ನಮೋ ಬ್ರಿಗೇಡ್ ಸಂಸ್ಥಾಪಕ ನರೇಶ್ ಶೆಣೈ ಪತ್ತೆಗೆ ವಿಮಾನ ನಿಲ್ದಾಣಗಳಿಗೆ ಲುಕ್ಔಟ್ ನೋಟಿಸ್ ಜಾರಿ
ಮಂಗಳೂರು, ಎ. 6: ಬಾಳಿಗಾ ಹತ್ಯೆ ಪ್ರಕರಣದ ಆರೋಪಿ ಎನ್ನಲಾಗಿರುವ ನಮೋ ಬ್ರಿಗೇಟ್ನ ಸಂಸ್ಥಾಪಕ ನರೇಶ್ ಶೆಣೈ ಅವರ ಪತ್ತೆಗಾಗಿ ಪೊಲೀಸರು ದೇಶದ ವಿಮಾನ ನಿಲ್ದಾಣಗಳಿಗೆ ಲುಕ್ಔಟ್ ನೋಟಿಸ್ ಜಾರಿಗೊಳಿಸಿದ್ದಾರೆ.
ಬಾಳಿಗಾ ಹತ್ಯೆಯಲ್ಲಿ ಪ್ರಮುಖ ಕೈವಾಡ ಇದೆ ಎನ್ನಲಾಗಿರುವ ನರೇಶ್ ಶೆಣೈಗಾಗಿ ಪೊಲೀಸರ ಶೋಧ ಕಾರ್ಯ ಮುಂದುವರಿದಿರುವಂತೆ ತಲೆಮರೆಸಿಕೊಂಡಿದ್ದಾರೆ. ಕೆಲವು ಮೂಲಗಳ ಪ್ರಕಾರ ನರೇಶ್ ಶೆಣೈ ವಿದೇಶಕ್ಕೆ ಹೋಗಲು ಸಿದ್ಧತೆ ನಡೆಯುತ್ತಿದ್ದಾರೆ ಎಂದು ಹೇಳಲಾಗಿದೆ. ಆದರೂ ಈ ಬಗ್ಗೆ ಎಚ್ಚೆತ್ತುಕೊಂಡಿರುವ ಪೊಲೀಸರು, ವಿದೇಶಕ್ಕೆ ಪಲಾಯನಗೈಯ್ಯದಂತೆ ಎಲ್ಲಾ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ಲುಕ್ಔಟ್ ನೋಟಿಸ್ ನೀಡಿದ್ದಾರೆ.
ವಿನಾಯಕ ಪಾಂಡುರಂಗ ಬಾಳಿಗಾ ಅವರು ಮಾರ್ಚ್ 21ರಂದು ಹತ್ಯೆಗೀಡಾಗಿದ್ದರು. ಹತ್ಯೆಯಲ್ಲಿ ನರೇಶ್ ಶೆಣೈಯ ಕೈವಾಡ ಇರುವ ಬಗ್ಗೆ ಅನುಮಾನಗಳು ವ್ಯಕ್ತವಾಗಿದ್ದವು. ಅದರಂತೆ ಪೊಲೀಸ್ ತನಿಖಾ ತಂಡವು ನರೇಶ್ ಶೆಣೈಗೆ ನೋಟಿಸ್ ನೀಡಿ, ವಿಚಾರಣೆ ಹಾಜರಾಗುವಂತೆ ಸೂಚಿಸಿತ್ತು. ಆದರೆ ನರೇಶ್ ಶೆಣೈ ತನಿಖಾ ತಂಡದ ಎದುರು ವಿಚಾರಣೆಗೆ ಹಾಜರಾಗಿರಲಿಲ್ಲ. ಮಾ.31ರಂದು ನಗರದ ವಿ.ಟಿ. ರಸ್ತೆಯಲ್ಲಿರುವ ಶೆಣೈ ಮನೆ ಮೇಲೆ ದಾಳಿ ಪೊಲೀಸರು ದಾಳಿ ನಡೆಸಿ ಶೋಧ ನಡೆಸಿದ್ದರು. ಆದರೆ ಅವರು ಪತ್ತೆಯಾಗಿರಲಿಲ್ಲ. ಶೆಣೈ ಗೋವಾ ಅಥವಾ ಅಂಡಮಾನ್ಗೆ ಹೋಗಿರುವ ಸಾಧ್ಯತೆ ಇದೆ ಎನ್ನಲಾಗಿದ್ದು, ಪೊಲೀಸ್ ಅಧಿಕಾರಿಗಳ ಎರಡು ಪ್ರತ್ಯೇಕ ತಂಡಗಳು ಗೋವಾ ಮತ್ತು ಅಂಡಮಾನ್ಗೆ ತೆರಳಿತ್ತು. ಇದೀಗ ಅವರ ಶೋಧ ಕಾರ್ಯವನ್ನು ಮುಂದುವರಿಸಿರುವ ಪೊಲೀಸರು ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ಲುಕ್ಔಟ್ ನೋಟಿಸ್ ಜಾರಿ ಮಾಡಿದ್ದಾರೆ.
ಬಾಳಿಗಾ ಹತ್ಯೆಯಾದ ವಾರದೊಳಗೆ ಪೊಲೀಸರು ಇಬ್ಬರು ಆರೋಪಿಗಳಾದ ವಿನೀತ್ ಪೂಜಾರಿ ಮತ್ತು ವಿಶಿತ್ ದೇವಾಡಿಗ ಎಂಬಿಬ್ಬರನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದರು. ಬಾಳಿಗಾರನ್ನು ಹತ್ಯೆ ಮಾಡಿದ ಆರೋಪಿಗಳು ನರೇಶ್ ಶೆಣೈ ಆಪ್ತರಿಗೆ ಸೇರಿದ ಕ್ವಾಲಿಸ್ ವಾಹನವೊಂದರಲ್ಲಿ ಪರಾರಿ ಆಗಿದ್ದರು ಎಂಬುದು ಬಂಧಿತರ ವಿಚಾರಣೆಯಿಂದ ತಿಳಿದುಬಂದಿದೆ. ಇದೀಗ ಪೊಲೀಸರು ನರೇಶ್ ಶೆಣೈ ಸಹಿತ ಶ್ರೀಕಾಂತ್ ಹಾಗೂ ಶಿವ ಅವರ ಶೋಧ ಕಾರ್ಯವನ್ನು ಮುಂದುವರಿಸಿದ್ದಾರೆ.
ವಿಮಾನ ನಿಲ್ದಾಣಗಳಿಗೆ ಲುಕ್ಔಟ್ ನೋಟಿಸ್: ಕಮಿಷನರ್
ಮಂಗಳೂರು, ಎ. 6: ವಿನಾಯಕ ಪಾಂಡುರಂಗ ಬಾಳಿಗಾ ಹತ್ಯೆ ಪ್ರಕರಣದಲ್ಲಿ ನರೇಶ್ ಶೆಣೈ ಅವರ ಹೆಸರು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಅವರ ಪತ್ತೆಗಾಗಿ ಎಲ್ಲಾ ವಿಮಾನ ನಿಲ್ದಾಣಗಳಿಗೆ ಲುಕ್ಔಟ್ ನೋಟಿಸ್ನ್ನು ನೀಡಿರುವುದಾಗಿ ನಗರ ಪೊಲೀಸ್ ಆಯುಕ್ತ ಚಂದ್ರಶೇಖರ್ ತಿಳಿಸಿದ್ದಾರೆ.
ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿ ನರೇಶ್ ಶೆಣೈ ವಿಚಾರಣೆಗೊಳಪಡಬೇಕಾಗಿರುವುದರಿಂದ ನೋಟಿಸ್ ನೀಡಲಾಗಿದೆ ಎಂದವರು ಹೇಳಿದ್ದಾರೆ.