ನ್ಯಾಯಾಲಯಕ್ಕೆ ನಟ ಶಿವರಾಜ್ಕುಮಾರ್ ದಂಪತಿ ಹಾಜರು
ಶಿವಮೊಗ್ಗ, ಫೆ. 25: ಕಳೆದ ಲೋಕಸಭಾ ಚುನಾವಣೆಯ ವೇಳೆ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರನಟ ಶಿವರಾಜ್ ಕುಮಾರ್, ಪತ್ನಿ ಗೀತಾ ಶಿವರಾಜ್ ಕುಮಾರ್ ಹಾಗೂ ಸೊರಬ ಕ್ಷೇತ್ರದ ಶಾಸಕ ಮಧು ಬಂಗಾರಪ್ಪ ಶನಿವಾರ ನಗರದ ಮೂರನೇ ಜೆಎಂಎಫ್ಸಿ ನ್ಯಾಯಾಲಯಕ್ಕೆ ಹಾಜರಾದರು.
ಮಾರ್ಚ್ 1 ಕ್ಕೆ ಪ್ರಕರಣದ ವಿಚಾರಣೆ ಮುಂದೂಡಿ ನ್ಯಾಯಾಧೀಶರು ಆದೇಶಿಸಿದರು.
ನಂತರ ನ್ಯಾಯಾಲಯದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಮಧು ಬಂಗಾರಪ್ಪ, ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಶಿವರಾಜ್ ಕುಮಾರ್ ಮತ ಯಾಚನೆಗೆ ಹೋಗಿರಲಿಲ್ಲ. ಅಭಿಮಾನಿಯೊಬ್ಬರ ಆಹ್ವಾನದ ಮೇರೆಗೆ ಅವರ ಮನೆಗೆ ಭೇಟಿ ನೀಡಿದ್ದರು. ಈ ಬಗ್ಗೆ ನೀತಿ ಸಂಹಿತಿ ಉಲ್ಲಂಘನೆ ಪ್ರಕರಣ ದಾಖಲಾಗಿದ್ದು ವಿಚಾರಣೆ ನಡೆದಿದೆ. ನ್ಯಾಯಾಲಯ ನೀಡುವ ಆದೇಶಕ್ಕೆ ನಾವು ಬದ್ದವಾಗಿದ್ದೇವೆ ಎಂದು ಹೇಳಿದರು.
ಗೀತಾ ಶಿವರಾಜ್ ಕುಮಾರ್ ಮಾತನಾಡಿ, ಲೋಕಸಭೆ ಚುನಾವಣೆ ಬಳಿಕ ಮಗಳ ಮದುವೆ ಮೊದಲಾದ ಕಾರಣಗಳಿಂದ ರಾಜಕಾರಣದಲ್ಲಿ ಸಕ್ರಿಯವಾಗಿ ತೊಡಗಿಕೊಳ್ಳಲು ಸಾಧ್ಯವಾಗಿರಲಿಲ್ಲ. ಇನ್ನು ಮುಂದೆ ರಾಜಕಾರಣದಲ್ಲಿ ಸಕ್ರಿಯವಾಗಿರುತ್ತೇನೆ ಎಂದು ಹೇಳಿದರು.