ದೇಶದಲ್ಲಿ ಮಕ್ಕಳ ಅಪರಾಧ ಪ್ರಕರಣಗಳು ಹೆಚ್ಚಳ: ಉಮಾ ಕಳವಳ

ಉಡುಪಿ, ಎ.2: ರಾಷ್ಟ್ರೀಯ ಅಪರಾಧ ಅಂಕಿ ಅಂಶಗಳ ಪ್ರಕಾರ ದೇಶದಲ್ಲಿ ಕಳೆದ 10 ವರ್ಷಗಳಿಂದ ಮಕ್ಕಳಿಂದ ಹಾಗೂ ಮಕ್ಕಳ ಮೇಲೆ ನಡೆಯುತ್ತಿರುವ ಅಪರಾಧ ಪ್ರಕರಣಗಳು ಗಣನೀಯ ಸಂಖ್ಯೆಯಲ್ಲಿ ಏರಿಕೆ ಆಗುತ್ತಿರುವುದು ಕಳವಳಕಾರಿಯಾಗಿದೆ. ಇದರ ನಿಯಂತ್ರಣ ಇಂದಿನ ಅತಿಅಗತ್ಯ ಎಂದು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಉಮಾ ಎಂ.ಜಿ. ಹೇಳಿದ್ದಾರೆ.
ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಅಭಿಯೋಗ ಇಲಾಖೆ, ಜಿಲ್ಲಾ ವಕೀಲರ ಸಂಘ ಹಾಗೂ ಕುಂಜಿ ಬೆಟ್ಟು ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದ ಸಂಯುಕ್ತ ಆಶ್ರಯ ದಲ್ಲಿ ರವಿವಾರ ಮಣಿಪಾಲ ಕೆಎಂಸಿಯ ಟಿ.ಎಂ.ಎ.ಪೈ ಸಭಾಂಗಣದಲ್ಲಿ ಆಯೋಜಿಸಲಾದ ಮಕ್ಕಳ ಸ್ನೇಹಿ ಕಾನೂನು ಸೇವೆಗಳು ಮತ್ತು ಮಕ್ಕಳ ರಕ್ಷಣೆ ಯೋಜನೆ-2015 ಇದರಡಿ ಪೊಲೀಸರು ಮತ್ತು ಸಾರ್ವಜನಿಕರ ಪಾತ್ರ ಕುರಿತ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.
ಹುಟ್ಟುತ್ತ ಯಾರೂ ಕೆಟ್ಟವರು ಅಥವಾ ಅಪರಾಧಿಗಳಾಗಿರುವುದಿಲ್ಲ. ಮಕ್ಕಳು ಬೆಳೆಯುವ ವಾತಾವರಣ ಅವರ ಭವಿಷ್ಯವನ್ನು ನಿರ್ಧರಿಸುತ್ತದೆ. ಕಾನೂನು ಸಂಘರ್ಷಕ್ಕೆ ಒಳಗಾಗಿರುವ ಮಕ್ಕಳು, ಶೋಷಣೆಗೆ ಒಳಗಾದ ಮಕ್ಕಳು ಹಾಗೂ ಅಸಹಾಯಕ ಮಕ್ಕಳ ಬಗ್ಗೆ ತಿಳಿಯುವ ಅಗತ್ಯವಿದ್ದು, ಅಂತಹ ಮಕ್ಕಳುಲ ಅಪರಾಧ ಪ್ರಕರಣಗಳಲ್ಲಿ ಕಂಡುಬಂದಲ್ಲಿ ಅವರಿಗೆ ಸೂಕ್ತ ಸಹಾಯ ಹಸ್ತ ನೀಡ ಬೇಕಾಗಿದೆ. ಇಂತಹ ಸಂದರ್ಭದಲ್ಲಿ ಪೊಲೀಸರು ಮತ್ತು ಸಾರ್ವಜನಿಕರಿಗೆ ಕಾನೂನಿನ ಪರಿಕಲ್ಪನೆ ಅಗತ್ಯವಿದೆ ಎಂದರು.
ದೇಶದ ಶೇ.40ರಷ್ಟು ಜನಸಂಖ್ಯೆ 18 ವರ್ಷದೊಳಗಿನ ಮಕ್ಕಳಿದ್ದಾರೆ. ಮಕ್ಕಳ ವಿಚಾರಣೆಗೆ ಜನಸ್ನೇಹಿ ಪೊಲೀಸ್ ವ್ಯವಸ್ಥೆ ಅಗತ್ಯವಿದೆ. ಮಕ್ಕಳ ಬಗ್ಗೆ ನೋಡುವ ಮನೋಭಾವವನ್ನು ನಾವು ಬದಲಾಯಿಸಿಕೊಳ್ಳಬೇಕಾಗಿದೆ. ಪೊಲೀಸರು ಮಕ್ಕಳ ಮನಸ್ಥಿತಿಯನ್ನು ಅರಿತು ಅವರೊಂದಿಗೆ ವಿಚಾರಣೆ ನಡೆಸಬೇಕು. ಮಕ್ಕಳ ರಕ್ಷಣೆ ಎಲ್ಲಾ ಇಲಾಖೆಗಳ ಜವಾಬ್ದಾರಿಯಾಗಿದ್ದು, ಜವಾಬ್ದಾರಿ ಅರಿತು ಕಾರ್ಯ ನಿರ್ವಹಿಸಿದರೆ ಮಕ್ಕಳ ಸ್ನೇಹಿ ವಾತಾವರಣ ನಿರ್ಮಾಣ ಸಾಧ್ಯ ಎಂದು ಅವರು ಅಭಿಪ್ರಾಯ ಪಟ್ಟರು.
ಸಾರ್ವಜನಿಕರು ಯಾವುದೇ ಘಟನೆ ಸಂಭವಿಸಿದಾಗ ಹಿಂಸಾತ್ಮಕ ಪ್ರತಿಭಟನೆ ಗಿಳಿಯುವುದರಿಂದ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿಯಾಗುವುದಲ್ಲದೇ, ಅಪರಾದ ನಡೆದ ಸ್ಥಳದಲ್ಲಿನ ಪ್ರಮುಖ ಸಾಕ್ಷ್ಯಗಳು ನಾಶವಾಗುತ್ತದೆ. ಇದರಿಂದ ಕಾನೂನು ಇತ್ಯರ್ಥಕ್ಕೆ ತೊಡಕಾಗಲಿದೆ. ಇಂದು ದೇಶದಲ್ಲಿ ಅಪರಾಧಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಶಿಕ್ಷೆ ಪ್ರಮಾಣ ಸಾಕಷ್ಟು ಇಳಿಮುಖವಾಗುತ್ತಿದೆ ಎಂದು ಅವರು ಹೇಳಿದರು.
ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ವೆಂಕಟೇಶ ನಾಯ್ಕ ಟಿ. ಮಾತನಡಿ, 2014-15ರಲ್ಲಿ ದೇಶದಲ್ಲಿ 90,000 ಮಕ್ಕಳ ಮೇಲಿನ ಅಪರಾಧ ಪ್ರಕರಣಗಳು ದಾಖಲಾಗಿವೆ. ಪೊಲೀಸರು, ನ್ಯಾಯಾಂಗ, ಸಾರ್ವಜನಿಕರು ಮಕ್ಕಳ ಸ್ನೇಹಿ ವಾತಾವರಣ ನಿರ್ಮಿಸಿ, ಮಕ್ಕಳ ಮೇಲಿನ ಪ್ರಕರಣಗಳನ್ನು ಕಡಿಮೆಗೊಳಿಸಲು ಪ್ರಯತ್ನಿಸಬೇಕು ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಟಿ.ಬಾಲಕೃಷ್ಣ ಮಾತ ನಾಡಿ, ಮಕ್ಕಳ ರಕ್ಷಣೆ ಕುರಿತಂತೆ ಜಿಲ್ಲೆಯ ಪೊಲೀಸರಿಗೆ ಪ್ರತಿ ತಿಂಗಳಿಗೊಮ್ಮೆ ತರಬೇತಿ ನೀಡಲಾಗುತ್ತದೆ. ಮಹಿಳೆಯರು ಮತ್ತು ಮಕ್ಕಳಿಗೆ ಸಂಬಂಧಿಸಿದಂತೆ ಪ್ರತಿ ಠಾಣೆಯಲ್ಲಿ ಪ್ರತ್ಯೇಕ ಘಟಕಗಳಿದ್ದು, ಇದರಲ್ಲಿ ಬದ್ದ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದರು.
ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಮುಖ್ಯ ನ್ಯಾಯಿಕ ದಂಡಾಧಿಕಾರಿ ಶಿವರಾಂ ಕೆ., ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲ ಪ್ರೊ. ಪ್ರಕಾಶ್ ಕಣಿವೆ, ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯೆ ಡಾ.ವನಿತಾ ತೊರವಿ, ಸರಕಾರಿ ಅಭಿಯೋಜಕಿ ಶಾಂತಿ ಬಾಯಿ ಉಪಸ್ಥಿತರಿದ್ದರು.
ಜಿಲ್ಲಾ ಹೆಚ್ಚವರಿ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಸ್ವಾಗತಿಸಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಲತಾ ವಂದಿಸಿ ದರು. ಮನಮೋಹನ ರಾವ್ ಕಾರ್ಯಕ್ರಮ ನಿರೂಪಿಸಿದರು. ಬಳಿಕ ವಿವಿಧ ವಿಷಯಗಳ ಕುರಿತು ಗೋಷ್ಠಿಗಳು ನಡೆಯಿತು.
ಮಕ್ಕಳ ಸಮಗ್ರ ರಕ್ಷಣೆಗೆ ಕಾರ್ಯಪಡೆ:
ದೇಶದಲ್ಲಿ ಮಕ್ಕಳ ರಕ್ಷಣೆಗಾಗಿ ಹಲವು ಕಾನೂನುಗಳಿದ್ದರೂ ಮಕ್ಕಳಿಗೆ ಸರಿ ಯಾದ ನ್ಯಾಯ ಸಿಗುತ್ತಿಲ್ಲ. ಕಾನೂನು ಜಾರಿಗೆ ತರುವುದು ಮಾತ್ರವಲ್ಲ ಅದರ ಸಮರ್ಪಕ ಅನು ಷ್ಠಾನಕ್ಕೆ ಎಲ್ಲಾ ಇಲಾಖೆಗಳ ಸಹಾಕರ ಅಗತ್ಯ. ಮಕ್ಕಳ ರಕ್ಷಣೆಯ ಹೆಸರಿನಲ್ಲಿ ಶಿಕ್ಷೆ ಕೊಡುವುದು ಸರಿಯಲ್ಲ. ಜಿಲ್ಲೆಯ ಮಕ್ಕಳ ಸಮಗ್ರ ರಕ್ಷಣೆಗಾಗಿ ಗ್ರಾಮ ಮಟ್ಟದಿಂದ ಜಿಲ್ಲಾ ಮಟ್ಟದ ವರೆಗೆ ಎಲ್ಲಾ ಇಲಾಖೆಗಳ ಸಹಕಾರದೊಂದಿಗೆ ಕಾರ್ಯಪಡೆ ಆರಂಭಿಸಲು ಚಿಂತನೆ ಮಾಡಲಾಗುತ್ತಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ತಿಳಿಸಿದ್ದಾರೆ.







