ಬುಡಕಟ್ಟು ಜನರ ಕುಂದುಕೊರತೆ ಆಲಿಸಿ ಸೌಲಭ್ಯ ಒದಗಿಸಿ: ಡಾ. ರಾಮೇಶ್ವರ್ ಓರನ್
ಪ್ರಗತಿ ಪರಿಶೀಲನೆ ಸಭೆೆ

ಮಡಿಕೇರಿ, ಸೆ.19: ಬುಡಕಟ್ಟು ಜನರ ಕುಂದುಕೊರತೆಗಳನ್ನು ಆಲಿಸಿ ಸರಕಾರದ ಸೌಲಭ್ಯವನ್ನು ಕಾಲಮಿತಿಯೊಳಗೆ ನೀಡಬೇಕು ಎಂದು ರಾಷ್ಟ್ರೀಯ ಪರಿಶಿಷ್ಟ ಪಂಗಡದ ಆಯೋಗದ ಅಧ್ಯಕ್ಷ ಡಾ. ರಾಮೇಶ್ವರ್ ಓರನ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ನಗರದ ಹೊಟೇಲ್ ವ್ಯಾಲಿವ್ಯೆನಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಸೋಮವಾರ ನಡೆದ ಪ್ರಗತಿ ಪರಿಶೀಲನೆ ಸಭೆೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬುಡಕಟ್ಟು ಜನರ ಸಾಮಾಜಿಕ ಹಾಗೂ ಆರ್ಥಿಕ ಅಭಿವೃದ್ಧ್ದಿಗೆ ವಿಶೇಷ ನಿಬಂಧನೆಗಳು ಮತ್ತು ರಕ್ಷಣೋಪಾಯಗಳಿಗೆ ಭಾರತದ ಸಂವಿಧಾನದಲ್ಲಿ ಹಲವಾರು ಉಪಕ್ರಮಗಳೊಂದಿಗೆ ಒದಗಿಸಲಾಗಿದೆ. ಈ ಬಗ್ಗೆ ಇಲಾಖಾ ಅಧಿಕಾರಿಗಳು ಗಮನದಲ್ಲಿಟ್ಟುಕೊಳ್ಳಬೇಕು. ದೇಶದಲ್ಲಿ ಬುಡಕಟ್ಟು ಜನಾಂಗದವರಿಗೆ ಸರಕಾರಿ ಇಲಾಖೆ ಮಟ್ಟದಲ್ಲಿ ಕೊಡುವ ಮೂಲ ಸೌಕರ್ಯಗಳು ಸಿಗುವಂತೆ ಆಗಬೇಕು. ಹಾಗೆಯೇ ಪರಿಶಿಷ್ಟ ಪಂಗಡದವರ ಕ್ಷೇಮಾಭಿವೃದ್ಧ್ದಿಗಾಗಿ ಪೌಷ್ಟಿಕ ಆಹಾರ, ಆರೋಗ್ಯ, ಶಿಕ್ಷಣ, ನೀರು, ವಸತಿ, ಶೌಚಾಲಯಗಳನ್ನು ನಿರ್ಮಿಸಿ ಕೊಡುವಲ್ಲಿ ಅಧಿಕಾರಿಗಳು ಪ್ರಯತ್ನಿಸಬೇಕು ಎಂದರು.
ಅರಣ್ಯ ಹಕ್ಕು ಕಾಯ್ದೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಖುದ್ದು ಹಾಡಿಗಳನ್ನು ಪರಿಶೀಲಿಸಿ ಅರಣ್ಯ ಹಕ್ಕುಪತ್ರ, ವೈಯಕ್ತಿಕ ಅರಣ್ಯ ಪತ್ರಗಳನ್ನು ನೀಡುವಲ್ಲಿ ಇಲಾಖಾ ಅಧಿಕಾರಿಗಳು ಕ್ರಮ ವಹಿಸುವಂತೆ ಆಗಬೇಕು ಎಂದು ಡಾ. ರಾಮೇಶ್ವರ್ ಓರನ್ ತಿಳಿಸಿದರು. ಸರಕಾರದಿಂದ ವಿವಿಧ ಇಲಾಖೆಗಳಿಗೆ ಬಿಡುಗಡೆಯಾದ ಅನುದಾನದಲ್ಲಿ ಪರಿಶಿಷ್ಟ ಪಂಗಡದವರಿಗೆ ಮೀಸಲಿಟ್ಟ ಅನುದಾನ ಖರ್ಚು ಮಾಡದಿದ್ದಲ್ಲಿ ಕಠಿಣ ಕ್ರಮ ಎದುರಿಸಬೇಕಾಗುತ್ತದೆ. ಜೊತೆಗೆ ಶಿಕ್ಷೆ ಅನುಭವಿಸಬೇಕಾಗುತ್ತದೆ. ಆದ್ದರಿಂದ ಪ್ರತಿಯೊಂದು ಇಲಾಖಾ ಅಧಿಕಾರಿಗಳು ತಮ್ಮ ಇಲಾಖಾ ವ್ಯಾಪ್ತಿಯಲ್ಲಿ ಮೀಸಲಿಟ್ಟಿರುವ ಅನುದಾನವನ್ನು ಕಾಲಮಿತಿಯೊಳಗೆ ಖರ್ಚು ಮಾಡುವಂತಾಗಬೇಕು ಎಂದರು.
ಹಾಡಿಯ ಜನರ ಬೇಡಿಕೆ ಹಾಗೂ ಕುಂದು ಕೊರತೆಗಳ ಬಗ್ಗೆ ಪರಿಶೀಲಿಸಿ ನಿಯಮಾನುಸಾರವಾಗಿ ಮೇಲ್ವಿಚಾರಣೆಯನ್ನು ನಡೆಸುವಂತಾಗಬೇಕು. ಈ ಬಗ್ಗೆ ಆಯೋಗಕ್ಕೆ ಮಾಹಿತಿಗಳನ್ನು ರವಾನಿಸುವಲ್ಲಿ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಆಯೋಗದ ಅಧ್ಯಕ್ಷರು ಇಲಾಖಾ ಅಧಿಕಾರಿಗಳಿಗೆ ಹೇಳಿದರು. ಆಯೋಗದ ಜಂಟಿ ಕಾರ್ಯದರ್ಶಿ ಅಶೋಕ್ ಪೈ ಮಾತನಾಡಿ, ಹಾಡಿಗಳಲ್ಲಿ ವಾಸಿಸುವ ಬುಡಕಟ್ಟು ಜನಾಂಗದವರಿಗೆ ಅರಣ್ಯ ಹಕ್ಕು ಕಾಯ್ದೆಯಡಿ ಹಕ್ಕುಪತ್ರ ಪಡೆಯುವುದರ ಜೊತೆಗೆ ಹಕ್ಕುಪತ್ರ ಪಡೆದ ಜಾಗದಲ್ಲಿ ಮೂಲ ಸೌಲಭ್ಯ ಕಲ್ಪಿಸುವ ಸಂಬಂಧ ಎಲ್ಲ ರೀತಿಯ ಕ್ರಮ ಕೈಗೊಳ್ಳುವಂತಾಗಬೇಕು ಎಂದು ತಿಳಿಸಿದರು. ಹಾಡಿಗಳಲ್ಲಿ ವಿದ್ಯುತ್ ಸಂಪರ್ಕ ಇಲ್ಲದಿದ್ದ ಪಕ್ಷದಲ್ಲಿ ಸೋಲಾರ್ ದೀಪಗಳ ಅಳವಡಿಕೆಯಾಗಬೇಕು ಮತ್ತು ಆಹಾರ ಇಲಾಖೆಯಿಂದ ಬಿಪಿಎಲ್ ಕಾರ್ಡ್ದಾರರಿಗೆ ವಿತರಿಸುವ ಆಹಾರ ವಿತರಣೆಯಲ್ಲಿ ಯಾವುದೇ ಕೊರತೆಯಾಗದಂತೆ ಸಂಬಂಧಿಸಿದ ಅಧಿಕಾರಿಗಳು ಎಚ್ಚರ ವಹಿಸಬೇಕು ಎಂದರು.
ಬುಡಕಟ್ಟು ಜನಾಂಗದ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಜಿಲ್ಲೆಯಲ್ಲಿ ಆಶ್ರಮ ಶಾಲೆಗಳು ಹಾಗೂ ವಿದ್ಯಾರ್ಥಿನಿಲಯಗಳ ವಿದ್ಯೆ, ಉದ್ಯೋಗ, ಆರೋಗ್ಯ, ವಸತಿ ಹೀಗೆ ಹಲವು ಸೌಲಭ್ಯಗಳನ್ನು ಪಡೆಯಲು ಜಾಗೃತಿ ಅಗತ್ಯ. ಈ ಬಗ್ಗೆ ಕಾರ್ಯಕ್ರಮಗಳನ್ನು ನಡೆಸುವಂತೆ ಸಲಹೆ ಮಾಡಿದರು.
ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜಾ, ಸಿಇಓ ಚಾರುಲತಾ ಸೋಮಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್, ಉಪ ವಿಭಾಗಾಧಿಕಾರಿ ಡಾ. ನಂಜುಂಡೇ ಗೌಡ, ಬಿಸಿಎಂ ಅಧಿಕಾರಿ ಕೆ.ವಿ.ಸುರೇಶ್, ಡಿಎಚ್ಒ ಡಾ. ಒ.ಆರ್. ಶ್ರೀ ರಂಗಪ್ಪ, ಡಿಡಿಪಿಐ ಜಿ.ಆರ್. ಬಸವರಾಜು, ಜಿಲ್ಲಾ ಸರ್ಜನ್ ಡಾ.ಮುತ್ತಪ್ಪಮತ್ತಿತರರು ಹಾಜರಿದ್ದರು.







