ಕಟ್ಟಾ ಸುಬ್ರಹ್ಮಣ್ಯ ನಾಯ್ಡುರನ್ನು ಕೆಐಎಡಿಬಿ ಭೂ ಹಗರಣದಿಂದ ಮುಕ್ತಗೊಳಿಸಲು ನಿರಾಕರಿಸಿದ ಹೈಕೋರ್ಟ್

ಬೆಂಗಳೂರು, ಎ.29: ಕೆಐಎಡಿಬಿ ಭೂ ಹಗರಣದ ಆರೋಪದಿಂದ ಕೈಬಿಡುವಂತೆ ಕೋರಿ ಮಾಜಿ ಸಚಿವ ಕಟ್ಟಾಸುಬ್ರಹ್ಮಣ್ಯ ನಾಯ್ಡು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ. ಕೆಐಎಡಿಬಿ ಭೂ ಹಗರಣದಲ್ಲಿ ಮೂರನೆ ಆರೋಪಿಯಾಗಿದ್ದ ಇಟಾಸ್ಕ ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕ ಶ್ರೀನಿವಾಸ್ರನ್ನು ಹೈಕೋರ್ಟ್ ಆರೋಪಮುಕ್ತಗೊಳಿಸಿದೆ. ಅದೇ ರೀತಿ ತಮ್ಮನ್ನು ಸಹ ಆರೋಪ ಮುಕ್ತಗೊಳಿಸುವಂತೆ ಕೋರಿ ಕಟ್ಟಾಸುಬ್ರಹ್ಮಣ್ಯ ನಾಯ್ಡುರವರು ಅರ್ಜಿ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿದ್ದ ನ್ಯಾ.ಎ.ವಿ.ಚಂದ್ರಶೇಖರ್ ಅವರಿದ್ದ ಏಕಸದಸ್ಯ ಪೀಠ, ಶ್ರೀನಿವಾಸ ಹಾಗೂ ಕಟ್ಟಾ ಸುಬ್ರಹ್ಮಣ್ಯನಾಯ್ಡು ವಿರುದ್ಧದ ಆರೋಪಗಳು ಸಮಾನತೆಯಿಂದ ಕೂಡಿಲ್ಲ. ಹೀಗಾಗಿ ಈ ಶ್ರೀನಿವಾಸ ಅವರ ಪ್ರಕರಣದಲ್ಲಿ ಹೈಕೋರ್ಟ್ ನೀಡಿದ ತೀರ್ಪು ಕಟ್ಟಾ ಅವರ ಪ್ರಕರಣಕ್ಕೆ ಅನ್ವಯಿಸುವುದಿಲ್ಲ ಎಂದು ಆದೇಶಿಸಿತು.
ಅಲ್ಲದೆ, ಕಟ್ಟಾ ಅವರ ಮೇಲಿನ ಪ್ರಕರಣವನ್ನು ಅಧೀನ ನ್ಯಾಯಾಲಯ ಅಂತಿಮ ವಿಚಾರಣೆಗೆ ನಿಗದಿಪಡಿಸಿದೆ. ಪ್ರಕರಣಕ್ಕೆ ಸಂಬಂಧಿಸಿದ ಹಲವು ಸಾಕ್ಷಿಗಳ ಹೇಳಿಕೆ ಮತ್ತು ದೋಷಾರೋಪ ಪಟ್ಟಿಯನ್ನು ಪರಿಗಣಿಸಿ ಕಟ್ಟಾ ಅವರನ್ನು ಆರೋಪಮುಕ್ತಗೊಳಿಸಲು ನಿರಾಕರಿಸಿ ಲೋಕಾಯುಕ್ತ ವಿಶೇಷ ನ್ಯಾಯಾಲಯವು ಸುದೀರ್ಘ ಆದೇಶ ಹೊರಡಿಸಿದೆ. ಹೀಗಾಗಿ, ಮೆಮೊ ತಿರಸ್ಕರಿಸಲಾಗುತ್ತಿದೆ ಎಂದು ಪೀಠ ಆದೇಶಿಸಿದೆ.





