ಉಡುಪಿ ಸರಕಾರಿ ಆಸ್ಪತ್ರೆಯನ್ನು ಖಾಸಗೀಕರಣಗೊಳಿಸುವುದಿಲ್ಲ: ಸಿಎಂ

ಉಡುಪಿ, ಅ.30: ಉಡುಪಿ ಸರಕಾರಿ ಹೆಂಗಸರ ಮತ್ತು ಮಕ್ಕಳ ಆಸ್ಪತ್ರೆಯನ್ನು ಖಾಸಗಿ ಯವರಿಗೆ ವಹಿಸಿಕೊಡುತ್ತಿಲ್ಲ. ಇದರ ನಿರ್ವಹಣೆಯನ್ನು ರಾಜ್ಯ ಸರಕಾರವೇ ಮಾಡಲಿದೆ ಎಂದು ರಾಜ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.
ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ಹೆಂಗಸರ ಮತ್ತು ಮಕ್ಕಳ ಆಸ್ಪತ್ರೆಯ ನೂತನ ಕಟ್ಟಡಕ್ಕೆ ಆಸ್ಪತ್ರೆಯ ಆವರಣದಲ್ಲಿ ರವಿವಾರ ಗಿಡ ನೆಡುವ ಮೂಲಕ ಶಿಲಾನ್ಯಾಸ ನೆರವೇರಿಸಿ ಬಳಿಕ ಸುದ್ದಿಗಾರರ ಪ್ರಶ್ನೆಗೆ ಅವರು ಉತ್ತರಿಸಿದರು.
ಉದ್ಯಮಿ ಬಿ.ಆರ್.ಶೆಟ್ಟಿ ತಮ್ಮ ತಂದೆ ತಾಯಿಯ ಹೆಸರಿನಲ್ಲಿ ಆಸ್ಪತ್ರೆ ಕಟ್ಟಡವನ್ನು ಪುಕ್ಕಟೆಯಾಗಿ ನಿರ್ಮಿಸಿಕೊಡುತ್ತಾರೆ. ಇದನ್ನು ನಾವು ಖಾಸಗೀಕರಣ ಮಾಡುತ್ತಿಲ್ಲ. ಕೆಲವು ಇದರ ಬಗ್ಗೆ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ ಎಂದು ಅವರು ಹೇಳಿದರು.
ಇವರೊಂದಿಗೆ ಉದ್ಯಮಿ ಡಾ.ಬಿ.ಆರ್.ಶೆಟ್ಟಿ, ಆರೋಗ್ಯ ಸಚಿವ ರಮೇಶ್ ಕುಮಾರ್, ಮೀನುಗಾರಿಕಾ ಸಚಿವ ಪ್ರಮೋದ್ ಮಧ್ವರಾಜ್, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಶಾಸಕ ಅಭಯಚಂದ್ರ ಜೈನ್, ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿ ಶಾಲಿನಿ ರಜನೀಶ್ ಮತ್ತಿತರರು ಉಪಸ್ಥಿತರಿದ್ದರು.





