ಸರಕಾರಿ ಆಸ್ಪತ್ರೆಗಳಲ್ಲಿ ‘ಜಯದೇವ’ ಮಾದರಿ ಸೌಲಭ್ಯ ಸಿಗಲಿ: ಸಿದ್ದರಾಮಯ್ಯ

ಕಲಬುರಗಿ, ಎ.23: ಸರಕಾರದ ಅಧೀನದಲ್ಲಿರುವ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಸಿಗುತ್ತಿರುವ ಗುಣಮಟ್ಟದ ಆರೋಗ್ಯ ಚಿಕಿತ್ಸಾ ಸೌಲಭ್ಯಗಳು ಮತ್ತು ಸೇವೆಗಳು ರಾಜ್ಯದಲ್ಲಿರುವ ಎಲ್ಲ ಸರಕಾರಿ ಆಸ್ಪತ್ರೆಗಳಲ್ಲಿಯೂ ಸಿಗುವಂತಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.
ಶನಿವಾರ ಕಲಬುರಗಿಯಲ್ಲಿರುವ ಗುಲ್ಬರ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ 20 ಕೋಟಿ ರೂ.ವೆಚ್ಚದಲ್ಲಿ ಸ್ಥಾಪಿಸಲಾಗಿರುವ 100 ಹಾಸಿಗೆಗಳ ಸಾಮರ್ಥ್ಯದ ಜಯದೇವ ಆಸ್ಪತ್ರೆಯ ಶಾಖೆಯನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.
ರಾಜ್ಯ ಸರಕಾರವು ಸರಕಾರಿ ಆಸ್ಪತ್ರೆಗಳಿಗೆ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸಲು ಕೋಟ್ಯಂತರ ರೂ.ಗಳನ್ನು ಖರ್ಚು ಮಾಡುತ್ತಿದೆ. ಆದರೂ, ಜನ ಖಾಸಗಿ ಆಸ್ಪತ್ರೆಗಳ ಮೊರೆ ಹೋಗುತ್ತಿರುವುದು ಸರಿಯಲ್ಲ. ಸರಕಾರಿ ವೈದ್ಯರು ನಿಷ್ಠೆಯಿಂದ ಸೇವೆ ಸಲ್ಲಿಸಬೇಕು. ಆಗ ಮಾತ್ರ ಜನ ಸರಕಾರಿ ಆಸ್ಪತ್ರೆಗಳಿಗೆ ಬರುತ್ತಾರೆ. ವೈದ್ಯರು ಸೇವಾ ಮನೋಭಾವನೆಯಿಂದ ಕೆಲಸ ಮಾಡಬೇಕು ಎಂದು ಅವರು ಸಲಹೆ ನೀಡಿದರು.
ಬದಲಾದ ಜೀವನ ಶೈಲಿ, ಆಹಾರ ಪದ್ಧತಿಯಿಂದಾಗಿ ಜನಸಾಮಾನ್ಯರು ಮಧುಮೇಹ, ಹೃದ್ರೋಗ ಸೇರಿದಂತೆ ಅನೇಕ ರೋಗಗಳಿಗೆ ಗುರಿಯಾಗುತ್ತಿದ್ದಾರೆ. 1960ರಲ್ಲಿ ಶೇ.2ರಷ್ಟು ಇದ್ದ ಮಧುಮೇಹಿ ರೋಗಿಗಳ ಪ್ರಮಾಣವು ಶೇ. 15ಕ್ಕೆ ಹೆಚ್ಚಳವಾಗಿದೆ. ಜಯದೇವ ಹೃದ್ರೋಗ ಸಂಸ್ಥೆಯಿಂದ ಯಶಸ್ವಿನಿ ಮತ್ತು ಆರೋಗ್ಯ ಶ್ರೀ ಯೋಜನೆಯಡಿ ಸಾವಿರಾರು ಬಡರೋಗಿಗಳು ಪ್ರಯೋಜನ ಪಡೆಯುತ್ತಿದ್ದಾರೆ ಎಂದು ಅವರು ಹೇಳಿದರು. ಯಶಸ್ವಿನಿ ಯೋಜನೆಯನ್ನು ಈಗ ಪಟ್ಟಣ ಮತ್ತು ನಗರ ಪ್ರದೇಶಗಳಿಗೂ ವಿಸ್ತರಿಸಿ ಬಡ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜನರಿಗೆ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ. ಇದಲ್ಲದೆ ಬಡವರಿಗೆ ಉಚಿತ ಚಿಕಿತ್ಸಾ ಸೌಲಭ್ಯ ಕಲ್ಪಿಸಲು ಆರೋಗ್ಯ ನಿಧಿ ಸ್ಥಾಪಿಸಲಾಗಿದೆ ಎಂದು ಅವರು ತಿಳಿಸಿದರು. ಕಲಬುರಗಿ ತಾಲೂಕಿನ ಶ್ರೀನಿವಾಸ ಸರಡಗಿ ಗ್ರಾಮದ ಬಳಿ ನಿರ್ಮಾಣ ಹಂತದಲ್ಲಿರುವ ವಿಮಾನ ನಿಲ್ದಾಣ ಕಾಮಗಾರಿ ವಿವಿಧ ಕಾರಣಗಳಿಂದ ನೆನೆಗುದಿಗೆ ಬಿದ್ದಿದ್ದು, ಈ ಕಾಮಗಾರಿಯನ್ನು ಎರಡು ಹಂತಗಳಲ್ಲಿ ಪೂರ್ಣಗೊಳಿಸಲು 112 ಕೋಟಿ ರೂ. ಅಂದಾಜು ಮಾಡಲಾಗಿದೆ ಎಂದು ಅವರು ಹೇಳಿದರು.
ಹೈದರಾಬಾದ್-ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ಎರಡು ವರ್ಷದಲ್ಲಿ 2 ಸಾವಿರ ಕೋಟಿ ರೂ.ಬಿಡುಗಡೆ ಮಾಡಲಾಗಿದೆ. ಡಾ.ನಂಜುಂಡಪ್ಪವರದಿಯ 8 ವರ್ಷಗಳ ಅವಧಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ವರದಿಯ ಅವಧಿಯನ್ನು ಇನ್ನೂ 5 ವರ್ಷ ಕಾಲ ವಿಸ್ತರಿಸಲು ಹಾಗೂ ಪ್ರತಿ ವರ್ಷ 3 ಸಾವಿರ ಕೋಟಿ ರೂ.ಖರ್ಚು ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.
ಲೋಕಸಭೆಯ ಕಾಂಗ್ರೆಸ್ ನಾಯಕ ಡಾ.ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ಕಲಬುರಗಿಯಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ ಶಾಖೆಯ ಸ್ಥಾಪನೆಯಿಂದ ಈ ಭಾಗದ ಜನರಿಗೆ ದೊಡ್ಡ ಉಪಕಾರವಾಗಿದೆ. ಅದೇ ರೀತಿ ಕಲಬುರಗಿಯಲ್ಲಿ ನಿರ್ಮಾಣಗೊಳ್ಳುವ ಲೋಕೋಪಯೋಗಿ ಭವನ ಮತ್ತು ಮುಖ್ಯ ಇಂಜಿನಿಯರ್ ಕಚೇರಿಗೆ ಬೇಕಾಗುವ ಅಗತ್ಯ ಹಣವನ್ನು ಕೂಡಲೇ ಬಿಡುಗಡೆ ಮಾಡುವಂತೆ ಲೋಕೋಪಯೋಗಿ ಸಚಿವರನ್ನು ಕೋರಿದರು. ಕಲಬುರಗಿಯಲ್ಲಿರುವ ಹೈಕೋರ್ಟ್ ಪೀಠದ ವ್ಯಾಪ್ತಿಗೆ ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಗಳನ್ನು ಸೇರ್ಪಡೆಗೊಳಿಸಲು ಮುಖ್ಯಮಂತ್ರಿಗಳು ವಿಶೇಷ ಗಮನ ಕೊಡಬೇಕು. ಬೇಳೆಕಾಳು ಸಂಶೋಧನಾ ಕೇಂದ್ರಕ್ಕೆ 2 ಕೋಟಿ ರೂ.ಬಿಡುಗಡೆಯಾಗಲಿದ್ದು, ಉಳಿದ ಹಣವನ್ನು ನೇರವಾಗಿ ಬಿಡುಗಡೆ ಮಾಡಿ ಈ ಭಾಗದ ತೊಗರಿ ಮತ್ತು ಇತರೆ ಬೇಳೆಕಾಳುಗಳ ಅಭಿವೃದ್ಧಿಗೆ ನೆರವಾಗಬೇಕು. ಕಲಬುರಗಿ ವಿಮಾನ ನಿಲ್ದಾಣವನ್ನು ಒಂದು ವರ್ಷದಲ್ಲಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಎಲ್ಲ ಕ್ರಮಕೈಗೊಳ್ಳಬೇಕೆಂದು ಅವರು ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ 141 ಕೋಟಿ ರೂ.ವೆಚ್ಚದ ಒಳಚರಂಡಿ ವ್ಯವಸ್ಥೆ ಕಾಮಗಾರಿ, 26 ಕೋಟಿ ರೂ.ವೆಚ್ಚದ ಟ್ರಾಮಾ ಕೇರ್ ಸೆಂಟರ್, ಎಚ್ಕೆಆರ್ಡಿಬಿಯ 24.15 ಕೋಟಿ ರೂ. ಅನುದಾನದಿಂದ ಕಲಬುರಗಿ ನಗರದ ಮೂರು ರಸ್ತೆಗಳ, ಒಂದು ಕೋಟಿ ರೂ.ವೆಚ್ಚದ ರಸ್ತೆ ಅಭಿವೃದ್ಧಿಯ ಕಾಮಗಾರಿಗಳಿಗೆ ಚಾಲನೆ ನೀಡಿದರು.
47 ಕೋಟಿ ರೂ.ವೆಚ್ಚದ ಲೋಕೋಪಯೋಗಿ ಭವನ ಕಟ್ಟಡ, 1 ಕೋಟಿ ರೂ. ವೆಚ್ಚದ ಮೌಲಾನಾ ಆಝಾದ್ ಅಲ್ಪಸಂಖ್ಯಾತರ ಭವನ ಮತ್ತು 8.50 ಕೋಟಿ ರೂ.ವೆಚ್ಚದ ಬೇಳೆಕಾಳು ಸಂಶೋಧನಾ ಕೇಂದ್ರದಲ್ಲಿ ಪ್ರಯೋಗಾಲಯದ ಶಂಕುಸ್ಥಾಪನೆಯನ್ನು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಸಚಿವರಾದ ಡಾ.ಜಿ.ಪರಮೇಶ್ವರ್, ಡಾ.ಎಚ್.ಸಿ. ಮಹದೇವಪ್ಪ, ಖಮರುಲ್ ಇಸ್ಲಾಮ್, ಡಾ.ಶರಣಪ್ರಕಾಶ್ಪಾಟೀಲ್, ಬಾಬುರಾವ್ ಚಿಂಚನಸೂರ್, ಮಾಜಿ ಮುಖ್ಯಮಂತ್ರಿ ಧರಂಸಿಂಗ್, ಶಾಸಕರಾದ ದತ್ತಾತ್ರೇಯ ಪಾಟೀಲ್ರೇವೂರ್, ಜಿ.ರಾಮಕೃಷ್ಣ, ಡಾ.ಅಜಯ್ಸಿಂಗ್, ಪ್ರಿಯಾಂಕ ಖರ್ಗೆ, ವಿಧಾನಪರಿಷತ್ ಸದಸ್ಯ ಇಕ್ಬಾಲ್ ಅಹ್ಮದ್ ಸರಡಗಿ, ಮೇಯರ್ ಸೈಯದ್ ಅಹ್ಮದ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಸ್ಗರ್ ಚುಲ್ಬುಲ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.







