ಪಶ್ಚಿಮ ಘಟ್ಟದಲ್ಲಿ ನಕ್ಸಲ್ ಚಟುವಟಿಕೆ
ಕೂರ್ಗ್ ವೈಲ್ಡ್ ಲೈಫ್ ಸೊಸೈಟಿ ಆತಂಕ
ಮಡಿಕೇರಿ, ಡಿ.23: ಆದಿವಾಸಿ ಅರಣ್ಯ ಹಕ್ಕು ಮಸೂದೆಯಡಿ ಜಿಲ್ಲೆಯ ಮೂಲ ನಿವಾಸಿ ಗಿರಿಜನರಿಗೆ ಹಕ್ಕುಪತ್ರ ನೀಡಬೇಕೆೇ ಹೊರತು, ಅರಣ್ಯವನ್ನು ಅತಿಕ್ರಮಣ ಮಾಡಿಕೊಂಡಿರುವ ವಲಸಿಗರಿಗೆ ಯಾವುದೇ ಕಾರಣಕ್ಕೂ ಭೂಮಿ ನೀಡಬಾರದೆಂದು ಒತ್ತಾಯಿಸಿರುವ ಕೂರ್ಗ್ ವೈಲ್ಡ್ ಲೈಫ್ ಸೊಸೈಟಿ, ದಿಡ್ಡಳ್ಳಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಆಕ್ಷೇಪ ವ್ಯಕ್ತಪಡಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ಕರ್ನಲ್ ಸಿ.ಪಿ. ಮುತ್ತಣ್ಣ, ಸರಕಾರ ಎಚ್ಚೆತ್ತುಕೊಳ್ಳದಿದ್ದಲ್ಲಿ ಕರ್ನಾಟಕ ರಾಜ್ಯದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ನಕ್ಸಲ್ ಚಟುವಟಿಕೆ ತೀವ್ರಗೊಳ್ಳುವುದು ಖಚಿತವೆಂದು ಅಭಿಪ್ರಾಯಪಟ್ಟರು.
ದಿಡ್ಡಳ್ಳಿ ಪ್ರಕರಣದಲ್ಲಿ ಟಿಂಬರ್ ಲಾಬಿ ಕೈವಾಡವಿದ್ದು, ನಿವೇಶನ ಹಂಚಿಕೆ ನೆಪದಲ್ಲಿ ಮರಗಳನ್ನು ನಾಶ ಮಾಡುವ ಹುನ್ನಾರ ಅಡಗಿದೆ ಎಂದು ಆರೋಪಿಸಿದರು. ಈ ಕುರಿತು ತನಿಖೆೆಯಾಗಬೇಕೆಂದು ಒತ್ತಾಯಿಸಿದ ಅವರು, ತಲೆತಲಾಂತರಗಳಿಂದ ಕಾಡಿನಲ್ಲಿ ವಾಸಿಸುತ್ತಿರುವ ಗಿರಿಜನರಿಗೆ ಆದಿವಾಸಿ ಅರಣ್ಯ ಹಕ್ಕು ಮಸೂದೆಯ ಮೂಲಕ ಭೂಮಿ ಮಂಜೂರು ಮಾಡುವುದಕ್ಕೆ ನಮ್ಮ ವಿರೋಧವಿಲ್ಲವೆಂದು ಸ್ಪಷ್ಟಪಡಿಸಿದರು.
ಬಸವಣ್ಣ ದೇವರಬನ ಟ್ರಸ್ಟ್ನ ಪ್ರಮುಖ ಡಾ.ಬಿ.ಸಿ. ನಂಜಪ್ಪ, ಸಣ್ಣ ಕಾಫಿ ಬೆಳೆಗಾರರ ಒಕ್ಕೂಟದ ಪಾಲಿಬೆಟ್ಟ ವಿಭಾಗದ ಅಧ್ಯಕ್ಷ ಡಾ. ಎ.ಸಿ. ಗಣಪತಿ ಮಾತನಾಡಿದರು.
ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ಜೆಫ್ರಿ ಮುತ್ತಣ್ಣ ಉಪಸ್ಥಿತರಿದ್ದರು.







