ಆಕ್ಷೇಪ ಸಲ್ಲಿಸಲು ಕುಟುಂಬಕ್ಕೆ ಅವಕಾಶ
ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ

ಮಡಿಕೇರಿ, ಎ.3: ಡಿವೈಎಸ್ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ವರದಿಗೆ ಆಕ್ಷೇಪಣೆ ಸಲ್ಲಿಕೆಗೆ ಗಣಪತಿ ಅವರ ತಂದೆ, ತಾಯಿ, ಸಹೋದರ ಮತ್ತು ಸಹೋದರಿಗೆ ನಗರದ ಪ್ರಿನ್ಸಿಪಲ್ ಸಿವಿಲ್ ಜಡ್ಜ್ (ಜೂ ನಿಯರ್ ಡಿವಿಷನ್) ಮತ್ತು ಜೆಎಂಎಫ್ಸಿ ನ್ಯಾಯಾಲಯ ಅವಕಾಶವನ್ನು ಒದಗಿಸುವ ಮೂಲಕ ಪ್ರಕರಣಕ್ಕೆ ಮತ್ತೊಂದು ತಿರುವು ನೀಡಿದೆ. 2016ರ ಜು.7ರಂದು ನಡೆದ ಡಿವೈಎಸ್ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ತಂದೆ ಕುಶಾಲಪ್ಪ, ತಾಯಿ ಪೊನ್ನಮ್ಮ, ಫಿರ್ಯಾದಿದಾರರನ್ನಾಗಿ ಪರಿಗಣಿಸಬೇಕೆಂದು ಅಗತ್ಯ ದಾಖಲೆಗಳೊಂದಿಗೆ ಇದೇ ಮಾ.7ರಂದು ನ್ಯಾಯಾಲಯದಲ್ಲಿ ವಾದ ಮಂಡನೆಯಾಗಿತ್ತು.
ಈ ಸಂಬಂಧ ನ್ಯಾಯಾಧೀಶೆ ಅನ್ನಪೂರ್ಣೇಶ್ವರಿ ಸೋಮವಾರ ತಮ್ಮ ಆದೇಶದಲ್ಲಿ, ಸಿಐಡಿ ವರದಿಗೆ ಸಂಬಂಧಿಸಿದಂತೆ ಡಿವೈಎಸ್ಪಿ ಗಣಪತಿ ಅವರ ತಂದೆ, ತಾಯಿ, ಸಹೋದರ ಮತ್ತು ಸಹೋದರಿಗೆ ಆಕ್ಷೇಪಣೆ ಸಲ್ಲಿಸುವುದಕ್ಕೆ ಎ.10ರವರೆಗೆ ಕಾಲಾವಕಾಶವನ್ನು ನೀಡಿದ್ದಾರೆ.
ತನಿಖೆೆ ನಡೆಸಿದ ಸಿಐಡಿ ‘ಬಿ’ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿತ್ತು. ಈ ಸಂದಭರ್ ಡಿವೈಎಸ್ಪಿ ಗಣಪತಿ ಅವರ ಪುತ್ರ ನೇಹಾಲ್ ಗಣಪತಿ, ತಮ್ಮ ಶಿಕ್ಷಣಕ್ಕೆ ತೊಂದರೆಯಾಗುವ ಕಾರಣವನ್ನು ನೀಡಿ ಪ್ರಕರಣದಿಂದ ಹಿಂದೆ ಸರಿದಿದ್ದರು.
ನ್ಯಾಯಾಲಯ ಆದೇಶ ನೀಡುವ ಸಂದರ್ಭ ಡಿವೈಎಸ್ಪಿ ಗಣಪತಿ ಅವರ ತಂದೆ ಕುಶಾಲಪ್ಪ, ಸಹೋದರ ಮಾಚಯ್ಯ ಮತ್ತು ಸಹೋದರಿ ಸಬಿತಾ ಹಾಜರಿದ್ದರು. ನ್ಯಾಯ ದೊರಕುವ ವಿಶ್ವಾಸ
‘ಡಿವೈಎಸ್ಪಿ ಗಣಪತಿ ಪ್ರಕರಣದಲ್ಲಿ ಭಾಗಿಗಳಾಗಲು ನ್ಯಾಯಾಲಯ ಅವಕಾಶ ನೀಡಿರುವುದು ನಮಗೆ ದೊರಕಿರುವ ಆರಂಭಿಕ ಗೆಲುವಾಗಿದ್ದು, ನ್ಯಾಯ ದೊರಕುವ ವಿಶ್ವಾಸವಿದೆ’ ಎಂದು ಗಣಪತಿ ಅವರ ಸಹೋದರ ಮಾಚಯ್ಯ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತರಾತುರಿಯಲ್ಲಿ ತನಿಖೆ ನಡೆಸಿ ವರದಿಯನ್ನು ಸಲ್ಲಿಸಿದೆ. ಇದೀಗ ಈ ವರದಿಗೆ ಆಕ್ಷೇಪಣೆೆ ಸಲ್ಲಿಸಲು ತಮಗೆ ಅವಕಾಶ ದೊರಕಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ದಾಖಲೆಗಳನ್ನು ನ್ಯಾಯಾಲಯಕ್ಕೆ ನೀಡುವುದಾಗಿ ತಿಳಿಸಿದರು.







