ಮೂಲಭೂತ ಸೌಲಭ್ಯ ಈಡೇರಿಸುವಂತೆ ಆಗ್ರಹಿಸಿ ಧರಣಿ

ಮಡಿಕೇರಿ, ಜು.22: ನಗರದ ಮಹದೇವಪೇಟೆ ರಸ್ತೆ ವಿಸ್ತರಣೆ ಕಾರ್ಯ ವಿಳಂಬವಾಗುತ್ತಿದ್ದು, ಅವೈಜ್ಞಾನಿಕವಾಗಿ ಕಾಮಗಾರಿ ನಡೆಯುತ್ತಿದೆ ಎಂದು ಆರೋಪಿಸಿ ಪೀಪಲ್ ಮೂವ್ಮೆಂಟ್ಸ್ ಫಾರ್ ಹ್ಯೂಮನ್ ರೈಟ್ಸ್ ಸಂಘಟನೆಯ ಪ್ರಮುಖರು ಹಾಗೂ ್ಥಳೀಯ ನಿವಾಸಿಗಳು ಧರಣಿ ನಡೆಸಿದ್ದಾರೆ.
ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಪ್ರತಿಭಟನೆ ನಡೆಸಿದ ಪ್ರಮುಖರು ನಗರಸಭೆಯ ವಿರುದ್ಧ ಘೋಷಣೆೆಗಳನ್ನು ಕೂಗಿ, ಕಾಮಗಾರಿಯನ್ನು ಚುರುಕುಗೊಳಿಸಬೇಕು ಮತ್ತು ಚರಂಡಿಗಳಿಗೆ ಸ್ಲ್ಯಾಬ್ಗಳನ್ನು ಅಳವಡಿಸುವ ಮೂಲಕ ಪಾದಚಾರಿಗಳಿಗೆ ಅನುಕೂಲ ಕಲ್ಪಿಸಬೇಕೆಂದು ಒತ್ತಾಯಿಸಿದರು. ಸ್ಥಳಕ್ಕೆ ನಗರಸಭಾ ಅಧ್ಯಕ್ಷರು ಹಾಗೂ ಪೌರಾಯುಕ್ತರು ಬರಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಸ್ಥಳಕ್ಕೆ ಆಗಮಿಸಿದ ನಗರಸಭಾ ಇಂಜಿನಿಯರ್, ಚರಂಡಿಗಳಿಗೆ ಸ್ಲ್ಯಾಬ್ಗಳನ್ನು ಅಳವಡಿಸಲು ಉದ್ದೇಶಿತ ಯೋಜನೆಯಲ್ಲಿ ಅವಕಾಶವಿಲ್ಲವೆಂದು ತಿಳಿಸಿದರು. ಇದರಿಂದ ತೀವ್ರ ಅಸಮಾಧಾನಗೊಂಡ ಪ್ರತಿಭಟನಾಕಾರರು, ಅಧಿಕಾರಿಗಳು ಹಾರಿಕೆಯ ಉತ್ತರ ನೀಡುತ್ತಿದ್ದಾರೆ. ಜನರ ಸಂಕಷ್ಟಕ್ಕೆ ಸ್ಪಂದಿಸದೆ ಅಧ್ಯಕ್ಷರು ಹಾಗೂ ಪೌರಾಯುಕ್ತರು ಪಲಾಯನ ವಾದ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಸಂಘಟನೆಯ ಅಧ್ಯಕ್ಷ ಹರೀಶ್ ಆಚಾರ್ಯ, ನಗರಸಭೆಯ ನಿರ್ಲಕ್ಷ್ಯವನ್ನು ತೀವ್ರವಾಗಿ ಖಂಡಿಸಿದರು. ಮೂಲಭೂತ ಸೌಲಭ್ಯಗಳನ್ನು ನೀಡದೆ ಮಾನವ ಹಕ್ಕುಗಳನ್ನು ಉಲ್ಲಂಘಿಸುತ್ತಿರುವ ಅಧ್ಯಕ್ಷರು ಹಾಗೂ ಪೌರಾಯುಕ್ತರ ವಿರುದ್ಧ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡುವುದಾಗಿ ತಿಳಿಸಿದರು.
ಜಿಲ್ಲಾಧಿಕಾರಿಗೆ ಮನವಿ
ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆಯುತ್ತಿದ್ದ ಜನ ಸಂಪರ್ಕ ಸಭೆಗೆ ತೆರಳಿದ ಹರೀಶ್ ಆಚಾರ್ಯ ಅವರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ, ಮಹದೇವಪೇಟೆ ರಸ್ತೆ ಅವ್ಯವಸ್ಥೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ನಗರದ ಜನರಿಗೆ ಆಗುತ್ತಿರುವ ಕಷ್ಟ ನಷ್ಟದ ಬಗ್ಗೆ ನ್ಯಾಯಾಲಯದ ಮೊರೆ ಹೋಗುವುದಾಗಿ ತಿಳಿಸಿದರು.ಈ ಸಂದರ್ಭ ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಅವರು ಮಾತನಾಡಿ, ಯೋಜನೆ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಪ್ರತಿಭಟನೆಯಲ್ಲಿ ಸಂಘಟನೆಯ ಪ್ರಮುಖರಾದ ಆರ್.ಬಿ. ರವಿ, ಇ.ಎಲ್. ಅಶೋಕ್, ನಿತ್ಯಾನಂದ ರೈ, ಇಂದಿರಾ ನಗರದ ಹರೀಶ್, ಗಣೇಶ್ ಆಚಾರ್ಯ, ಶಫಿ, ಇಬ್ರಾಹೀಂ, ಜಯರಾಂ ಮತ್ತಿತರರು ಪಾಲ್ಗೊಂಡಿದ್ದರು.







