ನೀಟ್ ಪರೀಕ್ಷೆಯಲ್ಲಿ ಪಾಲ್ಗೊಳ್ಳಿ: ವಿದ್ಯಾರ್ಥಿಗಳಿಗೆ ಸಚಿವ ಜಯಚಂದ್ರ ಕರೆ

ಬೆಂಗಳೂರು, ಎ.30: ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸುಗಳ ಪ್ರವೇಶಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಅರ್ಹತೆ ಹಾಗೂ ಪ್ರವೇಶ ಪರೀಕ್ಷೆ (ಎನ್ಇಇಟಿ)ಗೆ ಈಗಾಗಲೇ ಅರ್ಜಿ ಸಲ್ಲಿಸಿರುವ ರಾಜ್ಯದ ವಿದ್ಯಾರ್ಥಿಗಳು ಮೇ 1 ರಂದು ನಡೆಯಲಿರುವ ನೀಟ್-1 ಪರೀಕ್ಷೆಗೆ ಹಾಜರಾಗುವಂತೆ ರಾಜ್ಯ ಸರಕಾರ ಮನವಿ ಮಾಡಿದೆ.
ಶನಿವಾರ ವಿಧಾನಸೌಧದಲ್ಲಿ ಜಂಟಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾನೂನು ಮತ್ತು ಉನ್ನತ ಶಿಕ್ಷಣ ಸಚಿವ ಟಿ.ಬಿ.ಜಯಚಂದ್ರ, ಎ.28ರಂದು ಸುಪ್ರೀಂ ಕೋರ್ಟ್ ನೀಡಿದ ತೀರ್ಪು ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸುಗಳ ಪ್ರವೇಶಕ್ಕೆ ದೇಶಾದ್ಯಂತ ಏಕ ರೂಪದ ಪ್ರವೇಶ ಪರೀಕ್ಷೆ ನಡೆಸಬೇಕೆಂದು ಆದೇಶಿಸಿದೆ ಎಂದರು.
ಈ ಹಿನ್ನೆಲೆಯಲ್ಲಿ ರಾಜ್ಯದ ವಿದ್ಯಾರ್ಥಿಗಳು ಈ ಪ್ರವೇಶ ಪರೀಕ್ಷೆಯಲ್ಲಿ ಕಡ್ಡಾಯ ವಾಗಿ ಪಾಲ್ಗೊಳ್ಳಬೇಕು. ಮೇ 4 ಮತ್ತು 5 ರಂದು ರಾಜ್ಯ ಸರಕಾರ ನಡೆಸಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಯಲ್ಲೂ ವಿದ್ಯಾರ್ಥಿಗಳು ಹಾಜರಾಗಬೇಕೆಂದು ಅವರು ಮನವಿ ಮಾಡಿದರು.
ಪರೀಕ್ಷೆಯಲ್ಲಿ ಹಾಜರಾಗದ ವಿದ್ಯಾರ್ಥಿಗಳು ಸುಪ್ರೀಂಕೋರ್ಟ್ ನೀಡಿರುವ ಈ ತೀರ್ಪಿನ ಹಿನ್ನೆಲೆಯಲ್ಲಿ ಜು.24ರಂದು ನಡೆಯುವ ನೀಟ್-2 ಪರೀಕ್ಷೆಯಲ್ಲಿ ಕಡ್ಡಾಯವಾಗಿ ಹಾಜರಾಗಬೇಕೆಂದು ಜಯಚಂದ್ರ ಹೇಳಿದರು. ನಾಳೆ ನಡೆಯಲಿರುವ ನೀಟ್ ಪರೀಕ್ಷೆಯ ಕಡ್ಡಾಯವನ್ನು ಮುಂದೂಡಬೇಕೆಂದು ಹಲವು ರಾಜ್ಯಗಳು ಸಲ್ಲಿಸಿರುವ ಮೇಲ್ಮನವಿ ಸುಪ್ರೀಂ ಕೋರ್ಟ್ ಪೀಠದ ಮುಂದೆ ಮೇ 3 ರಂದು ವಿಚಾರಣೆಗೆ ಬರುವ ಸಾಧ್ಯತೆ ಇದೆ.
ರಾಜ್ಯ ಸರಕಾರವೂ ತನ್ನ ಮನವಿಯನ್ನು ನ್ಯಾಯಾಲಯದ ಮುಂದೆ ಸಲ್ಲಿಸುವ ಬಗ್ಗೆ ರವಿವಾರ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ಅವರು ತಿಳಿಸಿದರು. ದೇಶಾದ್ಯಂತ ಏಕರೂಪದ ಪ್ರವೇಶ ಪರೀಕ್ಷೆ ನಡೆಸಬೇಕೆಂಬ ಸುಪ್ರೀಂಕೋರ್ಟ್ ಆದೇಶವನ್ನು ಸರಕಾರಿಸ್ವಾಮ್ಯದ ವೈದ್ಯಕೀಯ ಕಾಲೇಜುಗಳು ಮಾತ್ರವಲ್ಲದೆ, ಖಾಸಗಿ ವೈದ್ಯಕೀಯ ಕಾಲೇಜುಗಳು ಅನುಷ್ಠಾನಗೊಳಿಸಬೇಕು ಖಾಸಗಿ ವೈದ್ಯಕೀಯ ಕಾಲೇಜುಗಳು ಪ್ರತ್ಯೇಕ ಪ್ರವೇಶ ಪರೀಕ್ಷೆ ನಡೆಸುವಂತಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಸ್ಪಷ್ಟಪಡಿಸಿದರು.ಅಖಿಲ ಭಾರತ ಮಟ್ಟದ ಪ್ರವೇಶ ಪರೀಕ್ಷೆಯ ಮಾದರಿಯಲ್ಲಿ ರಾಜ್ಯ ಸರಕಾರವು ಈಗಾಗಲೇ ಸ್ನಾತಕೋತ್ತರ ವೈದ್ಯಕೀಯ, ದಂತ ವೈದ್ಯಕೀಯ ಪ್ರವೇಶ ಪರೀಕ್ಷೆ ನಡೆಸಿ ಸೀಟು ಹಂಚಿಕೆ ಮಾಡಿದೆ. ರಾಜ್ಯಗಳ ಮೀಸಲಾತಿ ಕಾಪಾಡಿಕೊಳ್ಳಲಾಗುವುದು.
ಕೇಂದ್ರ ಸರಕಾರವು ನ್ಯಾಯಾಲಯದ ಮುಂದೆ ಪ್ರಮಾಣ ಪತ್ರ ಸಲ್ಲಿಸಿದೆ. ಇನ್ನು ಮುಂದೆ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಅನಿವಾಸಿ ಭಾರತೀಯರ ಮೀಸಲಾತಿ ಕೋಟಾ ಮಾತ್ರ ಲಭ್ಯವಾಗಲಿದೆ. ಉಳಿದ ಎಲ್ಲ ಸೀಟುಗಳೂ ನೀಟ್ ವ್ಯಾಪ್ತಿಗೆ ಒಳಪಡಲಿದೆ ಎಂದು ಅವರು ವಿವರಿಸಿದರು.
ಮೇ 4, 5 ಸಿಇಟಿ ಪರೀಕ್ಷೆ
ಮೇ 4ರಂದು ಬೆಳಗ್ಗೆ 10:30ರಿಂದ 11:50ರವರೆಗೆ ಜೀವಶಾಸ್ತ್ರ, ಮಧ್ಯಾಹ್ನ 2:30ರಿಂದ 3:50ರವರೆಗೆ ಗಣಿತ ಶಾಸ್ತ್ರ, ಮೇ 5ರಂದು ಬೆಳಗ್ಗೆ 10:30ರಿಂದ 11:50ರವರೆಗೆ ಭೌತಶಾಸ್ತ್ರ, ಮಧ್ಯಾಹ್ನ 2:30ರಿಂದ 3:50ರವರೆಗೆ ರಸಾಯನಶಾಸ್ತ್ರ ಪರೀಕ್ಷೆ ನಡೆಯಲಿದೆ.
ರಾಜ್ಯಾದ್ಯಂತ ಒಟ್ಟು 391 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಇವುಗಳಲ್ಲಿ 82 ಪರೀಕ್ಷಾ ಕೇಂದ್ರಗಳು ಬೆಂಗಳೂರಿನಲ್ಲಿವೆ. ಒಟ್ಟು 1.78ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದು, ಬೆಂಗಳೂರು ಕೇಂದ್ರದಲ್ಲಿ 42,978 ವಿದ್ಯಾರ್ಥಿಗಳು, 1.35 ಲಕ್ಷ ವಿದ್ಯಾರ್ಥಿಗಳು ಬೆಂಗಳೂರಿನ ಹೊರಗಡೆಯ ಕೇಂದ್ರಗಳಲ್ಲಿ ಹಾಜರಾಗಲಿದ್ದಾರೆ ಎಂದು ಜಯಚಂದ್ರ ಹೇಳಿದರು.
ಮೈಸೂರು ವಿಭಾಗದಲ್ಲಿ ಬರ ಅಧ್ಯಯನಕ್ಕೆ ಸಂಬಂಧಿಸಿದಂತೆ ನನ್ನ ಅಧ್ಯಕ್ಷತೆಯಲ್ಲಿ ನೇಮಕ ಮಾಡಲಾಗಿರುವ ಸಚಿವ ಸಂಪುಟ ಉಪ ಸಮಿತಿಯು ಸೋಮವಾರದಿಂದ ಎರಡನೆ ಹಂತದ ಪ್ರವಾಸ ಆರಂಭಿಸಲಿದೆ. ಕಳೆದ 10 ವರ್ಷಗಳಿಂದ ಮುಂಗಾರುಗಿಂತ ಮೊದಲೇ ಮಳೆ ಆಗುತ್ತಿತ್ತು. ಆದರೆ, ಈ ವರ್ಷ ಮಳೆಯಾಗದಿರುವುದು ಆತಂಕಕ್ಕೆ ಎಡೆಮಾಡಿಕೊಟ್ಟಿದೆ. ಉಪ ಸಮಿತಿಯು ತನ್ನ ಪ್ರವಾಸ ಪೂರ್ಣಗೊಳಿಸಿ ಸರಕಾರಕ್ಕೆ ವರದಿ ನೀಡಲಿದೆ.
- ಟಿ.ಬಿ.ಜಯಚಂದ್ರ, ಕಾನೂನು ಸಚಿವ







