ಹೈಕೋರ್ಟ್ ಸಂಚಾರಿ ಪೀಠ ಆರಂಭಿಸಲು ಒತ್ತಾಯಿಸಿ ನ.11ರಂದು ಧರಣಿ
ಮಂಗಳೂರು, ನ. 9: ಮಂಗಳೂರಿನಲ್ಲಿ ಕರ್ನಾಟಕ ಹೈಕೋರ್ಟ್ ಸಂಚಾರಿ ಪೀಠವನ್ನು ಪ್ರಾರಂಭಿಸುವಂತೆ ಒತ್ತಾಯಿಸಿ ನವೆಂಬರ್ 11ರಂದು ಪೂರ್ವಾಹ್ನ 11 ಗಂಟೆಗೆ ಮಂಗಳೂರು ಕೋರ್ಟ್ ಆವರಣದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಪ್ರತಿಭಟನಾ ಜಾಥ ಹಮ್ಮಿಕೊಳ್ಳಲಾಗಿದೆ ಎಂದು ಬಾರ್ ಅಸೋಸಿಯೇಷನ್ ಅಧ್ಯಕ್ಷ ಎಸ್.ಪಿ. ಚೆಂಗಪ್ಪ ಇಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ನಗರದ ಎಲ್ಲಾ ವಕೀಲರು, ಎಸ್ಡಿಎಂ ಕಾನೂನು ಕಾಲೇಜಿನ ವಿದ್ಯಾರ್ಥಿಗಳು ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ. ಬೇಡಿಕೆಗೆ ಸ್ಪಂದಿಸುವಂತೆ ಸ್ಥಳೀಯ ಜನಪ್ರತಿನಿಧಿಗಳ ಗಮನಸೆಳೆಯಲು ಜಾಥಾವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ನಮ್ಮ ಹೋರಾಟಕ್ಕೆ ಈಗಾಗಲೇ 25 ಕ್ಕೂ ಹೆಚ್ಚು ಸ್ವಯಂಸೇವಾ ಸಂಸ್ಥೆಗಳು ಕೂಡಾ ಬೆಂಬಲ ವ್ಯಕ್ತಪಡಿಸಿವೆ. ಕರಾವಳಿಯಲ್ಲಿ ಸಂಚಾರಿ ಪೀಠ ಸ್ಥಾಪನೆಯಿಂದ ಜಿಲ್ಲೆಯ 5 ಸಾವಿರ ಮಂದಿ ವಕೀಲರ ಸಹಿತ ಕರಾವಳಿಯ 15ರಿಂದ 20 ಸಾವಿರ ಮಂದಿ ವಕೀಲರಿಗೆ ಮತ್ತು ಬಡ ಕಕ್ಷಿದಾರರಿಗೆ ನ್ಯಾಯಾಂಗ ವ್ಯವಸ್ಥೆಯ ಸದುಪಯೋಗವಾಗಲು ಸಾಧ್ಯವಿದೆ. ಈ ಬೇಡಿಕೆ ಬಹಳ ಹಿಂದೆಯೇ ಈಡೇರಬೇಕಾಗಿತ್ತು ಎಂದು ಚೆಂಗಪ್ಪ ಹೇಳಿದರು.
ಕಡುಬಡವನಿಗೂ ನ್ಯಾಯ ದೊರಕುವಂತಾಗಬೇಕು ಎಂಬುದು ಸಂವಿಧಾನದ ಆಶಯವಾಗಿದೆ. ಆದರೆ ಪ್ರಸ್ತುತ ಶೇ. 70 ಮಂದಿ ತಾಲೂಕು ಮಟ್ಟದ ಕೋರ್ಟನ್ನು ಹೊರತುಪಡಿಸಿದರೆ ಮೇಲ್ಮಟ್ಟದ ಕೋರ್ಟ್ಗಳ ಸಂಪರ್ಕದಿಂದ ದೂರವುಳಿದಿದ್ದು ಶ್ರೀಮಂತ ವರ್ಗಕ್ಕೆ ಮಾತ್ರ ವ್ಯವಸ್ಥೆ ಎನ್ನುವಂತಾಗಿದೆ. ಈ ಹಿನ್ನೆಲೆಯಲ್ಲಿ ಕರಾವಳಿಯ ಉಡುಪಿ, ಕೊಡಗು, ದ.ಕ. ಜಿಲ್ಲೆಗಳ ಜನಸಾಮಾನ್ಯರಿಗೆ ನೂತನ ಸಂಚಾರಿ ಪೀಠ ಸ್ಥಾಪನೆಯಿಂದ ನ್ಯಾಯಾಂಗ ವ್ಯವಸ್ಥೆ ಸುಲಭವಾಗಿ ದೊರಕುವಂತಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.
ಕಲ್ಯಾಣ ನಿಧಿ ಏರಿಕೆಗೆ ಆಗ್ರಹ
ರಾಜ್ಯ ವಕೀಲರ ಪರಿಷತ್ತಿನಿಂದ ದೊರೆಯುವ ವಕೀಲರ ಕಲ್ಯಾಣ ನಿಧಿಯನ್ನು 10 ಲಕ್ಷ ರೂ.ಗಳಿಗೆ ಏರಿಸಬೇಕು. ಹಾಲಿ ಇರುವ ಪದ್ದತಿಯನ್ನು ತೆಗೆಯಬೇಕು. ಕಾನೂನು ಪದವೀಧರಿಗೆ ನೀಡುವ ಪ್ರೋತ್ಸಾಹ ಧನವನ್ನು 3 ಸಾವಿರ ರೂ. ಗಳಿಗೆ ಮತ್ತು ಅವಧಿಯನ್ನು 3 ವರ್ಷಕ್ಕೆ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.
ಕೋರ್ಟ್ ರಸ್ತೆಯ ಅಭಿವೃದ್ಧಿ ಕಾಮಗಾರಿ ಪ್ರಾರಂಭಗೊಂಡು ಒಂದೂವರೆ ವರ್ಷಗಳಾದರೂ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಕಳೆದ ನಾಲ್ಕೈದು ತಿಂಗಳಿನಿಂದ ಕಾಮಗಾರಿಗಾಗಿ ರಸ್ತೆ ಬಂದ್ ಮಾಡಲಾಗಿದೆ. ಪಿಡಬ್ಲ್ಯುಡಿಯವರು ಸಂಪೂರ್ಣ ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಸ್.ಪಿ. ಚಂಗಪ್ಪ ಅಸಮಾಧಾನ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಎಚ್.ವಿ., ಜೊತೆ ಕಾರ್ಯದರ್ಶಿ ಸುಮನ ಶರಣ್ ಹಾಗೂ ಕೋಶಾಧಿಕಾರಿ ಯತೀಶ್ ಕುಮಾರ್ ಉಪಸ್ಥಿತರಿದ್ದರು.