ಗ್ರಾಮ ಉದಯ್ ಸೇ ಭಾರತ್ ಉದಯ್
ಉಡುಪಿ, ಎ.17: ರಾಷ್ಟ್ರೀಯ ಪಂಚಾಯತ್ರಾಜ್ ದಿವಸ್ ಹಾಗೂ ಗ್ರಾಮ್ ಉದಯ್ ಸೇ ಭಾರತ್ ಉದಯ್ ಅಭಿಯಾನವನ್ನು ಜಿಲ್ಲೆಯ ಎಲ್ಲ ಗ್ರಾಪಂ ಮಟ್ಟದಲ್ಲಿ ಆಯೋಜಿಸಲಾಗುವುದು ಎಂದು ಉಡುಪಿ ಜಿಪಂ ಸಿಇಒ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಹೇಳಿದ್ದಾರೆ. ಸರಕಾರದ ಮಾರ್ಗದರ್ಶನದಂತೆ ಎ.24ರವರೆಗೆ ಗ್ರಾಮ್ ಉದಯ್ ಸೇ ಭಾರತ್ ಉದಯ್ ಅಭಿಯಾನ ಆಯೋಜಿ ಸಲಾಗುತ್ತಿದ್ದು, ಗ್ರಾಪಂ ಮಟ್ಟದಲ್ಲಿ ವಾರ್ಡ್ ಸಭೆ/ಗ್ರಾಮಸಭೆಗಳನ್ನು ಆಯೋಜಿಸಲಾಗುತ್ತಿದೆ ಎಂದರು.
ಎ.23ರಂದು ಸಂಜೆ 4ಕ್ಕೆ ಮುಖ್ಯಮಂತ್ರಿ ಹಾಗೂ 24ರಂದು ಪ್ರಧಾನ ಮಂತ್ರಿಗಳು ರಾಷ್ಟ್ರದ ಎಲ್ಲ ಗ್ರಾಮಸಭೆಗಳನ್ನು ಉದ್ದೇಶಿಸಿ ಭಾಷಣ ಮಾಡುವರು. ಈ ಕಾರ್ಯಕ್ರಮವನ್ನು ಗ್ರಾಮ ಮಟ್ಟದಲ್ಲಿ ಬಿತ್ತರಿಸಲು ವ್ಯವಸ್ಥೆ ಮಾಡಲಾಗಿದೆ. ಗ್ರಾಮಸಭೆಗಳಲ್ಲಿ ಭಾರತದ ಸಂವಿಧಾನಕ್ಕೆ ಮಾಡಲಾದ 73ನೇ ತಿದ್ದುಪಡಿಯ ಅನುಸಾರ ಪಂಚಾಯತ್ರಾಜ್ ವ್ಯವಸ್ಥೆ ಜಾರಿಗೆ ಬಂದ ಎ.24ರ ಮಹತ್ವ ಕುರಿತು ಮತ್ತು ವಿಶೇಷ ಗ್ರಾಮಸಭೆಗಳಲ್ಲಿ ಮುಂದಿನ 5 ವರ್ಷಗಳಲ್ಲಿ ಕೈಗೊಳ್ಳಬಹುದಾದ ಅಭಿವೃದ್ಧಿ ಕುರಿತು, ಶುದ್ಧ ಕುಡಿಯುವ ನೀರು, ಸ್ವಚ್ಛತೆ ತ್ಯಾಜ್ಯ ಮತ್ತು ಕಸ ನಿರ್ವಹಣೆ, ಭವಿಷ್ಯದ ಯೋಜನೆಗಳ ಬಗ್ಗೆ ವಿಸ್ತೃತ ಚರ್ಚೆ ನಡೆಸಲು ಸಿಇಒ ಪಂಚಾಯತ್ರಾಜ್ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.





