ಅಕ್ರಮ ಕಸಾಯಿಖಾನೆಗಳ ವಿರುದ್ಧ ಕ್ರಮ: ಸಿಎಂ ಆದಿತ್ಯನಾಥ್

ಲಕ್ನೋ, ಮಾ. 26: ರಾಜ್ಯದಲ್ಲಿ ಪರವಾನಗಿ ಪಡೆದು ಕಾರ್ಯಾಚರಣೆ ನಡೆಸುತ್ತಿರುವ ಕಸಾಯಿಖಾನೆಗಳಿಗೆ ಯಾವುದೇ ತೊಂದರೆ ಇಲ್ಲ. ಆದರೆ ಅಕ್ರಮ ಕಸಾಯಿಖಾನೆಗಳ ವಿರುದ್ಧ ರಾಜ್ಯ ಸರಕಾರ ಕ್ರಮಕೈಗೊಳ್ಳಲಿದೆ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರವಿವಾರ ಸ್ಪಷ್ಟಪಡಿಸಿದ್ದಾರೆ.
ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ (ಎನ್ ಜಿಟಿ) ನಿಯಮಗಳನ್ನು ಗಾಳಿಗೆ ತೂರಿ ಸಾರ್ವಜನಿಕರ ಆರೋಗ್ಯದ ಜೊತೆಗೆ ಆಟವಾಡುವವರನ್ನು ಸರಕಾರ ಸುಮ್ಮನೆ ಬಿಡುವುದಿಲ್ಲ ಎಂದು ಅವರು ಹೇಳಿದ್ದಾರೆ.
ಸರಕಾರ ಹೇಗೆ ಕೆಲಸ ಮಾಡಬೇಕೆಂಬುದನ್ನು ಬಿಜೆಪಿ ಉತ್ತರ ಪ್ರದೇಶದಲ್ಲಿ ತೋರಿಸಿಕೊಡಲಿದೆ. ರಾಜ್ಯದಲ್ಲಿ ಗೂಂಡಾ ರಾಜಕಾರಣ ಅಂತ್ಯಗೊಳಿಸಲಾಗುವುದು , ಭ್ರಷ್ಟಾಚಾರ ಮುಕ್ತ ಆಡಳಿತವನ್ನು ಜನರು ಕಾಣಲಿದ್ದಾರೆ.
ಮಹಿಳೆಯರು ನಿರ್ಭೀತರಾಗಿ ರಾತ್ರಿ 11 ಸಮಯದಲ್ಲೂ ಓಡಾಡುವಂತಹ ವ್ಯವಸ್ಥೆಯನ್ನು ರಾಜ್ಯದಲ್ಲಿ ಜಾರಿಗೆ ತರಲಾಗುವುದು ಎಂದು ಮುಖ್ಯ ಮಂತ್ರಿ ಆದಿತ್ಯನಾಥ್ ತಿಳಿಸಿದ್ದಾರೆ.
Next Story