ಯುವ ಜನರಲ್ಲಿ ಮಧುಮೇಹದ ಬಗ್ಗೆ ಅರಿವು ಮೂಡಿಸುವ ಪ್ರಯತ್ನವಾಗಬೇಕು: ಜೆ.ಆರ್. ಲೋಬೊ
ಮಂಗಳೂರು, ಎ.7: ಆಧುನಿಕ ಆಹಾರ ಪದ್ದತಿಯಿಂದ ಯುವಜನರಲ್ಲಿ ಆರೋಗ್ಯದ ಬಗ್ಗೆ ಕಾಳಜಿ ಕಡಿಮೆಯಾಗಿದೆ, ಮಧುಮೇಹದ ಬಗ್ಗೆ ಅವರಲ್ಲಿ ಅರಿವು ಮೂಡಿಸುವ ಪ್ರಯತ್ನಗಳು ಆಗಬೇಕು ಎಂದು ಶಾಸಕ ಜೆ.ಆರ್.ಲೋಬೊ ಹೇಳಿದರು.
ದ.ಕ ಜಿಲ್ಲಾ ಪಂಚಾಯತ್ನ ನೇತ್ರಾವತಿ ಸಭಾಂಗಣದಲ್ಲಿ ದ.ಕ ಜಿಲ್ಲಾಡಳಿತ , ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ , ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ವೆನ್ಲಾಕ್ ಆಸ್ಪತ್ರೆ , ಮಂಗಳೂರು ಮಹಾನಗರಪಾಲಿಕೆ , ಜಿಲ್ಲಾ ಪೊಲೀಸ್ ಇಲಾಖೆ , ಕಣಚೂರು ಆಸ್ಪತ್ರೆ, ಎಂ.ವಿ.ಶೆಟ್ಟಿ ಕಾಲೇಜು ಹಾಗೂ ಮಂಗಳೂರಿನ ಶ್ರೀನಿವಾಸ್ ಗ್ರೂಫ್ ಆಫ್ ಮ್ಯಾನೆಜ್ಮೆಂಟ್ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ವಿಶ್ವ ಆರೋಗ್ಯ ದಿನಾಚರಣೆ 2016 ಹಾಗೂ ಚುಚ್ಚುಮದ್ದು ಪೋಲಿಯೊ ಲಸಿಕೆ(ಐಪಿವಿ) ಗೆ ಚಾಲನೆ ನೀಡಿ ಮಾತನಾಡಿದರು.
ಮಧುಮೇಹ ಕಾಯಿಲೆ ಬಂದ ನಂತರ ಅದಕ್ಕೆ ಔಷಧಿ ತೆಗೆದುಕೊಳ್ಳುವುದಕ್ಕಿಂತಲೂ ಮಧುಮೇಹ ಕಾಯಿಲೆ ಬಾರದಂತೆ ತಡೆಗಟ್ಟಲು ಮುಂಜಾಗರುಕತೆಯನ್ನು ವಹಿಸುವುದು ಅತೀ ಅಗತ್ಯ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ, ದ.ಕ ಜಿಲ್ಲಾಧಿಕಾರಿ ಎ.ಬಿ.ಇಬ್ರಾಹೀಂ, ದ.ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪಿ.ಐ.ಶ್ರೀವಿದ್ಯಾ, ದ.ಕ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ರಾಮಕೃಷ್ಣ ರಾವ್ ಮತ್ತು ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಜಿಲ್ಲಾ ಶಸ್ತ್ರ ಚಿಕಿತ್ಸಕರು ಮತ್ತು ಅಧೀಕ್ಷಕ ಡಾ.ರಾಜೇಶ್ವರಿ ದೇವಿ ಉಪಸ್ಥಿತರಿದ್ದರು.