ಬಂಟ್ವಾಳ: ಉದ್ಯಾನವನಕ್ಕೆ ಶಂಕುಸ್ಥಾಪನೆ

ಬಂಟ್ವಾಳ,ಎ.26: ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಅಂದಾಜು 40 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಬಂಟ್ವಾಳ ಪುರಸಭೆಯ ವ್ಯಾಪ್ತಿಯ ಬಿ.ಮೂಡ ಗ್ರಾಮದ ತಲಪಾಡಿ, ಮಫತ್ ಲೇಔಟ್ನಲ್ಲಿ ಉದ್ಯಾನವನ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ನೆರವೇರಿಸಿದರು.
ಬಳಿಕ ಮಾತನಾಡಿದ ಅವರು ನಗರದ ಸೌಂದರ್ಯದ ದೃಷ್ಟಿಯಿಂದ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಬಂಟ್ವಾಳದಲ್ಲಿ ಉದ್ಯಾನವನ ನಿರ್ಮಾಣಗೊಳ್ಳುತ್ತಿರುವುದು ಸ್ವಾಗತಾರ್ಹ. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಬಂಟ್ವಾಳ ತಾಲೂಕಿಗೆ ತೂಗುಸೇತುವೆ (ಬಡಗಬೆಳ್ಳೂರು- ಕುಪ್ಪೆಪದವು ಗ್ರಾಪಂಗಳ ನಡುವೆ ಸಂಪರ್ಕ ಕಲ್ಪಿಸುವುದು) ಹಾಗೂ ಉದ್ಯಾನವನ ಯೋಜನೆಯನ್ನು ಒದಗಿಸಿರುವುದು ಅಭಿನಂದನಾರ್ಹ ಎಂದರು. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಿವೇದಿತ್ ಆಳ್ವ ಮಾತನಾಡಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ಇಂಟರ್ಲಾಕಿಂಗ್ ಪಾಥ್ವೇ, ಮಕ್ಕಳು ಆಟವಾಡಲು ಆಧುನಿಕ ರೀತಿಯ ಆಟದ ಸಲಕರಣೆಗಳು, ಉಪಹಾರ ಮಳಿಗೆ, ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ, ಹೂದೋಟ, ಹುಲ್ಲುಹಾಸುಗಳ ವ್ಯವಸ್ಥೆ, ಬೆಂಚ್ಗಳು, ನಿಗದಿತ ಸ್ಥಳದಲ್ಲಿ ಕಸದ ಬುಟ್ಟಿಗಳ ವ್ಯವಸ್ಥೆ ಇತ್ಯಾದಿ ಸವಲತ್ತುಗಳನ್ನು ಒಳಗೊಂಡ ಸರ್ವಋತುವಿಗೆ ಹೊಂದಿಕೊಳ್ಳುವ ಉದ್ಯಾನವನ ನಿರ್ಮಾಣ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದ್ದು, ನಿಗದಿತ ಸಮಯದ ಒಳಗಡೆ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದೆಂದು ತಿಳಿಸಿದರು. ಬಂಟ್ವಾಳ ಪುರಸಭೆಯ ಅಧ್ಯಕ್ಷ ರಾಮಕೃಷ್ಣ ಆಳ್ವ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಬಂಟ್ವಾಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪಿಯೂಸ್ ಎಲ್. ರೋಡ್ರಿಗಸ್, ಪುರಸಭಾ ಉಪಾಧ್ಯಕ್ಷ ಮುಹಮ್ಮದ್ ನಂದರಬೆಟ್ಟು, ಜಿಪಂ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಶಾಹುಲ್ ಹಮೀದ್, ತಾಪಂ ಸದಸ್ಯರಾದ ಅಬ್ಬಾಸ್ ಅಲಿ, ಪುರಸಭಾ ಸದಸ್ಯರಾದ ಮುಹಮ್ಮದ್ ಶರೀಫ್, ವಸಂತಿ ಚಂದಪ್ಪ, ಜಗದೀಶ್ ಕುಂದರ್, ಗಂಗಾಧರ ಮಂಡಾಡಿ, ಪ್ರಭಾ ಸಾಲಿಯಾನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಕಾರ್ಯದರ್ಶಿ ಪ್ರದೀಪ್ ಡಿಸೋಜ, ಪುರಸಭಾಧಿಕಾರಿ ಸುಧಾಕರ್ ಭಟ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ವ್ಯವಸ್ಥಾಪಕ ಮಂಜುನಾಥ ಶೆಟ್ಟಿ, ವಲಯಾಧಿಕಾರಿ ಹರಿಹರ ವಿ. ಹರಿಕಾಂತ್ ಉಪಸ್ಥಿತರಿದ್ದರು.





