ಪಡೀಲ್-ಬಜಾಲ್ ಕೆಳಸೇತುವೆ ಸಮಸ್ಯೆ ಪರಿಹಾರಕ್ಕೆ ಮನವಿ
ಮಂಗಳೂರು, ಜು.11: ಪಡೀಲ್-ಬಜಾಲ್ ಮುಖ್ಯರಸ್ತೆಯಲ್ಲಿ ರೈಲ್ವೆ ಕೆಳಸೇತುವೆ ನಿರ್ಮಾಣಗೊಂಡು ವರ್ಷ ಕಳೆದರೂ ಈ ಮಾರ್ಗದಲ್ಲಿರುವ ಸಂಪರ್ಕ ರಸ್ತೆಯನ್ನು ಮನಪಾ ಈವರೆಗೂ ಸರಿಪಡಿಸಿಲ್ಲ. ಇದರಿಂದಾಗಿ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ ಎಂದು ಆರೋಪಿಸಿ ಮತ್ತು ಸಮಸ್ಯೆಗೆ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿ ಡಿವೈಎಫ್ಐ ನೇತೃತ್ವದ ನಿಯೋಗ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ.
ಬಜಾಲ್, ಫೈಸಲ್ನಗರ, ಜಲ್ಲಿಗುಡ್ಡೆ, ವಿಜಯನಗರ ಪ್ರದೇಶಗಳಿಗೆ ಸಂಪರ್ಕಿಸುವ ರಸ್ತೆಯನ್ನು ಸಂಪೂರ್ಣ ಮುಚ್ಚಲಾಗಿದೆ. ಈ ರೈಲ್ವೆ ಕೆಳಸೇತುವೆಯ ಕಾಮಗಾರಿ ಅವೈಜ್ಞಾನಿಕವಾಗಿದ್ದು ಮಳೆಗಾಲದಲ್ಲಿ ನೀರು ಹರಿದು ಹೋಗುವಂತಹ ಯಾವುದೇ ವ್ಯವಸ್ಥೆಯನ್ನು ಕಲ್ಪಿಸಲಾಗಿಲ್ಲ. ಇದರಿಂದಾಗಿ ಮಳೆನೀರು ಕೆಳಸೇತುವೆಯಲ್ಲಿ ಶೇಖರಣೆ ಕೊಂಡು ಸೇತುವೆ ಮುಳುಗಡೆಯಾಗಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ಸುರೇಶ್ ಬಜಾಲ್, ಬಶೀರ್ ಜಲ್ಲಿಗುಡ್ಡೆ, ಪ್ರೇಮನಾಥ್ ಜಲ್ಲಿಗುಡ್ಡೆ, ಮೋಹನ್ ಮೊದಲಾದವರು ನಿಯೋಗದಲ್ಲಿದ್ದರು.
Next Story