ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

ಮಂಡ್ಯ, ಮೇ 4: ಸಾಲಬಾಧೆ ತಾಳಲಾರದೆ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮದ್ದೂರು ತಾಲೂಕು ಕೋಣಸಾಲೆ ಗ್ರಾಮದಲ್ಲಿ ನಡೆದಿದೆ.
ರೈತ ಮೋಹನ್(33) ತನ್ನ ಜಮೀನಿನ ಬಳಿ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೋಹನ್ ಮೂರು ಎಕರೆ ಜಮೀನಿನಲ್ಲಿ ಕಬ್ಬು, ಭತ್ತ, ಇತರ ಬೆಳೆ ಬೆಳೆದಿದ್ದು, ನೀರಿಲ್ಲದೆ ಬೆಳೆ ಒಣಗಿ ಹೋಗಿತ್ತು. ಕೃಷಿಗಾಗಿ ಕೃತಿ ಪತ್ತಿನ ಸಹಕಾರ ಸಂಘದಲ್ಲಿ 42 ಸಾವಿರ, ವಿಜಯ ಬ್ಯಾಂಕ್ನಲ್ಲಿ 2.50 ಲಕ್ಷ ಆಭರಣ ಸಾಲ, ಸ್ತ್ರೀ ಶಕ್ತಿ ಸ್ವಸಹಾಯ ಸಂಘದಿಂದ 1 ಲಕ್ಷ ಹಾಗೂ 3 ಲಕ್ಷ ರೂ. ಕೈಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ.
ಕಂದಾಯ ಇಲಾಖೆ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಮೃತನ ಕುಟುಂಬದವರಿಗೆ ಸಾಂತ್ವನ ಹೇಳಿದರು. ಈ ಸಂಬಂಧ ಬೆಸಗರಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
Next Story





