ಶಾಲಾ ಮಕ್ಕಳಿಗೆ ಐದು ದಿನ ಹಾಲು: ಸಚಿವ ಮಂಜು
ಕ್ಷೀರಭಾಗ್ಯ
ಹುಬ್ಬಳ್ಳಿ, ಅ.30: ಪ್ರಾಥಮಿಕ ಶಾಲಾ ಮಕ್ಕಳಿಗೆ ಕ್ಷೀರಭಾಗ್ಯ ಯೋಜನೆಯಡಿ ಐದು ದಿನಗಳವರೆಗೆ ಹಾಲು ವಿತರಣೆ ಮಾಡುವ ಸಂಬಂಧ ಶೀಘ್ರವೇ ಕ್ರಮ ಕೈಗೊಳ್ಳಲಾಗುವುದು ಎಂದು ಪಶುಸಂಗೋಪನಾ ಸಚಿವ ಎ.ಮಂಜು ತಿಳಿಸಿದ್ದಾರೆ.
ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾರದಲ್ಲಿ ಐದು ದಿನ ಪ್ರಾಥಮಿಕ ಶಾಲಾ ಮಕ್ಕಳ ಆರೋಗ್ಯದ ಹಿನ್ನೆಲೆಯಲ್ಲಿ ಐದು ದಿನ ಹಾಲು ನೀಡುವ ಈ ಪ್ರಸ್ತಾವನೆಯು ಸರಕಾರದ ಮುಂದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಇದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ ಎಂದರು.
ರಾಜ್ಯ ಸರಕಾರಕ್ಕೆ ಎಷ್ಟೇ ಹೊರೆಯಾದರೂ ಮಕ್ಕಳಿಗೆ ವಾರದಲ್ಲಿ ಐದು ದಿನಗಳ ಕಾಲ ಹಾಲು ವಿತರಣೆ ಮಾಡಲು ನಾವು ಸಿದ್ಧವಿದ್ದೇವೆ. ಉತ್ತರ ಕರ್ನಾಟಕ ಭಾಗದಲ್ಲಿ ಹಾಲಿನ ಪೌಡರ್ ಉತ್ಪಾದನಾ ಘಟಕ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.
ಹಾಲು ಉತ್ಪಾದಕರ ಪ್ರೋತ್ಸಾಹ ಧನ ಇನ್ನು ಮುಂದೆ ನೇರವಾಗಿ ಉತ್ಪಾದಕರ ಬ್ಯಾಂಕ್ ಖಾತೆಗಳಿಗೆ ಸಂದಾಯವಾಗಲಿದೆ. ಆಧಾರ್ ಕಾರ್ಡ್ ಸಂಖ್ಯೆ ನೀಡಿ ಬ್ಯಾಂಕ್ ಪಾಸ್ ಬುಕ್ಗಳನ್ನು ಪಡೆದುಕೊಳ್ಳಬೇಕು ಎಂದು ಅವರು ಮನವಿ ಮಾಡಿದರು.
ಕಳೆದ ಹಲವಾರು ತಿಂಗಳುಗಳಿಂದ ಬಾಕಿ ಇರುವ ಹಾಲು ಉತ್ಪಾದಕರ ಪ್ರೋತ್ಸಾಹ ಧನವನ್ನು ಶೀಘ್ರವೆ ಬಿಡುಗಡೆ ಮಾಡಿಸಲು ಕ್ರಮ ಕೈಗೊಳ್ಳುವುದಾಗಿ ಎ.ಮಂಜು ಹೇಳಿದರು.