ನ್ಯಾಯಾಧೀಶರ ವಿರುದ್ಧ ದೂರು: ಪ್ರಮಾಣ ಪತ್ರ ಸಲ್ಲಿಕೆ ಕಡ್ಡಾಯ
ಬೆಂಗಳೂರು, ಮೇ 6: ಅಧೀನ ನ್ಯಾಯಾಲಯಗಳ ನ್ಯಾಯಾಧೀಶರ ವಿರುದ್ಧ ಸಲ್ಲಿಕೆಯಾಗುವ ದೂರುಗಳಲ್ಲಿ ದೂರುದಾರರು ಪ್ರಮಾಣ ಪತ್ರ ಸಲ್ಲಿಸುವುದು ಕಡ್ಡಾಯ ಎಂದು ಹೈಕೋರ್ಟ್ ಸೂಚಿಸಿದೆ. ಈ ಕುರಿತಂತೆ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅಶೋಕ ಜಿ.ನಿಜಗಣ್ಣವರ್ ಇತ್ತೀಚೆಗೆ ಸುತ್ತೋಲೆ ಹೊರಡಿಸಿದ್ದಾರೆ.
ಒಂದು ವೇಳೆ ದೂರು ಕೇಳಿಬಂದ ನ್ಯಾಯಾಧೀಶರ ವಿರುದ್ಧ ವಿಚಾರಣೆ ನಡೆಸಬೇಕು ಎಂದಾದರೆ ಮುಖ್ಯ ನ್ಯಾಯಮೂರ್ತಿಗಳಿಂದ ನಿರ್ದೇಶಿತಗೊಂಡ ಸಕ್ಷಮ ಪ್ರಾಧಿಕಾರ ಮುಂಚಿತವಾಗಿಯೇ ನಿರ್ಧರಿಸುತ್ತದೆ. ದೂರು ಮುಂದಿನ ಕ್ರಮಕ್ಕೆ ಅರ್ಹವಾಗಿದೆ ಎಂದು ಪ್ರಾಧಿಕಾರಕ್ಕೆ ಮನದಟ್ಟಾದರೆ ದೂರಿಗೆ ಸಂಬಂಧಿಸಿದಂತೆ ಪ್ರಕ್ರಿಯೆ ಮುಂದುವರಿಯುತ್ತದೆ ಎಂದು ಸುತ್ತೋಲೆಯಲ್ಲಿ ವಿವರಿಸಲಾಗಿದೆ.
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ನಿರ್ದೇಶನದ ಮೇರೆಗೆ ಮಾರ್ಗಸೂಚಿ ರೂಪಿಸಲಾಗಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ನ್ಯಾಯಮೂರ್ತಿಗಳ ವಿರುದ್ಧ ಅರ್ಜಿ ಸಲ್ಲಿಸುವ ಹಾವಳಿ ಹೆಚ್ಚಿರುವ ಕಾರಣದಿಂದ ದೂರುದಾರರು ಪ್ರಮಾಣ ಪತ್ರ ಸಲ್ಲಿಸುವುದು ಕಡ್ಡಾಯ ಎಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಎಲ್ಲ ಹೈಕೋರ್ಟ್ಗಳಿಗೆ ನಿರ್ದೇಶನ ನೀಡಿದ್ದಾರೆ.





