ಬೆಳ್ತಂಗಡಿ ತಾಪಂನಲ್ಲಿ ಬಿಜೆಪಿಗೆ ಬಹುಮತ: ಅಧ್ಯಕ್ಷೆಯಾಗಿ ಕಾಂಗ್ರೆಸ್ ಅಭ್ಯರ್ಥಿ ಅವಿರೋಧ ಆಯ್ಕೆ ಸಂಭವ
ಅಧ್ಯಕ್ಷೆಯಾಗಿ ಕಾಂಗ್ರೆಸ್ ಸದಸ್ಯೆ ದಿವ್ಯಜ್ಯೋತಿ ಆಯ್ಕೆ ಬಹುತೇಕ ಖಚಿತ
ಬೆಳ್ತಂಗಡಿ, ಮೇ 9: ಬೆಳ್ತಂಗಡಿ ತಾಲೂಕು ಪಂಚಾಯತು ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಗಳಿಗೆ ಮಂಗಳವಾರ ಚುನಾವಣೆ ನಡೆಯಲಿದ್ದು ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ ಮಹಿಳಾ ಮೀಸಲಾತಿಯಿದ್ದು ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮೀಸಾಲಾತಿಯಿದೆ. ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಪರಿಶಿಷ್ಟ ಜಾತಿ ಮಹಿಳೆಗೆ ವಾತ್ರ ಅವಕಾಶವಿದ್ದು ಕೇವಲ ಓರ್ವ ಸದಸ್ಯೆ ಸ್ಪರ್ಧಿಸುವ ಅರ್ಹತೆ ಹೊಂದಿದ್ದಾರೆ. ಈ ಹಿನ್ನೆಲೆಯಲ್ಲಿ ಅರಸಿನಮಕ್ಕಿ ಕ್ಷೇತ್ರದಿಂದ ಆಯ್ಕೆಯಾಗಿರುವ ಕಾಂಗ್ರೆಸ್ ಪಕ್ಷದ ಸದಸ್ಯೆ ದಿವ್ಯಜ್ಯೋತಿ ಅಧ್ಯಕ್ಷೆಯಾಗಿ ಅವಿರೋಧವಾಗಿ ಆಯ್ಕೆಯಾಗುವುದು ಖಚಿತವಾಗಿದೆ.
ಉಪಾಧ್ಯಕ್ಷ ಸ್ಥಾನ ಬಿಜೆಪಿಯ ಪಾಲಾಗಲಿದ್ದು ಹಲವರು ಆಕಾಂಕ್ಷಿಗಳಿದ್ದಾರೆ. ಬೆಳ್ತಂಗಡಿ ತಾಪಂನಲ್ಲಿ 26 ಸ್ಥಾನಗಳಿದ್ದು ಬಿಜೆಪಿ 14 ಸ್ಥಾನಗಳನ್ನು ಪಡೆದುಕೊಂಡು ಬಹುಮತ ಗಳಿಸಿಕೊಂಡಿದೆ. ಕಾಂಗ್ರೆಸ್ 12 ಸ್ಥಾನಗಳನ್ನು ಗಳಿಸಿಕೊಂಡಿದೆ. ಆದರೆ ಮೀಸಲಾತಿಯ ಕಾರಣದಿಂದ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ಪಾಲಾಗಲಿದೆ.
ಅಧ್ಯಕ್ಷ ಸ್ಥಾನದ ಮೀಸಲಾತಿಗೆ ಸಂಬಂಧಿಸಿದಂತೆ ಬಿಜೆಪಿ ವಿರೋಧ ವ್ಯಕ್ತಪಡಿಸಿ ನ್ಯಾಯಾಲಯಕ್ಕೆ ಹೋಗಲು ಮುಂದಾಗಿತ್ತು. ಆದರೆ ಯಾವುದೂ ಪ್ರಯೋಜನವಾಗಿಲ್ಲ. ಇದೀಗ ಚುನಾವಣೆ ನಡೆಯಲಿದ್ದು ಅಧ್ಯಕ್ಷ ಸ್ಥಾನ ಕಾಂಗ್ರೆಸ್ ಪಾಲಾಗಲಿದೆ.
ಉಪಾಧ್ಯಕ್ಷ ಸ್ಥಾನದ ಬಗ್ಗೆ ಬಿಜೆಪಿಯಲ್ಲಿ ಇನ್ನೂ ಅಂತಿಮ ನಿರ್ಧಾರವಾಗಿಲ್ಲ. ಈ ಬಗ್ಗೆ ನಾಯಕರ ಮಟ್ಟದಲ್ಲಿ ಚರ್ಚೆಗಳು ನಡೆಯುತ್ತಿದೆ.