ಉಡುಪಿ: ಕರ್ನಾಟಕವನ್ನು ಬರಪೀಡಿತ ರಾಜ್ಯವನ್ನಾಗಿ ಘೋಷಿಸಲು ಆಗ್ರಹ
ಉಡುಪಿ, ಫೆ.17: ಇಡೀ ಕರ್ನಾಟಕವನ್ನು ಬರಪೀಡಿತ ರಾಜ್ಯ ಎಂಬುದಾಗಿ ಘೋಷಿಸಿ ಪರಿಹಾರ ಒದಗಿಸಬೇಕೆಂದು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘ ಮತ್ತು ಕೃಷಿ ಕೂಲಿಕಾರರ ಸಂಘ ಉಡುಪಿ ಹಾಗೂ ಕುಂದಾಪುರ ತಾಲೂಕು ಸಮಿತಿಯ ನಿಯೋಗ ಶುಕ್ರವಾರ ತಾಲೂಕಿನ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದೆ.
ರಾಜ್ಯದಲ್ಲಿ ಭೀಕರ ಬರದಿಂದ ರೈತರೂ ಬೆಳೆಗಳನ್ನು ಕಳೆದುಕೊಂಡು ಕಂಗಾಲಾಗಿದ್ದಾರೆ. ಕೆಲವು ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸ್ಥಿತಿ ಗಂಭೀರ ವಾಗಿದೆ. ಕರಾವಳಿಯಲ್ಲೂ ಮಳೆ ಕಡಿಮೆಯಾಗಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಆದುದರಿಂದ ರಾಜ್ಯವನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ ಪರಿಹಾರ, ಕೃಷಿ ಕೂಲಿಕಾರರಿಗೆ ಕೆಲಸ ನೀಡಿ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಸಾರ್ವಜನಿಕ ವಿತರಣೆ ವ್ಯವಸ್ಥೆಯನ್ನು ಬಲಪಡಿಸಬೇಕು. ವಿದ್ಯುತ್ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು ಎಂದು ನಿಯೋಗ ಮನವಿ ಯಲ್ಲಿ ಒತ್ತಾಯಿಸಿದೆ.
ಉಡುಪಿ ನಿಯೋಗದಲ್ಲಿ ರೈತ ಸಂಘದ ತಾಲೂಕು ಅಧ್ಯಕ್ಷ ಪಿ.ವಿಶ್ವನಾಥ ರೈ, ಕಾರ್ಯದರ್ಶಿ ಕೆ.ವಿ.ಕವಿರಾಜ್, ಕೃಷಿ ಕೂಲಿಕಾರ ಸಂಘದ ಅಧ್ಯಕ್ಷ ವಿಠಲ ಪೂಜಾರಿ, ಬಾಲಕೃಷ್ಣ ಶೆಟ್ಟಿ, ಕೆ.ಶಂಕರ್, ಲಕ್ಷ್ಮಣ್, ಉಮೇಶ್ ಕುಂದರ್, ನಳಿನಿ, ರತ್ನಾಕರ್ ಮೊದಲಾದವರು ಉಪಸ್ಥಿತರಿದ್ದರು.
ಕುಂದಾಪುರ ನಿಯೋಗದಲ್ಲಿ ರೈತ ಸಂಘದ ತಾಲೂಕು ಅಧ್ಯಕ್ಷ ಯು. ದಾಸ ಭಂಡಾರಿ, ಕಾರ್ಯದರ್ಶಿ ಮಹಾಬಲ ವಡೇರಹೋಬಳಿ, ಕೃಷಿ ಕೂಲಿಕಾರರ ಸಂಘದ ಅಧ್ಯಕ್ಷ ವೆಂಕಟೇಶ್ ಕೋಣಿ, ಕಾರ್ಯದರ್ಶಿ ನಾಗರತ್ನ ಮೊದಲಾದವರು ಹಾಜರಿದ್ದರು.







