ಶುಕ್ರವಾರ ಕಪ್ಪುಬ್ಯಾಡ್ಜ್ ಧರಿಸಿ ನ್ಯಾಯಾಲಯದ ಕಲಾಪದಲ್ಲಿ ಭಾಗವಹಿಸಲಿದ್ದಾರೆ ವಕೀಲರು
ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ ಸಿಬಿಐಗೆ ವಹಿಸಲು ಒತ್ತಾಯ

ಮಂಗಳೂರು, ಜು.14: ಡಿವೈಎಸ್ಪಿ ಗಣಪತಿ ಅವರ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕೆಂದು ಆಗ್ರಹಿಸಿ ಶುಕ್ರವಾರ ಮಂಗಳೂರು ವಕೀಲರ ಸಂಘದ ಸದಸ್ಯರು ಕಪ್ಪು ಬ್ಯಾಡ್ಜ್ ಧರಿಸಿ ನ್ಯಾಯಾಲಯದ ಕಲಾಪದಲ್ಲಿ ಭಾಗವಹಿಸಲಿದ್ದಾರೆ ಎಂದು ಮಂಗಳೂರು ವಕೀಲರ ಸಂಘದ ಅಧ್ಯಕ್ಷ ಎಸ್. ಪಿ.ಚಂಗಪ್ಪ ಹೇಳಿದರು.
ಮಂಗಳೂರು ವಕೀಲರ ಸಂಘದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಶುಕ್ರವಾರದಂದು ಬೆಳಗ್ಗೆ 10:30ರಿಂದ 11 ಗಂಟೆಯವರೆಗೆ ವಕೀಲರ ಸಂಘದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಗುವುದು. ಕಕ್ಷಿದಾರರಿಗೆ ಮತ್ತು ನ್ಯಾಯಾಲಯದ ಕಲಾಪಕ್ಕೆ ತೊಂದರೆಯಾಗದಂತೆ ಕಪ್ಪು ಬ್ಯಾಡ್ಜ್ ಧರಿಸಿ ನ್ಯಾಯಾಲಯದ ಕಲಾಪದಲ್ಲಿ ಭಾಗವಹಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ಡಿವೈಎಸ್ಪಿ ಗಣಪತಿಯವರು ಆತ್ಮಹತ್ಯೆಗೈಯುವ ಮುನ್ನ ಟಿ.ವಿ. ಮಾಧ್ಯಮಗಳಲ್ಲಿ ಮಾಡಿದ ಆರೋಪವನ್ನು ನನ್ನಲ್ಲಿ ಘಟನೆಯ ಐದು ದಿನಗಳ ಮುಂಚೆ ಹಂಚಿಕೊಂಡಿದ್ದರು. ಗಣಪತಿ ಅವರು ಮಾಧ್ಯಮಗಳಿಗೆ ನೀಡಿರುವ ಹೇಳಿಕೆಯನ್ನು ಡೆತ್ ಡಿಕ್ಲರೇಶನ್ ಎಂದು ಪರಿಗಣಿಸಬೇಕು. ಗಣಪತಿ ಆರೋಪ ಮಾಡಿರುವ ಸಚಿವ ಕೆ.ಜೆ. ಜಾರ್ಜ್, ಅಧಿಕಾರಿಗಳಾದ ಎ.ಎಂ. ಪ್ರಸಾದ್, ಪ್ರಣವ್ ಮೊಹಂತಿ ಮತ್ತು ಕೆಂಪಯ್ಯ ಅವರ ಮೇಲೆ ಎಫ್ಐಆರ್ ದಾಖಲಿಸಬೇಕು ಎಂದು ಒತ್ತಾಯಿಸಿದರು.
ನ್ಯಾಯಾಂಗ ತನಿಖೆಯಿಂದ ಸರಿಯಾದ ಫಲಿತಾಂಶ ಬರಲು ಸಾಧ್ಯವಿಲ್ಲ. ಅದರಲ್ಲಿ ನ್ಯಾಯಾಲಯದಲ್ಲಿ ನಡೆಯುವ ವಿಚಾರಣೆಯಂತೆ ವಿಚಾರಣೆ ಆಗುವುದಿಲ್ಲ. ಸಿಐಡಿಯಿಂದಲೂ ಸತ್ಯಾಂಶ ಹೊರಬರುವುದಿಲ್ಲ. ಆದ ಕಾರಣ ಸಿಬಿಐ ತನಿಖೆಯೇ ನಡೆಯಬೇಕೆಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಂಗಳೂರು ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಎಚ್.ವಿ., ಖಜಾಂಚಿ ಯತೀಶ್ ಕುಮಾರ್, ಕಾರ್ಯಕಾರಿ ಸಮಿತಿ ಸದಸ್ಯ ರಾಹುಲ್ ಡಿಸಿಲ್ವ ಉಪಸ್ಥಿತರಿದ್ದರು.







