ನರೇಶ್ ಶೆಣೈ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕೃತ
ವಿನಾಯಕ ಬಾಳಿಗಾ ಹತ್ಯೆ ಪ್ರಕರಣ

ಮಂಗಳೂರು,ಜೂ 9: ಆರ್ಟಿಐ ಕಾರ್ಯಕರ್ತ ವಿನಾಯಕ್ ಬಾಳಿಗ ಹತ್ಯೆ ಪ್ರಕರಣದ ಆರೋಪಿ ನಮೋ ಬ್ರಿಗೇಡ್ ಮುಖ್ಯಸ್ಥ ನರೇಶ್ ಶೆಣೈ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ರದ್ದುಪಡಿಸಿದೆ.
ಎರಡೂವರೆ ತಿಂಗಳ ಹಿಂದೆ ಆರ್ಟಿಐ ಕಾರ್ಯಕರ್ತ ವಿನಾಯಕ್ ಬಾಳಿಗರನ್ನು ಹತ್ಯೆ ಮಾಡಿದ ನಂತರ ನಮೋ ಬ್ರಿಗೇಡ್ ಮುಖ್ಯಸ್ಥ ನರೇಶ್ ಶೆಣೈ ತಲೆಮರೆಸಿಕೊಂಡಿದ್ದ. ದ.ಕ. ಜಿಲ್ಲಾ ನ್ಯಾಯಾಲಯದಲ್ಲಿ ಈತ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದನು. ಜಿಲ್ಲಾ ನ್ಯಾಯಾಲಯ ಇತ್ತೀಚೆಗೆ ಈತನಿಗೆ ನಿರೀಕ್ಷಣಾ ಜಾಮೀನು ರದ್ದುಪಡಿಸಿತ್ತು.
ನಂತರ ಹೈಕೋರ್ಟ್ ಮೆಟ್ಟಿಲೇರಿದ್ದ ನರೇಶ್ ಶೆಣೈ ಪರ ವಕೀಲರು ಈತನಿಗೆ ನಿರೀಕ್ಷಣಾ ಜಾಮೀನು ನೀಡುವಂತೆ ವಾದ ಮಾಡಿದ್ದರು. ಆದರೆ ವಿಚಾರಣೆ ನಡೆಸಿದ ಹೈಕೋರ್ಟ್ ನರೇಶ್ ಶೆಣೈಗೆ ನಿರೀಕ್ಷಣಾ ಜಾಮೀನು ರದ್ದುಗೊಳಿಸಿದೆ.
ಹೈಕೋರ್ಟ್ ನ್ಯಾಯಧೀಶ ಫಣೀಂದ್ರ ಈ ಆದೇಶವನ್ನು ನೀಡಿದ್ದಾರೆ. ನರೇಶ್ ಶೆಣೈಗೆ ನಿರೀಕ್ಷಣಾ ಜಾಮೀನು ನೀಡುವುದನ್ನು ವಿರೋಧಿಸಿ ವಿನಾಯಕ್ ಬಾಳಿಗಾ ಕುಟುಂಬದ ಪರ ವಕೀಲ ರವೀಂದ್ರ ಕಾಮತ್ ಮತ್ತು ಪಬ್ಲಿಕ್ ಪ್ರಾಸಿಕ್ಯೂಟರ್ ನವಾಝ್ ವಾದ ಮಂಡಿಸಿದ್ದರು.







