ಉ.ಕ. ಜಿಲ್ಲೆಗೆ 15 ಕೋಟಿ ರೂ. ಬಿಡುಗಡೆ: ಸಚಿವ ಆರ್. ವಿ. ದೇಶಪಾಂಡೆ
ಕುಡಿಯುವ ನೀರು ಪೂರೈಕೆ

ಕಾರವಾರ, ಎ. 26: ಜಿಲ್ಲೆಯಲ್ಲಿ ಸಮರ್ಪಕ ಕುಡಿಯುವ ನೀರು ಪೂರೈಕೆಗಾಗಿ ಸರಕಾರ ಒಟ್ಟು 15 ಕೋಟಿ ರೂ. ಬಿಡುಗಡೆ ಮಾಡಿದ್ದು, ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಕ್ರಮಕೈಗೊ ಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್. ವಿ. ದೇಶಪಾಂಡೆ ಅವರು ಸೂಚಿಸಿದ್ದಾರೆ.
ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯ ಕುಡಿಯುವ ನೀರಿನ ಪರಿಸ್ಥಿತಿ ಕುರಿತು ಪರಿಶೀಲನಾ ಸಭೆ ನಡೆಸಿ ಮಾತನಾಡುತ್ತಿದ್ದರು.
ಶಾಸಕರ ಅಭಿವೃದ್ಧಿ ನಿಧಿಯ ಅಡಿಯಲ್ಲಿ ಕುಡಿಯುವ ನೀರು ಕಾಮಗಾರಿಗಳಿಗೆ ತಲಾ 50ಲಕ್ಷ ರೂ. ಬಿಡುಗಡೆ ಮಾಡಲಾಗಿದೆ. ಜಿಲ್ಲೆಯ 264 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ನರ ನೀರಿನ ಬೇಡಿಕೆಗೆ ಅನುಗುಣವಾಗಿ ಹೆಚ್ಚುವರಿ ಟ್ಯಾಂಕರ್ ಅಗತ್ಯವಿದ್ದರೆ ವ್ಯವಸ್ಥೆ ಮಾಡಬೇಕು. ಪ್ರತಿ ತಹಶೀಲ್ದಾರ್ ಖಾತೆಯಲ್ಲಿ ಬರ ಪರಿಹಾರ ಹಾಗೂ ಕುಡಿಯುವ ನೀರು ಪೂರೈಕೆ ಇತ್ಯಾದಿಗಳಿಗೆ ಕನಿಷ್ಠ 20ಲಕ್ಷ ರೂ. ಇರುವಂತೆ ನೋಡಿಕೊಳ್ಳಬೇಕು ಎಂದು ಅವರು ತಿಳಿಸಿದರು.
ಜನರಿಗೆ ಸಹಾಯ ಮಾಡಲು ಜಿಲ್ಲಾ ಕೇಂದ್ರದಲ್ಲಿ ಮಾತ್ರವಲ್ಲದೆ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಸಹಾಯವಾಣಿ ಆರಂಭಿಸಲಾಗಿದೆ. ಕುಡಿಯುವ ನೀರು, ಮೇವು, ಉದ್ಯೋಗ ಸೃಷ್ಟಿ ಬೇಡಿಕೆಗಳನ್ನು 24ಗಂಟೆಗಳ ಒಳಗಾಗಿ ಈಡೇರಿಸಬೇಕು. ಅಧಿಕಾರಿಗಳು ಯುದ್ದೋಪಾಧಿಯಲ್ಲಿ ಕಾರ್ಯನಿರ್ವಹಿಸುವಂತೆ ಅವರು ಸೂಚನೆ ನೀಡಿದರು. ಅಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡಿ ಕುಡಿಯುವ ನೀರಿನ ಪರಿಸ್ಥಿತಿಯನ್ನು ತಿಳಿದುಕೊಳ್ಳಬೇಕು. ಅಧಿಕಾರಿಗಳು ಜನರೊಂದಿಗೆ ಹಾಗೂ ಜನಪ್ರತಿನಿಧಿಗಳೊಂದಿಗೆ ನೇರ ಸಂಪರ್ಕದಲ್ಲಿದ್ದು, ಪರಿಸ್ಥಿತಿಯನ್ನು ನಿಭಾಯಿಸಬೇಕು ಎಂದರು.
ಕೆರೆಗಳ ಹೂಳೆತ್ತಲು ಆದ್ಯತೆ: ಪ್ರತಿ ತಾಲೂಕಿನಲ್ಲಿ ಕನಿಷ್ಠ ಎರಡು ಕೆರೆಗಳಲ್ಲಿ ಹೂಳೆತ್ತುವ ಪ್ರಸ್ತಾವನೆಯನ್ನು ಸಲ್ಲಿಸಿ ತಕ್ಷಣ ಕಾರ್ಯವನ್ನು ಆರಂಭಿಸಬೇಕು. ಹಳಿಯಾಳದಲ್ಲಿ ಈಗಾಗಲೇ ಕೆರೆಗಳ ಹೂಳೆತ್ತುವ ಕಾರ್ಯವನ್ನು ಸಂಸ್ಥೆ ಮೂಲಕ ಆರಂಭಿಸಲಾಗಿದ್ದು, ಜೆಸಿಬಿ ಯನ್ನು ಇದಕ್ಕಾಗಿ ಬಳಸಲಾಗುತ್ತಿದೆ. ಉದ್ಯೋಗ ಖಾತ್ರಿ ಯೋಜನೆಯಡಿ ಕೆರೆಗಳ ಹೂಳೆತ್ತುವ ಕಾರ್ಯಕ್ಕೆ ಜೆಸಿಬಿ ಬಳಸಲು ಅನುಮತಿ ಕೋರಲಾಗಿದೆ. ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಕೆರೆಗಳ ಹೂಳೆತ್ತುವ ಕಾರ್ಯಕ್ಕೆ ಆದ್ಯತೆ ನೀಡಬೇಕು ಎಂದು ದೇಶಪಾಂಡೆ ತಿಳಿಸಿದರು.
ತಾಲೂಕು ಮಟ್ಟದ ಟಾಸ್ಕ್ಫೋರ್ಸ್ ಅಡಿ ಕೈಗೆತ್ತಿಕೊಂಡಿರುವ ಕಾಮಗಾರಿಗಳನ್ನು ಆದಷ್ಟು ಬೇಗನೆ ಪೂರ್ಣಗೊಳಿಸಬೇಕು. ಶಿರಸಿ ವಿಭಾಗದಲ್ಲಿ ಎಲ್ಲಾ 126ಕುಡಿಯುವ ನೀರಿನ ಕಾಮಗಾರಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ಕಾರವಾರ ವಿಭಾಗದಲ್ಲಿ 57 ಕಾಮಗಾರಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದ್ದು, ಇನ್ನುಳಿದ ಕಾಮಗಾರಿಗಳಿಗೆ ಒಂದು ವಾರದ ಒಳಗಾಗಿ ಸಂಪರ್ಕ ಕಲ್ಪಿಸಬೇಕು. ಕಾಮಗಾರಿ ಅನುಷ್ಠಾನದಲ್ಲಿ ನಿರ್ಲಕ್ಷ್ಯ ತೋರು ವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸಚಿವರು ಜಿಲ್ಲಾಧಿಕಾರಿ ಅವರಿಗೆ ಸೂಚಿಸಿದರು. ಶಾಸಕರಾದ ಸತೀಶ್ ಸೈಲ್, ಮಂಕಾಳ ವೈದ್ಯ, ಶಿವರಾಮ ಹೆಬ್ಬಾರ್, ಘೋಟ್ನೇಕರ್, ಜಿಲ್ಲಾಧಿಕಾರಿ ಉಜ್ವಲ್ ಕುಮಾರ್ ಘೋಷ್, ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.







