ಉಡುಪಿ ಏಡ್ಸ್ ಮುಕ್ತ ಜಿಲ್ಲೆಯಾಗಲಿ : ದಿನಕರ ಬಾಬು
ವಿಶ್ವ ಏಡ್ಸ್ ದಿನಾಚರಣೆಯಲ್ಲಿ ಉಡುಪಿ ಜಿಪಂ ಅಧ್ಯಕ್ಷರ ಕರೆ

ಉಡುಪಿ, ಡಿ.1: ಏಡ್ಸ್ ರೋಗದ ಕುರಿತಂತೆ ಜನರಲ್ಲಿ ಜಾಗೃತಿ, ಎಚ್ಚರಿಕೆ ಮೂಡಿಸುವ ಮೂಲಕ ಆರೋಗ್ಯವಂತ ಸಮಾಜದ ನಿರ್ಮಾಣಕ್ಕೆ ಶ್ರಮಿಸೋಣ. ಈ ಮೂಲಕ ಉಡುಪಿ ಜಿಲ್ಲೆ ಏಡ್ಸ್ ಮುಕ್ತ ಜಿಲ್ಲೆಯಾಗಲಿ ಎಂದು ಉಡುಪಿ ಜಿಪಂ ಅಧ್ಯಕ್ಷ ದಿನಕರ ಬಾಬು ಹೇಳಿದ್ದಾರೆ.
ಗುರುವಾರ ಬಾರಕೂರಿನ ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಶನಲ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ವಿಶ್ವ ಏಡ್ಸ್ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ ಉಡುಪಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ, ಯುವ ವಾಹಿನಿ ಯಡ್ತಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರ ಬಾರಕೂರು, ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಶನಲ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಕಾಲೇಜ್ ಆಪ್ ನರ್ಸಿಂಗ್ ಮಣಿಪಾಲ ಇವುಗಳ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮ ವನ್ನು ಹಮ್ಮಿಕೊಳ್ಳಲಾಗಿತ್ತು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಉಡುಪಿ ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಮಾತನಾಡಿ, ದೇಶದಲ್ಲಿ 2 ಮಿಲಿಯ (20ಲಕ್ಷ) ಮಂದಿ ಏಡ್ಸ್ ಬಾಧಿತರಿದ್ದು, ಏಷ್ಯಾ ಖಂಡದಲ್ಲಿ ಏಡ್ಸ್ನಿಂದ ಸಂಭವಿಸುವ ಮರಣದ ಶೇ.50 ಪಾಲು ಭಾರತದ್ದಾಗಿದೆ. ದೇಶದ 5 ಅಗ್ರ ಏಡ್ಸ್ ಪೀಡಿತ ರಾಜ್ಯಗಳಲ್ಲಿ ಕರ್ನಾಟಕ ಸಹ ಒಂದಾಗಿದೆ .ಜಿಲ್ಲೆಯಲ್ಲಿ ವಲಸೆ ಕಾರ್ಮಿಕ ಸಂಖ್ಯೆ ಅಧಿಕ ಪ್ರಮಾಣದಲ್ಲಿದ್ದು, ರಾಷ್ಟ್ರೀಯ ಹೆದ್ದಾರಿ ಹಾದುಹೋಗಿರುವ ಕಾರಣ ವಾಹನ ಚಾಲಕರಿಂದ ಹಾಗೂ ಲಿಂಗತ್ವ ಅಲ್ಪಸಂಖ್ಯಾತರಿಂದ ಏಡ್ಸ್ ಹರಡುತ್ತಿದೆ. ಎಂದರು.
ವೇದಿಕೆಯಲ್ಲಿ ಜಿಪಂ ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ, ಉಡುಪಿ ತಾಪಂ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಬಾರಕೂರು ಗ್ರಾಪಂ ಅಧ್ಯಕ್ಷೆ ಶೈಲಾ ಡಿಸೋಜಾ, ಹನೇಹಳ್ಳಿ ಗ್ರಾಪಂ ಅಧ್ಯಕ್ಷೆ ಶಾರದಾ ಪೂಜಾರಿ, ಕಾಲೇಜಿನ ಪ್ರಾಂಶುಪಾಲ ಪ್ರೊ.ವಸಂತರಾಜ ಶೆಟ್ಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಗ್ರೇಸಿ ಗೋನ್ಸಾಲ್ವಿಸ್, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ಚಿದಾನಂದ ಸಂಜು, ಬಾರಕೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸುಬಾಷ್ಚಂದ್ರ ಸೂಡಾ ಉಪಸ್ಥಿತರಿದ್ದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರೋಹಿಣಿ ಪ್ರಾಸ್ತಾವಿಕವಾಗಿ ಮಾತನಾಡಿದರು. ತಾಲೂಕು ಆರೋಗ್ಯಾಧಿಕಾರಿ ಡಾ.ನಾಗರತ್ನ ಸ್ವಾಗತಿಸಿ, ಮಂಜುನಾಥ್ ಕಾರ್ಯಕ್ರಮ ನಿರೂಪಿಸಿದರು.
ಇದಕ್ಕೆ ಮುನ್ನ ಬಾರಕೂರು ಕಾಲೇಜು ವಿದ್ಯಾರ್ಥಿಗಳಿಂದ ಏಡ್ಸ್ ಬಗ್ಗೆ ಅರಿವು ಮೂಡಿಸಲು ಬಾರಕೂರು ಬಸ್ನಿಲ್ದಾಣದ ಬಳಿಯಿಂದ ಕಾಲೇಜಿನವರೆಗೆ ಜಾಥಾವನ್ನು ಆಯೋಜಿಸಲಾಗಿತ್ತು. ಕೆಎಂಸಿ ವಿದ್ಯಾರ್ಥಿಗಳಿಂದ ಕಿರು ನಾಟಕ ಹಾಗೂ ಕರ್ನಾಟಕ ಕಲಾದರ್ಶಿನಿ ತಂಡದಿಂದ ಯಕ್ಷಗಾನ ಪ್ರದರ್ಶಿಸಲ್ಪಟ್ಟಿತು.







