ಗೋವಾ-ಮಣಿಪುರ ಹೆಚ್ಚು ಸ್ಥಾನ ಗಳಿಸಿರುವ ಪಕ್ಷವನ್ನು ನೂತನ ಸರಕಾರ ರಚನೆಗೆ ಆಹ್ವಾನಿಸಿ: ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ, ಮಾ. 12: ಗೋವಾ ಹಾಗೂ ಮಣಿಪುರ ರಾಜ್ಯಗಳಲ್ಲಿ ಅತಿ ಹೆಚ್ಚು ಸ್ಥಾನ ಗಳಿಸುವ ಕಾಂಗ್ರೆಸ್ ಪಕ್ಷವನ್ನು ನೂತನ ಸರಕಾರ ರಚನೆಗೆ ಆಹ್ವಾನಿಸಬೇಕು ಎಂದು ಲೋಕಸಭೆ ಕಾಂಗ್ರೆಸ್ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಇಂದಿಲ್ಲಿ ಒತ್ತಾಯಿಸಿದ್ದಾರೆ.
ರವಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಗೋವಾ ಹಾಗೂ ಮಣಿಪುರ ರಾಜ್ಯಗಳಲ್ಲಿ ಅಲ್ಲಿನ ಬಿಜೆಪಿಯನ್ನು ಮತದಾರರು ತಿರಸ್ಕರಿಸಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಎರಡೂ ರಾಜ್ಯಗಳಲ್ಲಿ ಬಹುಮತ ದೊರಕಿದೆ. ಉಭಯ ರಾಜ್ಯಗಳ ರಾಜ್ಯಪಾಲರು ಕೇಂದ್ರದ ಒತ್ತಡಕ್ಕೆ ಮಣಿಯದೆ ನೂತನ ಸರಕಾರ ರಚನೆಗೆ ಕಾಂಗ್ರೆಸ್ ಆಹ್ವಾನಿಸಬೇಕು ಎಂದರು.
ಅರುಣಾಚಲ ಪ್ರದೇಶ, ಉತ್ತರಾಖಂಡ ಮತ್ತು ಮಣಿಪುರದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರದಿಂದ ಕೆಳಗಿಳಿಸುವ ಹುನ್ನಾರವನ್ನು ಕೇಂದ್ರ ನಡೆಸಿದೆ. ತೊಳ್ಬಲ ಹಾಗೂ ಹಣಬಲದ ಮೂಲಕ ಕುದುರೆ ವ್ಯಾಪಾರಕ್ಕೆ ಬಿಜೆಪಿ ತೆರೆಮರೆಯಲ್ಲಿ ನಡೆಸಿದೆ ಎಂದು ಖರ್ಗೆ ಆರೋಪಿಸಿದರು.
ಬಿಜೆಪಿ ರಾಷ್ಟ್ರೀಯಾಧ್ಯಕ್ಷ ಅಮಿತ್ ಷಾ ಗೋವಾ ಹಾಗೂ ಮಣಿಪುರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದ್ದು, ಅತಿ ಹೆಚ್ಚು ಸ್ಥಾನ ಪಡೆದ ಕಾಂಗ್ರೆಸ್ ಪಕ್ಷಕ್ಕೆ ನೂತನ ಸರಕಾರ ರಚಿಸುವ ಅಧಿಕಾರವಿರುತ್ತದೆ ಎನ್ನುವುದನ್ನು ಮರೆಯಬಾರದು ಎಂದು ಖರ್ಗೆ, ಅಮಿತ್ ಷಾಗೆ ಸಲಹೆ ನೀಡಿದರು.
ದೇಶದಲ್ಲೆ ಅತ್ಯಂತ ದೊಡ್ಡ ರಾಜ್ಯ ಉತ್ತರ ಪ್ರದೇಶ, ಉತ್ತರಖಂಡ್ ರಾಜ್ಯದಲ್ಲಿ ಜಾತ್ಯತೀತ ತತ್ವವನ್ನು ಸೋಲಿಸುವುದರ ಮೂಲಕ ಮೂಲಭೂತವಾದಿಗಳು ವಿಜಯ ಗಳಿಸಿದ್ದಾರೆ. ಬಿಜೆಪಿ ಜಾತ್ಯತೀತ ಸಿದ್ಧಾಂತ ಒಡೆದು ಬಿಜೆಪಿ ಅಧಿಕಾರಕ್ಕೆ ಬರಲು ಸನ್ನಾಹ ನಡೆಸಿದೆ ಎಂದು ಖರ್ಗೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.







