೆಗೀಡಾದ ಆರ್ಟಿಐ ಕಾರ್ಯಕರ್ತ ವಿನಾಯಕ್ ಅವರ ಮನೆಗೆ ಸೋಮವಾರ ಭೇಟಿ ನೀಡಿ ವಿನಾಯಕ್ ಬಾಳಿಗಾರ ತಂದೆ, ತಾಯಿ, ಸಹೋದರಿಗೆ ಸಾಂತ್ವನ ಹೇಳಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ವಿನಾಯಕ್ ಬಾಳಿಗಾರನ್ನು ಹತ್ಯೆ ಮಾಡಿರುವುದನ್ನು ಗಮನಿಸಿದಾಗ ರಾಜಕೀಯವಾಗಿ ಬೆಂಬಲ ಇರುವವರು ಈ ರೀತಿ ಮಾಡಿದ್ದಾರೆ ಎಂಬುದು ಮೇಲ್ನೋಟಕ್ಕೆ ಗೊತ್ತಾಗುತ್ತದೆ. ಈ ಬಗ್ಗೆ ತಕ್ಷಣ ತನಿಖೆ ನಡೆಸಿ ಆರೋಪಿಗಳನ್ನು ಪತ್ತೆಹಚ್ಚಿ ಕ್ರಮಕೈಗೊಳ್ಳಬೇಕು. ಆರ್ಟಿಐ ಭ್ರಷ್ಟಾಚಾರ ಬಯಲಿಗೆಳೆಯಲು ಅಸ್ತ್ರವಾಗಿದ್ದು ಆರ್.ಟಿ.ಐ ಕಾರ್ಯಕರ್ತರನ್ನು ಈ ರೀತಿ ಮಾಡಿದರೆ ಭ್ರಷ್ಟಾಚಾರವನ್ನು ಬಯಲಿಗೆಳೆಯಲು ಹಿಂದೆ ಮುಂದೆ ನೋಡಬೇಕಾದ ಪರಿಸ್ಥಿತಿ ನಿರ್ಮಾಣವಾಗಲಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಮೋ ಬ್ರಿಗೇಡ್ ನಾಯಕ ನರೇಶ್ ಶೆಣೈಗೆ ತನಿಖೆಗೆ ಹಾಜರಾಗಲು ನೋಟಿಸ್ ನೀಡಿರುವುದು ವಿಚಿತ್ರವಾಗಿದೆ. ಸಂಘಪರಿವಾರದ ಶಕ್ತಿಗಳು ಇಂತಹ ಕೆಲಸವನ್ನು ಮಾಡುತ್ತಲೇ ಇರುತ್ತವೆ. ಬಂಟ್ವಾಳದಲ್ಲಿ ಹರೀಶ್ ಪೂಜಾರಿ ಎಂಬ ಯುವಕನನ್ನು ಕೊಲೆ ಮಾಡಲಾಯಿತು. ಈ ರೀತಿಯ ಘಟನೆಗ ಳಾಗುತ್ತಿದ್ದರೂ ಕಲ್ಲಡ್ಕ ಪ್ರಭಾಕರ್ ಭಟ್ರನ್ನು ಬಂಧಿಸಲು ಸರಕಾರಕ್ಕೆ ಸಾಧ್ಯವಾಗಿಲ್ಲ ಎಂದು ಹೇಳಿದರು.
ಈ ಸಂದರ್ಭ ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ, ದಲಿತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಬಿ.ಆರ್. ಭಾಸ್ಕರ್ಪ್ರಸಾದ್, ಸಾಮಾಜಿಕ ಕಾರ್ಯಕರ್ತ ಎಸ್.ಸಿ. ಗಿರೀಶ್ ಕುಮಾರ್, ಸಾಹಿತಿ ದಯಾನಂದ್ ಟಿ.ಕೆ., ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ಡಿವೈಎಫ್ಐ ಜಿಲ್ಲಾ ಉಪಾಧ್ಯಕ್ಷ ಬಿ.ಕೆ.ಇಮ್ತಿಯಾಝ್, ಎಸ್ಎಫ್ಐ ಜಿಲ್ಲಾಧ್ಯಕ್ಷ ನಿತಿನ್ ಕುತ್ತಾರ್, ಜಿಲ್ಲಾ ಕಾರ್ಯದರ್ಶಿ ಚರಣ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.