ಆಗುಂಬೆ ಘಾಟಿ ರಸ್ತೆ ಡಿ.20ರೊಳಗೆ ಸಂಚಾರಕ್ಕೆ ಮುಕ್ತ: ಬಾಲಕೃಷ್ಣ

ತೀರ್ಥಹಳ್ಳಿ, ಡಿ.7: ಆಗುಂಬೆ ಘಾಟಿ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆ ಅಧೀಕ್ಷಕ ಇಂಜಿನಿಯರ್ ಬಿ.ಎಸ್. ಬಾಲಕೃಷ್ಣ ಪರಿಶೀಲಿಸಿ ಡಿಸೆಂಬರ್ 20ರೊಳಗೆ ಕಾಮಗಾರಿ ಪೂರ್ಣಗೊಂಡು ಸುಗಮ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಹೇಳಿದರು.
4 ಕೋಟಿ ರೂ. ವೆಚ್ಚದ ಕಾಮಗಾರಿ ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು. ಡಿಸೆಂಬರ್ 20ರ ಒಳಗಾಗಿ ಘಾಟಿ ಮಾರ್ಗವಾಗಿ ವಾಹನ ಸಂಚಾರಕ್ಕೆ ಅನುವು ಮಾಡಲು ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಇಲಾಖೆಯ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚಿಸಿದ್ದಾರೆ.
ಆಗುಂಬೆ ಪ್ರದೇಶದಲ್ಲಿ ಅತಿ ಹೆಚ್ಚು ಮಳೆ ಬೀಳುವ ಕಾರಣ ಘಾಟಿ ರಸ್ತೆ ಕಾಮಗಾರಿಯನ್ನು ಉತ್ತಮವಾಗಿ ಅನುಷ್ಠಾನಗೊಳಿಸಬೇಕು. ಜಿಎಸ್ಡಿ ಮತ್ತು ಡಬ್ಲ್ಯುಎಂಎಂ ಅಳವಡಿಕೆಯ ಡಾಂಬರೀಕರಣ ಕಾಮಗಾರಿ ಅಭಿವೃದ್ಧಿಗೊಳ್ಳುತ್ತಿದೆ. ಘಾಟಿ ಆಯ್ದ ಭಾಗಗಳಲ್ಲಿ ಕಾಂಕ್ರಿಟ್ ರಸ್ತೆ ನಿರ್ಮಿಸುವ ಕುರಿತು ಅಧಿಕಾರಿಗಳಿಂದ ಮಾಹಿತಿ ಅವರು ಪಡೆದರು.
ಗುಣಮಟ್ಟದ ಕಾಮಗಾರಿಗೆ ಅಗತ್ಯ ಕ್ರಮ ತೆಗೆದುಕೊಳ್ಳಬೇಕು. ದೂರು ಬಾರದಂತೆ ಎಚ್ಚರ ವಹಿಸುವುದು ಅಧಿಕಾರಿಗಳು ಹಾಗೂ ತಾಂತ್ರಿಕ ಸಿಬ್ಬಂದಿಯ ಜವಾಬ್ದಾರಿಯಾಗಿದೆ. ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳಿಸಿ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಪಿಡಬ್ಲ್ಯುಡಿ ಇಲಾಖೆಯ ಎಇಇ ರಾಜೇಶ್, ಸಹಾಯಕ ಇಂಜಿನಿಯರ್ ಈಶ್ವರಪ್ಪ ಹಾಗೂ ಗುತ್ತಿಗೆದಾರ ಅಬ್ದುಲ್ ರೆಹಮಾನ್ ಉಪಸ್ಥಿತರಿದ್ದರು.







