ಹಕ್ಕುಗಳ ಉಲ್ಲಂಘನೆ ಕುರಿತು ಸ್ವಯಂಪ್ರೇರಿತ ದೂರು ನೀಡಿ : ಮೀರಾ ಸಕ್ಸೇನಾ
ಪತ್ರಿಕಾಗೋಷ್ಠಿ

ಕಾರವಾರ, ಅ. 20: ಮಹಿಳೆಯರ ಮತ್ತು ಮಕ್ಕಳ ಮೇಲೆ ದೌರ್ಜನ್ಯ, ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿರುವುದು ಕಂಡುಬಂದರೆ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ರಾಜ್ಯ ಮಾನವ ಹಕ್ಕು ಆಯೋಗಕ್ಕೆ ದೂರು ಸಲ್ಲಿಸಬೇಕು ಎಂದು ಆಯೋಗದ ಅಧ್ಯಕ್ಷೆ ಮೀರಾ ಸಕ್ಸೇನಾ ಕೋರಿದರು.
ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾನವ ಹಕ್ಕು ಉಲ್ಲಂಘನೆ ಪ್ರಕರಣಗಳ ಬಗ್ಗೆ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ತಮ್ಮ ನೆರೆಮನೆಯಲ್ಲಿ ಅಥವಾ ಇನ್ನಾವುದೇ ಕಡೆಗಳಲ್ಲಿ ಬಾಲ್ಯ ವಿವಾಹ, ಮಹಿಳೆಯರ ಮತ್ತು ಮಕ್ಕಳ ಕಳ್ಳ ಸಾಗಣೆ, ದೌರ್ಜನ್ಯ ಪ್ರಕರಣಗಳು ಗಮನಕ್ಕೆ ಬಂದರೆ ಆಯೋಗದ ಟೋಲ್ ಫ್ರೀ ದೂರವಾಣಿ ಸಂಖ್ಯೆ 1800-42523333ಗೆ ಕರೆ ಮಾಡಿ ಮಾಹಿತಿ ಒದಗಿಸ ಬಹುದಾಗಿದೆ ಎಂದರು.
ಉತ್ತರಕನ್ನಡ ಜಿಲ್ಲೆಗೆ ಸಂಬಂಧಿಸಿದಂತೆ ರಾಜ್ಯ ಮಾನವ ಹಕ್ಕು ಆಯೋಗಕ್ಕೆ ಒಟ್ಟು 2,301 ದೂರುಗಳು ದಾಖಲಾಗಿದ್ದು, 2,011ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. 268 ಪ್ರಕರಣಗಳು ವಿವಿಧ ಹಂತಗಳಲ್ಲಿ ವಿಚಾರಣೆಗೆ ಬಾಕಿಯಿವೆ. ಪ್ರಕರಣಗಳನ್ನು ಇತ್ಯರ್ಥಪಡಿಸಿದ ಬಳಿಕ ಆಯಾ ಇಲಾಖೆಗಳು ಅನುಪಾಲನಾ ವರದಿಯನ್ನು ತಪ್ಪದೇ ಕಳುಹಿಸಲು ಸೂಚಿಸಲಾಗಿದೆ. ಹೊರಗುತ್ತಿಗೆ ನೌಕರರಿಗೆ ಕನಿಷ್ಠ ವೇತನ ಇತ್ಯಾದಿ ಸೌಲಭ್ಯಗಳನ್ನು ಖಾತ್ರಿಪಡಿಸುವುದು ಆಯಾ ಇಲಾಖೆಗಳ ಜವಾಬ್ದಾರಿ ಎಂದು ಸ್ಪಷ್ಟಪಡಿಸಲಾಗಿದೆ ಎಂದರು. ಅಹವಾಲು ಸಲ್ಲಿಕೆ: ಮಾನವ ಹಕ್ಕು ಉಲ್ಲಂಘನೆ ಪ್ರಕರಣಗಳ ಕುರಿತು ಒಟ್ಟು 12 ಮಂದಿ ಆಯೋಗದ ಎದುರು ಹಾಜರಾಗಿ ಅಹವಾಲುಗಳನ್ನು ಸಲ್ಲಿಸಿದರು. ಜಮೀನು ಅತಿಕ್ರಮಣ ತೆರವಿಗೆ ಮನವಿ, ನೆರೆಮನೆಯಾತನ ಕಿರುಕುಳದಿಂದ ರಕ್ಷಣೆ, ಸಾರ್ವಜನಿಕ ರಸ್ತೆ ಅತಿಕ್ರಮಣ ತೆರವು, ದಾಂಡೇಲಿ ನಗರದಲ್ಲಿನ ಸಾರ್ವಜನಿಕ ಉದ್ಯಾನವನ ಅತಿಕ್ರಮಣವಾಗಿದ್ದು ತೆರವುಗೊಳಿಸುವುದು ಸೇರಿದಂತೆ ಹಲವು ಅಹವಾಲುಗಳನ್ನು ಆಯೋಗಕ್ಕೆ ದೂರುದಾರರು ಸಲ್ಲಿಸಿದರು.
ಇದಕ್ಕೆ ಪ್ರತಿಕ್ರಿಯೆ ವ್ಯಕ್ತಪಡಿಸಿದ ಆಯೋಗದ ಅಧ್ಯಕ್ಷರು ಕಾನೂನು ವ್ಯಾಪ್ತಿಯಲ್ಲಿ ಎಲ್ಲ ಪ್ರಕರಣಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಾರವಾರ ನಗರದಲ್ಲಿ ಯುಜಿಡಿ ವ್ಯವಸ್ಥೆ ಅಸಮರ್ಪಕವಾಗಿದ್ದು, ಮ್ಯಾನ್ಹೋಲ್ಗಳಿಗೆ ಸಂಪರ್ಕ ಕಲ್ಪಿಸಲು ನಗರಸಭೆಗೆ ಸೂಚನೆ ನೀಡಲಾಗಿದೆ. ನಗರದಲ್ಲಿ 16ಸಾವಿರ ಮನೆಗಳಿದ್ದು, ಕೇವಲ 400 ಮನೆಗಳಿಗೆ ಮಾತ್ರ ಯುಜಿಡಿ ಸಂಪರ್ಕವಿದೆ. ಅಕ್ರಮ ಯುಜಿಡಿ ಸಂಪರ್ಕ ಹೊಂದಿರುವವರಿಗೆ ದಂಡ ವಿಧಿಸಿ ಸಕ್ರಮಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಅವರು ನಗರಸಭೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಲ್.ಚಂದ್ರಶೇಖರ ನಾಯಕ್, ಐಎಎಸ್ ಪ್ರೊಬೆಷನರಿ ಅಧಿಕಾರಿ ಫೌಝಿಯಾ ತರನ್ನುಮ್, ವಿವಿಧ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.







