ಶುದ್ಧ ಕುಡಿಯುವ ನೀರು ನೀಡುವಲ್ಲಿ ಪಾಲಿಕೆ ವಿಫಲ: ಆಝಾದ್ ನಗರ ನಿವಾಸಿಗಳಿಂದ ಪ್ರತಿಭಟನೆ

ದಾವಣಗೆರೆ, ಎ.10: ಶುದ್ಧ ಕುಡಿಯುವ ನೀರು ನೀಡುವಲ್ಲಿ ಮಹಾನಗರ ಪಾಲಿಕೆ ವಿಫಲವಾಗಿದೆ ಎಂದು ಆರೋಪಿಸಿ ಆಜಾದ್ ನಗರದ ನಿವಾಸಿಗಳು ಮಹಾನಗರ ಪಾಲಿಕೆ ಬಳಿ ಪ್ರತಿಭಟನೆ ನಡೆಸಿದರು.
ಪಾಲಿಕೆ ಬಳಿ ಜಮಾಯಿಸಿದ ಸಾರ್ವಜನಿಕರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕುಡಿಯುವ ನೀರಿನಲ್ಲಿ ಚರಂಡಿ ನೀರು ಮಿಶ್ರಣಗೊಂಡು ಶುದ್ದ ಕುಡಿಯುವ ನೀರಿಗೂ ಸಹ ಪರದಾಡುವ ಪರಿಸ್ಥಿತಿ ಉಂಟಾಗಿದೆ. ಈ ರೀತಿಯ ಅವ್ಯವಸ್ಥೆಯಿಂದ ಸ್ಥಳೀಯ ನಿವಾಸಿಗಳ ಆರೋಗ್ಯದಲ್ಲಿ ಏರುಪೇರುಗಳು ಉಂಟಾಗುತ್ತಿದೆ. ಈ ಬಗ್ಗೆ ಈಗಾಗಲೇ ಮಹಾನಗರ ಪಾಲಿಕೆ ಸದಸ್ಯರಿಗೂ ತಿಳಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಅಧಿಕಾರಿಗಳು ಇತ್ತ ಗಮನ ಸಹ ಹರಿಸಿಲ್ಲ ಎಂದು ದೂರಿದರು.
ಆಜಾದ್ ನಗರದ 1ನೇ ಮೇನ್, 1ನೇ ಕ್ರಾಸ್ ನಲ್ಲಿ ಬಾಕ್ಸ್ ಚರಂಡಿ ಅವ್ಯವಸ್ಥೆಯಾಗಿದೆ.ಇದರಿಂದ ಸಾರ್ವಜನಿಕರು ವಾಸಿಸಲು ತೀವ್ರ ತೊಂದರೆಯಾಗುತ್ತಿದೆ . ಪಾಲಿಕೆ ಅಧಿಕಾರಿಗಳು ಕೂಡಲೇ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಸರಿಪಡಿಸಿ. ಬಾಕ್ಸ್ ಚರಂಡಿಯ ವ್ಯವಸ್ಥೆಯನ್ನು ಕಲ್ಪಿಸಿಕೊಡಬೇಕು ಎಂದು ಸಾರ್ವಜನಿಕರು ಆಗ್ರಹಿಸಿದರು.





