ಕೃಷಿಯಲ್ಲಿ ವೆಜ್ಞಾನಿಕ ಪದ್ಧತಿ ಅಳವಡಿಕೆ ಅತ್ಯಗತ್ಯ
ರೈತರ ಕೃಷಿ ಅಧ್ಯಯನ ಪ್ರವಾಸಕ್ಕೆ ಚಾಲನೆ

ತೀರ್ಥಹಳ್ಳಿ, ಅ.4: ಇಂದಿನ ಹವಾ ಮಾನ, ಕೃಷಿ ಉತ್ಪನ್ನ ಬೆಲೆಗಳಲ್ಲಿ ಸ್ಥಿರತೆ ಇಲ್ಲದಿರುವುದರಿಂದ ರೈತರು ಆತ್ಮವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ರೈತರು ವೈಜ್ಞಾನಿಕ ಕೃಷಿ ಪದ್ಧತಿ ಅಳವಡಿಸಿಕೊಳ್ಳುವ ಅಗತ್ಯವಿದೆ ಎಂದು ಶಾಸಕ ಕಿಮ್ಮನೆ ರತ್ನಾಕರ ಹೇಳಿದ್ದಾರೆ.
ತೀರ್ಥಹಳ್ಳಿಯ ಕೃಷಿ ಇಲಾಖೆ, ರೋಟರಿ ಕ್ಲಬ್ಗಳ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ರೈತರ ಕೃಷಿ ಅಧ್ಯಯನ ಪ್ರವಾಸಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮಲೆನಾಡಿನಲ್ಲಿಂದು ಅಡಿಕೆ ಹಾಗೂ ಭತ್ತ ಬೆಳೆಯುವ ರೈತರು ಬೆಲೆ ವಿಚಾರದಲ್ಲಿ ಆತ್ಮವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆ. ಸರಕಾರ ರೈತರ ಪರವಾಗಿ ಹತ್ತಾರು ಯೋಜನೆಗಳನ್ನು ರೂಪಿಸಿದೆ. ಕೃಷಿ ಇಲಾಖೆ ಯೋಜನೆಗಳನ್ನು ರೈತರ ಮನೆ ಬಾಗಿಲಿಗೆ ತಲುಪಿಸುವ ಕೆಲಸ ನಿರ್ವಹಿಸುತ್ತಿದೆ. ಕೃಷಿ ಇಲಾಖೆಯ ರೈತಪರ ಯೋಜನೆಗಳನ್ನು ಕೃಷಿಕರು ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಪ.ಪಂ. ಮಾಜಿ ಅಧ್ಯಕ್ಷ ಡಾ. ನಾರಾಯಣಸ್ವಾಮಿ ಮಾತನಾಡಿ, ರೈತರಲ್ಲಿ ಆತ್ಮವಿಶ್ವಾಸ ಮೂಡಿಸುವ ಕೆಲಸ ಸರಕಾರದ್ದು. ಈ ನಿಟ್ಟಿನಲ್ಲಿ ರೈತರು ಆತಂಕದ ಕ್ಷಣಗಳಿಂದ ದೂರ ಬಂದು ವೈಜ್ಞಾನಿಕ ಕೃಷಿ ಪದ್ಧತಿಯತ್ತ ಗಮನ ಹರಿಸಬೇಕಾಗಿದೆ ಎಂದರು.
ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಅಧ್ಯಕ್ಷ ಬಳಗಟ್ಟೆ ಗಿರೀಶ್, ಪ.ಪಂ. ಅಧ್ಯಕ್ಷ ಸಂದೇಶ್ ಜವಳಿ, ಕೌಶಿಕ್ ಹಾಗೂ ರೋಟರಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.





