ಮೇ 8: ಉಜಿರೆ ಎಸ್ಡಿಎಂ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ಸಮಾವೇಶ
ಮಂಗಳೂರು, ಮೇ 3: ಉಜಿರೆಯ ಎಸ್ಡಿಎಂ ಕಾಲೇಜಿನ ಸುವರ್ಣ ಮಹೋತ್ಸವ ಸಂಭ್ರಮ ವರ್ಷಾಚರಣೆ ಹಿನ್ನೆಲೆಯಲ್ಲಿ ಮೇ 8ರಂದು ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ಸಮಾವೇಶ ನಡೆಯಲಿದೆ.
ಸುದ್ದಿಗೋಷ್ಠಿಯಲ್ಲಿಂದು ಈ ವಿಷಯ ತಿಳಿಸಿದ ಸಂಯೋಜಕ ಸತೀಶ್ಚಂದ್ರ ಎನ್., ಅಂದು ದಿನಪೂರ್ತಿ ಕಾರ್ಯಕ್ರಮ ನಡೆಯಲಿದೆ ಎಂದರು.
ಸಂಜೆ 4 ಗಂಟೆಗೆ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ರಾಜ್ಯದ ಉನ್ನತ ಶಿಕ್ಷಣ ಸಚಿವ ಟಿ.ಬಿ. ಜಯಚಂದ್ರ, ಕಾಲೇಜಿನ ಹಳೆ ವಿದ್ಯಾರ್ಥಿ ಹಾಗೂ ಸಂಸದ ಪ್ರತಾಪ್ ಸಿಂಹ ಹಾಗೂ ಶಾಸಕ ವಸಂತ ಬಂಗೇರ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಹಿರಿಯ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷೆ ಹೇಮಾವತಿ ಹೆಗ್ಡೆ, ಎಸ್ಡಿಎಂ ಸಂಸ್ಥೆಯ ಉಪಾಧ್ಯಕ್ಷ ಪ್ರೊ. ಎಸ್. ಪ್ರಭಾಕರ್, ಕಾರ್ಯದರ್ಶಿ ಡಿ. ಹಷೇಂದ್ರ ಕುಮಾರ್ , ಡಾ.ಬಿ. ಯಶೋವರ್ಮ ಹಾಗೂ ಪ್ರಾಂಶುಪಾಲರಾದ ಪ್ರೊ. ಕೆ.ಎಸ್. ಮೋಹನನಾರಾಯಣ ಅತಿಥಿಗಳಾಗಿ ಭಾಗವಹಿಸಲಿರುವರು.
ಬೆಳಗ್ಗೆ 9-30 ರಿಂದ ಹಿರಿಯ ವಿದ್ಯಾರ್ಥಿಗಳ ನೋಂದಣಿ ನಡೆಯಲಿದೆ. ಮಧ್ಯಾಹ್ನದವರೆಗೆ ಹಿರಿಯ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರ ಸಂವಾದ, ಹಿರಿಯ ವಿದ್ಯಾರ್ಥಿಗಳ ಪರಿಚಯ ಮಾತುಕತೆ ನಡೆಯಲಿದೆ. ಬಳಿಕ ಹಿರಿಯ ವಿದ್ಯಾರ್ಥಿಗಳು ಕಾಲೇಜಿನ ವಿವಿಧ ವಿಭಾಗಗಳಿಗೆ ಭೇಟಿ ನೀಡಲಿದ್ದಾರೆ. ಸಭಾ ಕಾರ್ಯಕ್ರಮದಲ್ಲಿ ಗುರುವಂದನಾ ಕಾರ್ಯಕ್ರಮ ನಡೆಯಲಿದೆ.
ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಹಾಗೂ ಸಂಸ್ಥೆಯ ಹೆಮ್ಮೆಯ ಹಿರಿಯ ವಿದ್ಯಾರ್ಥಿ ವಿಲಾಸ ನಾಯಕ್ ರಿಂದ ವರ್ಣ ವಿಲಾಸ ಕಾರ್ಯಕ್ರಮ ನಡೆಯಲಿದೆ. ಸಂಜೆ 6-30 ರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
ಕಳೆದ 50 ವರ್ಷಗಳಲ್ಲಿ ಪಿಯುಸಿ, ಪದವಿ ಹಾಗೂ ಸ್ನಾತಕೋತ್ತರ ವಿಭಾಗಗಳಲ್ಲಿ ಸುಮಾರು 70,000 ಕ್ಕೂ ಅಧಿಕ ವಿದ್ಯಾರ್ಥಿಗಳು ಶಿಕ್ಷಣ ಪಡೆದಿದ್ದು, ತಮ್ಮ ಹಿಂದಿನ ಸಹಪಾಠಿಗಳನ್ನು ಪರಿಚಯಿಸುವ ಅಪೂರ್ವ ಅವಕಾಶ ಇದಾಗಲಿದೆ ಎಂದು ಅವರು ಹೇಳಿದರು.
ಗೋಷ್ಠಿಯಲ್ಲಿ ಹಳೆ ವಿದ್ಯಾರ್ಥಿ ಡಾ. ಅನಂತ ಕೃಷ್ಣ ಭಟ್, ಸುವರ್ಣ ಮಹೋತ್ಸವ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪೀತಾಂಬರ ಹೆರಾಜೆ, ಉಪಾಧ್ಯಕ್ಷ ಗುರುನಾಥ ಪ್ರಭು ಉಪಸ್ಥಿತರಿದ್ದರು.