ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಎಚ್ಚರವಹಿಸಿ
ಅಧಿಕಾರಿಗಳಿಗೆ ಸಚಿವ ಕಾಗೋಡು ಸೂಚನೆ

ಚಿಕ್ಕಮಗಳೂರು, ಡಿ.17: ಮುಂಬರುವ ದಿನಗಳಲ್ಲಿ ಸಾರ್ವಜನಿಕರಿಗೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಅಗತ್ಯ ಕಂಡುಬಂದಲ್ಲಿ ಟ್ಯಾಂಕರ್ ಮೂಲಕ ನೀರನ್ನು ಒದಗಿಸುವ ವ್ಯವಸ್ಥೆ ಮಾಡಬೇಕೆಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ತಿಳಿಸಿದರು.
ಅವರು ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬರ ಅಧ್ಯಯನಕ್ಕಾಗಿ ರಚಿಸಲಾಗಿರುವ ಸಚಿವ ಸಂಪುಟದ ಉಪಸಮಿತಿಯ ಬರ ಪರಿಶೀಲನೆ ಸಭೆಯ ನೇತೃತ್ವ ವಹಿಸಿ ಮಾತನಾಡಿದರು. ಬರಪರಿಸ್ಥಿತಿ ನಿರ್ವಹಣೆಗೆ ಪ್ರತೀ ವಿಧಾನಸಭಾ ಕ್ಷೇತ್ರಕ್ಕೆ 60 ಲಕ್ಷ ರೂ. ಬಿಡುಗಡೆ ಮಾಡಲಾಗಿದೆ. ನಿರ್ವಹಣ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಮುಗಿಸುವಂತೆ ಅಧಿಕಾರಿಗಳು ಎಚ್ಚರವಹಿಸಬೇಕು. ಉದ್ಯೋಗ ಖಾತ್ರಿ ಯೋಜನೆಯಡಿ ಅನೇಕ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶವಿದೆ.
ಇದನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕು ಎಂದ ಅವರು ಕೂಲಿ ಹಣವನ್ನು 15 ದಿನಗಳ ಒಳಗಾಗಿ ಪಾವತಿ ಮಾಡಬೇಕೆಂದು ತಿಳಿಸಿದರು ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಕೆರೆಗಳ ಹೂಳೆತ್ತುವ ಕಾಮಗಾರಿಗಳನ್ನು ಕೈಗೊಳ್ಳಲು ಆದ್ಯತೆ ನೀಡಬೇಕು ಇದರಿಂದಾಗಿ ಅಂತರ್ಜಲ ಮಟ್ಟ ಹೆಚ್ಚಲು ಅನುಕೂಲವಾಗುತ್ತದೆ ಎಂದರು. ಸಹಕಾರ ಮತ್ತು ಸಕ್ಕರೆ ಸಚಿವ ಎಚ್.ಎಸ್ ಮಹದೇವಪ್ರಸಾದ್ ಮಾತನಾಡಿ, ಕುಡಿಯುವ ನೀರಿನ ಕಾಮಗಾರಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಕೈಗೊಳ್ಳಬೇಕು ಹಾಗೂ ಯಂತ್ರಗಳ ಚಾಲನೆಗೆ ಅಗತ್ಯವಿರುವಷ್ಟು ವೋಲ್ಟೇಜ್ ಅನ್ನು ನೀಡಬೇಕು ಎಂದು ನುಡಿದರು.
ಜಿಲ್ಲಾಧಿಕಾರಿ ಜಿ.ಸತ್ಯವತಿ ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 4 ಲಕ್ಷ ಜಾನುವಾರುಗಳು ಇವೆ. ಇವುಗಳಿಗೆ ಒಂದು ವಾರಕ್ಕೆ ಒಟ್ಟು 14,287 ಟನ್ ಮೇವಿನ ಆವಶ್ಯಕತೆ ಇದೆ. ಹಾಲಿ ನಮ್ಮಲ್ಲಿ 2,13,876.7 ಟನ್ಗಳಷ್ಟು ಮೇವು ಲಭ್ಯವಿದೆ ಎಂದ ಅವರು, ಚಿಕ್ಕಮಗಳೂರು ತಾಲೂಕಿನ ಹಿರೇಗೌಜ, ಬೆಳವಾಡಿ, ಕಳಸಪುರ ಹಾಗು ಕಡೂರು ತಾಲೂಕಿನ ದೇವನೂರು ಹಾಗೂ ಯಗಟಿ ಕೇಂದ್ರಗಳಲ್ಲಿ ಮೇವು ಬ್ಯಾಂಕ್ ಪ್ರಾರಂಭಿಸಲಾಗಿದೆ ಎಂದು ಹೇಳಿದರು. ಜಿಪಂ ಸಿಇಒ ಡಾ. ಆರ್. ರಾಗಪ್ರಿಯ, ಶಾಸಕ ಜೀವರಾಜ್, ಶಾಸಕ ಸಿ.ಟಿ ರವಿ, ಶಾಸಕ ವೈ.ಎಸ್.ವಿ ದತ್ತ ಮಾತನಾಡಿದರು.
ಸಭೆಯಲ್ಲಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಯು.ಟಿ.ಖಾದರ್, ಶಾಸಕರಾದ ಬಿ.ಬಿ ನಿಂಗಯ್ಯ, ಜಿ.ಎಚ್.ಶ್ರೀನಿವಾಸ್, ಎಂಎಲ್ಸಿ ಪ್ರಾಣೇಶ್, ತಾಪಂ ಅಧ್ಯಕ್ಷ ಈ ಮಹೇಶ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೀವ್ ಚಾವ್ಲಾ ಮೈಸೂರು ಪ್ರಾದೇಶಿಕ ಆಯುಕ್ತ ಎವ್.ವಿ ಜಯಂತಿ, ಅಪರ ಜಿಲ್ಲಾಧಿಕಾರಿ ಎಂ.ಎಲ್ ವೈಶಾಲಿ ಉಪಸ್ಥಿತರಿದ್ದರು.







