ದುಶ್ಚಟಕೆ್ಕ ದಾಸರಾಗದಂತೆ ವಿದ್ಯಾರ್ಥಿಗಳಿಗೆ ಕರೆ

ಮಡಿಕೇರಿ, ಜು.16 : ವಿದ್ಯಾರ್ಥಿ ಜೀವನ ಅತ್ಯಂತ ಮೌಲ್ಯವುಳ್ಳದಾಗಿದ್ದು, ಇತ್ತೀಚಿನ ದಿನಗಳಲ್ಲಿ ಬಹಳಷ್ಟು ವಿದ್ಯಾರ್ಥಿಗಳು ಮೊಬೈಲ್, ವಾಟ್ಸ್ಆ್ಯಪ್, ಫೇಸ್ಬುಕ್ ಮೊದಲಾದ ಚಟಗಳಿಗೆ ದಾಸರಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಸುಂಟಿಕೊಪ್ಪ ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ಅನೂಪ್ ಮಾದಪ್ಪ ಅಭಿಪ್ರಾಯಪಟ್ಟಿದ್ದಾರೆ.
ಮಾದಾಪುರದ ಡಿ ಚೆನ್ನಮ್ಮ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಅವರು ದುಶ್ಚಟ ಸಂಬಂಧ ಹಲವಾರು ಅಪರಾಧ ಪ್ರಕರಣಗಳು ಪೊಲೀಸ್ ಠಾಣೆಯಲ್ಲಿ ದಾಖಲಾಗುತ್ತಿರುವುದು ಪೋಷಕರು ಆತಂಕ ಪಡುವ ವಿಚಾರವಾಗಿದೆ ಎಂದರು.
ಬಂಗಾರದಂತಹ ವಿದ್ಯಾರ್ಥಿ ಜೀವನವನ್ನು ಹಾಳು ಮಾಡಿಕೊಳ್ಳದೆ ಗುಣಮಟ್ಟವಾದ ಶಿಕ್ಷಣ ಪಡೆದು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂದು ಸಲಹೆ ನೀಡಿದರು.ಅಧ್ಯಕ್ಷತೆಯನ್ನು ಪ್ರಭಾರ ಪ್ರಾಂಶುಪಾಲರಾದ ಸಿ.ಜಿ.ಮಾದಪ್ಪ ವಹಿಸಿದ್ದರು. ಕಾರ್ಯದರ್ಶಿಗಳಾದ ಎಂ.ಬಿ.ಬೋಪಣ್ಣ, ಪ್ರಾಧ್ಯಾಪಕರಾದ ಎಲ್.ಪಿ.ಪಾಲಾಕ್ಷ, ವಿದ್ಯಾರ್ಥಿ ಸಂಘದ ಉಪಾಧ್ಯಕ್ಷೆ ಬಿ.ಎಂ.ಪ್ರಮೀಳಾ ಉಪಸ್ಥಿತರಿದ್ದರು.





