ಕಸಾಪ ಜಿಲ್ಲಾ ಕಚೇರಿಯಲ್ಲಿ ಬಸವೇಶ್ವರ ಜಯಂತಿ ಆಚರಣೆ

ಮಡಿಕೇರಿ, ಮೇ 9: ನಗರದ ಕೋಟೆ ಆವರಣದಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಕಚೇರಿಯಲ್ಲಿ ಸೋಮವಾರ ಬಸವೇಶ್ವರ ಜಯಂತ್ಯುತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಬಸವೇಶ್ವರರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಬಳಿಕ ಮಾತನಾಡಿದ ಕಸಾಪ ಜಿಲ್ಲಾಧ್ಯಕ್ಷ ಲೋಕೇಶ್ ಸಾಗರ್, ಬಸವೇಶ್ವರರು ವಚನ ಸಾಹಿತ್ಯದ ಮೂಲಕ ಕನ್ನಡ ಭಾಷಾ ಬೆಳವಣಿಗೆಗೆ ಮಹತ್ತರ ಕೊಡುಗೆ ನೀಡಿದರು. 12ನೆ ಶತಮಾನದಲ್ಲಿ ಎಲ್ಲರಿಗೂ ಅರ್ಥವಾಗುವ ರೀತಿಯಲ್ಲಿ ಸರಳ ಕನ್ನಡ ಭಾಷೆಯಲ್ಲಿ ವಚನಗಳನ್ನು ರಚಿಸುವ ಮೂಲಕ ಕನ್ನಡನಾಡು ಕಟ್ಟಲು ಅಂದೇ ಶ್ರಮಿಸಿದ್ದರು ಎಂದು ಹೇಳಿದರು. ಕಸಾಪ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಭಾಷ್ ನಾಣಯ್ಯ ಮಾತನಾಡಿ, ಬಸವೇಶ್ವರರು ವಚನಗಳ ಮೂಲಕ ಸಾಮಾಜಿಕ ಜಾಗೃತಿ ಮೂಡಿಸಲು ಪ್ರಯತ್ನಿಸಿದರು. ಬಸವೇಶ್ವರರ ಆದರ್ಶ, ಚಿಂತನೆಗಳನ್ನು ಎಲ್ಲರೂ ಅಳವಡಿಸಿಕೊಳ್ಳುವಂತಾಗಬೇಕು. ಬಸವೇಶ್ವರರ ವಚನಗಳನ್ನು ಪ್ರತಿಯೊಬ್ಬರೂ ಅಧ್ಯಯನ ಮಾಡುವಂತಾಗಬೇಕು ಎಂದರು. ಗೌರವ ಕಾರ್ಯದರ್ಶಿ ಕೆ.ಎಸ್.ರಮೇಶ್, ನಿರ್ದೇಶಕರಾದ ಶಾಲಿನಿ, ಎಚ್.ಜೆ.ಕುಮಾರ್, ಪತ್ರಕರ್ತ ಕಿಶೋರ್ ರೈ, ಪ್ರಶಾಂತ್, ರಾಜು, ಮತ್ತಿತರರು ಉಪಸ್ಥಿತರಿದ್ದರು. ನಗರದ ಕೆಎಸ್ಸಾರ್ಟಿಸಿ ಬಸ್ ಡಿಪೋದಲ್ಲಿ ಕೂಡ ಬಸವ ಜಯಂತಿಯನ್ನು ಅತ್ಯಂತ ಶ್ರದ್ಧೆಯಿಂದ ಆಚರಿಸಲಾಯಿತು. ಭಾವಚಿತ್ರಕ್ಕೆ ನಮಿಸಿದ ಗಣ್ಯರು ಜಗಜ್ಯೋತಿ ಬಸವೇಶ್ವರರ ಆದರ್ಶಗಳನ್ನು ಪಾಲಿಸುವಂತೆ ಕರೆ ನೀಡಿದರು.





