ಬಂಟ್ವಾಳ ಕ್ಷೇತ್ರಕ್ಕೆ ರಾಜ್ಯದಲ್ಲೇ ಹೆಚ್ಚು ಅನುದಾನ: ಸಚಿವ ರಮಾನಾಥ ರೈ

ಬಂಟ್ವಾಳ, ನ. 9: ರಾಜ್ಯದಲ್ಲಿ ಕೇಂದ್ರ ರಸ್ತೆ ನಿಧಿಯಿಂದ ರಸ್ತೆ ಅಭಿವೃದ್ಧಿ ಕಾರ್ಯಗಳಿಗೆ ಅತೀ ಹೆಚ್ಚು ಅನುದಾನ ದೊರೆತ ಕ್ಷೇತ್ರ ಬಂಟ್ವಾಳ ವಿಧಾನಸಬಾ ಕ್ಷೇತ್ರವಾಗಿದೆ. ಈ ಅನುದಾನ ಮಂಜೂರಾಗುವಲ್ಲಿ ತಮ್ಮ ಶ್ರಮವಿದೆ ಎಂದು ರಾಜ್ಯ ಅರಣ್ಯ ಸಚಿವ ಬಿ.ರಮಾನಾಥ ರೈ ಹೇಳಿದರು.
ಬಂಟ್ವಾಳ ತಾಲೂಕು ಕೊಯ್ಲ ಸರಕಾರಿ ಪ್ರೌಢಶಾಲೆಯಲ್ಲಿ ದ.ಕ. ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಬಂಟ್ವಾಳ, ಸರಕಾರಿ ಪ್ರೌಢ ಶಾಲೆ ಕೊಯ್ಲ ಇವರ ಸಂಯುಕ್ತ ಆಶ್ರಯದಲ್ಲಿ ಜರಗಿದ ಬಂಟ್ವಾಳ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಕ್ರೀಡಾಕೂಟವನ್ನು ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪೆಟ್ರೋಲ್ ಮತ್ತು ಡೀಸೆಲ್ ಸೆಸ್ನಿಂದ 26 ಕೋಟಿ ರೂ. ಅನುದಾನ ಮಂಜೂರಾಗಿದ್ದು ಇದು ನಮ್ಮ ಹೆಗ್ಗಳಿಕೆಯಾಗಿದೆ. ಅಭಿವೃದ್ಧಿ ಕಾರ್ಯದಲ್ಲಿ ರಾಜಕೀಯ ಮಾಡಬಾರದು. ಅಭಿವೃದ್ಧಿ ಕಾರ್ಯಗಳ ನಮ್ಮ ಸಾಧನೆಯನ್ನು ಹೇಳಲು ಅಂಜಿಕೆ ಇಲ್ಲ. ಆದರೆ ಸುಳ್ಳು ಹೇಳಬಾರದು ಎಂದ ಅವರು ಕೊಯ್ಲ ದಂತಹ ಗ್ರಾಮೀಣ ಪ್ರದೇಶದಲ್ಲಿ ಶೈಕ್ಷಣಿಕ ಬೆಳವಣಿಗೆಯಿಂದ ಪ್ರತಿಭಾವಂತ ವಿದ್ಯಾರ್ಥಿಗಳ ತಯಾರಿಯಾಗುತ್ತಿರುವುದು ಸಂತಸ ತಂದಿದೆ. ಶಿಕ್ಷಕರ ಶ್ರಮ ಅಭಿನಂದನೀಯ ಎಂದು ಹೇಳಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಹಳೆ ವಿದ್ಯಾರ್ಥಿ, ಅಂತಾರಾಷ್ಟ್ರೀಯ ಕ್ರೀಡಾಪಟು ಲ.ಪದ್ಮನಾಭ ಕುಮಾರ್, ಮಾಜಿ ರಾಷ್ಟ್ರೀಯ ಕಬಡ್ಡಿ ಆಟಗಾರ, ವಿಜಯ ಬ್ಯಾಂಕ್ ಅಧಿಕಾರಿ ಬೇಬಿ ಕುಂದರ್ ಮಾತನಾಡಿದರು.
ಜಿ.ಪಂ. ಸದಸ್ಯ ಬಿ.ಪದ್ಮಶೇಖರ ಜೈನ್, ಬಂಟ್ವಾಳ ನಗರಾಭಿವೃದ್ಧಿ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷ ಪಿಯೂಸ್ ರೋಡ್ರಿಗಸ್, ತಾಲೂಕು ಅಕ್ರಮ-ಸಕ್ರಮ ಅಧ್ಯಕ್ಷ ಕೆ.ಮಾಯಿಲಪ್ಪ ಸಾಲ್ಯಾನ್, ಶಾಲಾ ರಜತ ಮಹೋತ್ಸವ ಸಮಿತಿ ಗೌರವಾಧ್ಯಕ್ಷ ಪದ್ಮರಾಜ ಬಲ್ಲಾಳ್, ಕೆನರಾ ಬ್ಯಾಂಕ್ ಅಧಿಕಾರಿ ಬೇಬಿ ಕುಂದರ್, ಕೆನರಾ ಬ್ಯಾಂಕ್ ವ್ಯವಸ್ಥಾಪಕ ರಮೇಶ್ ನಾಯಕ್, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಕೆ.ರಮೇಶ್ ನಾಯಕ್ ರಾಯಿ, ತಾಪಂ ಸದಸ್ಯರಾದ ಪ್ರಭಾಕರ, ಮಂಜುಳಾ ಸದಾನಂದ, ಶಾಲಾ ಮೇಲುಸ್ತುವಾರಿ ಸಮಿತಿ ಕಾರ್ಯಾಧ್ಯಕ್ಷ ದೇವಪ್ಪ ಕರ್ಕೇರ, ಮುಖ್ಯ ಶಿಕ್ಷಕ ಸುಧೀರ್ ಜಿ., ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜೋಯಲ್, ಪ್ರಮುಖರಾದ ಅಶ್ರಫ್ ಅರಳ, ಅಬ್ದುಲ್ ಖಾದರ್, ದೈಹಿಕ ಶಿಕ್ಷಣ ಶಿಕ್ಷಕ ಜನಾರ್ದನ, ಶಾಲಾಭಿವೃದ್ಧಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
ಇದೇ ವೇಳೆ ಸಚಿವರು ಪ್ರೌಢ ಶಾಲೆಗೆ ನೂತನವಾಗಿ ನಿರ್ಮಾಣಗೊಂಡ ಕೆ.ಉಮಾಬಾಯಿ ಸ್ಮಾರಕ ಕ್ರೀಡಾಂಗಣವನ್ನು ಉದ್ಘಾಟಿಸಿದರು. ಮತ್ತು ಕ್ರೀಡಾಜ್ಯೋತಿ ಬೆಳಗಿಸಿದರು. ಕ್ರೀಡಾಪಟುಗಳಿಂದ ಪಥಸಂಚಲನದ ಗೌರವ ರಕ್ಷೆ ಸ್ವೀಕರಿಸಿದರು. ಕ್ರೀಡಾಪಟುಗಳಿಂದ ಪ್ರತಿಜ್ಞೆ ಸ್ವೀಕರಿಸಲಾಯಿತು.
ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಸ್ವಾಗತಿಸಿದರು. ದೈಹಿಕ ಶಿಕ್ಷಣ ಪರಿವೀಕ್ಷಕ ಗುರುನಾಥ ಬಾಗೇವಾಡಿ ಪ್ರಸ್ತಾವಿಸಿದರು. ಶಿಕ್ಷಕ ನಾಗರಾಜ್ ವಂದಿಸಿದರು. ಶಿಕ್ಷಕ ರಮೇಶ್ ಮಯ್ಯ ಕಾರ್ಯಕ್ರಮ ನಿರೂಪಿಸಿದರು.







