ತನಿಖೆ ಪ್ರಗತಿಯಲ್ಲಿದೆ: ಸಿಎಂ
ಮೈಸೂರು ಸ್ಫೋಟ ಪ್ರಕರಣ

ಬೆಂಗಳೂರು, ಆ.3: ಮೈಸೂರು ಜಿಲ್ಲಾ ನ್ಯಾಯಾಲಯದಲ್ಲಿ ಸಂಭವಿಸಿದ ನಿಗೂಢ ಸ್ಫೋಟ ಪ್ರಕರಣವನ್ನು ಎನ್ಐಎ(ರಾಷ್ಟ್ರೀಯ ತನಿಖಾ ತಂಡ) ಹಾಗೂ ಕೇಂದ್ರ ಗುಪ್ತಚರ ಇಲಾಖೆ ತನಿಖೆ ನಡೆಸುತ್ತಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬುಧವಾರ ಮುಖ್ಯಮಂತ್ರಿ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಎಪ್ರಿಲ್ನಲ್ಲಿ ಆಂಧ್ರಪ್ರದೇಶದ ಚಿತ್ತೂರಿನ ನ್ಯಾಯಾಲಯದಲ್ಲಿ ಹಾಗೂ ಜು. 14ರಂದು ಕೇರಳದ ಕೊಲ್ಲಂ ನ್ಯಾಯಾಲಯದಲ್ಲಿ ಸ್ಫೋಟ ಪ್ರಕರಣಗಳು ನಡೆದಿವೆ. ಈ ಹಿನ್ನೆಲೆಯಲ್ಲಿ ಇವೆಲ್ಲ ಸ್ಫೋಟಗಳಿಗೆ ಸಾಮ್ಯತೆಗಳಿವೆ ಎಂಬುದರ ಕುರಿತು ಎನ್ಐಎ ತನಿಖೆ ನಡೆಸುತ್ತಿರುವುದರಿಂದ ಈಗಲೇ ಏನನ್ನೂ ಹೇಳಲಾಗುವುದಿಲ್ಲ ಎಂದು ತಿಳಿಸಿದರು.
ಈ ಪ್ರಕರಣ ಕುರಿತು ಯಾವುದೇ ಸಂಘಟನೆ ಈವರೆಗೆ ಹೊಣೆ ಹೊತ್ತುಕೊಂಡಿಲ್ಲ. ಬಹುಶಃ ಭಯದ ವಾತಾವರಣ ಸೃಷ್ಟಿಸಿ ತಮ್ಮ ಅಸ್ತಿತ್ವವನ್ನು ತೋರ್ಪಡಿಸುವುದಕ್ಕಾಗಿ ದುಷ್ಕರ್ಮಿಗಳು ದೇಶಾದ್ಯಂತ ಸ್ಫೋಟಗಳನ್ನು ನಡೆಸುತ್ತಿದ್ದಾರೆ. ಇವೆಲ್ಲವುಗಳ ಕುರಿತು ಎನ್ಐಎ ತನಿಖೆ ನಡೆಸುತ್ತಿದೆ ಎಂದು ಸಿದ್ದರಾಮಯ್ಯ ನುಡಿದರು.
ಗೃಹ ಸಚಿವ ಡಾ.ಜಿ.ಪರಮೇಶ್ವರ್, ರಾಜ್ಯ ಸರಕಾರದ ಮುಖ್ಯಕಾರ್ಯದರ್ಶಿ ಅರವಿಂದ ಜಾಧವ್, ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಸುಭಾಷ್ ಚಂದ್ರ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎಲ್.ಕೆ.ಅತೀಕ್ ಹಾಗೂ ತುಷಾರ್ ಗಿರಿನಾಥ್ ಮತ್ತಿತರರು ಪಾಲ್ಗೊಂಡಿದ್ದರು.





