ಮೇ 23: ಕನ್ನಡಪರ ಸಂಘಟನೆಗಳಿಂದ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ
ಮಲಯಾಳ ಕಡ್ಡಾಯ ಆದೇಶದಿಂದ ವಿನಾಯಿತಿಗೆ ಆಗ್ರಹ
ಕಾಸರಗೋಡು, ಮೇ 6: ಮಲಯಾಳ ಭಾಷಾ ಕಡ್ಡಾಯ ಆದೇಶದಿಂದ ಭಾಷಾ ಅಲ್ಪಸಂಖ್ಯಾತರಿಗೆ ವಿನಾಯಿತಿ ನೀಡುವಂತೆ ಒತ್ತಾಯಿಸಿ ಮೇ 23ರಂದು ಕಾಸರಗೋಡು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕುವ ಮೂಲಕ ಬಲಪ್ರದರ್ಶನಕ್ಕೆ ಕನ್ನಡಪರ ಸಂಘಟನೆಗಳು ತೀರ್ಮಾನಿಸಿವೆ.
ಕಾಸರಗೋಡು ಬೀರಂತಬೈಲು ಕನ್ನಡ ಅಧ್ಯಾಪಕ ಭವನದಲ್ಲಿ ಶನಿವಾರ ನಡೆದ ವಿವಿಧ ಕನ್ನಡಪರ ಸಂಘಟನೆಗಳ ಸಂಯುಕ್ತ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು.
ಜೂನ್ 1ಕ್ಕಿಂತ ಮೊದಲು ಜಿಲ್ಲೆಯ ಎಲ್ಲ ಗ್ರಾಪಂಗಳಲ್ಲಿ ಜನಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳುವುದು ಹಾಗೂ ಅದಕ್ಕೂ ಮುನ್ನ ಮೇ 23ರಂದು ಬೆಳಗ್ಗೆ 10ಕ್ಕೆ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಸಭೆ ನಿರ್ಧರಿಸಿತು.
ಸರಕಾರವು ಭಾಷಾ ಅಲ್ಪಸಂಖ್ಯಾತರ ಹಕ್ಕುಗಳನ್ನು ಕಸಿಯಲು ಮುಂದಾಗಿದೆ. ಆದ್ದರಿಂದ ಇದರ ವಿರುದ್ಧ ಮುಂದಿನ ದಿನಗಳಲ್ಲಿ ಉಗ್ರ ಸ್ವರೂಪದ ಹೋರಾಟ ಸಂಘಟಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ಸಭೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಗಡಿನಾಡ ಘಟಕದ ಅಧ್ಯಕ್ಷ ಎಸ್.ವಿ.ಭಟ್, ಕರ್ನಾಟಕ ಸಮಿತಿಯ ಅಧ್ಯಕ್ಷ ಮುರಳೀಧರ ಬಳ್ಳುಕ್ಕರಾಯ, ಕೇಶವ ಪ್ರಸಾದ್ ನಾಣಿತ್ತಿಲು, ಜಿಪಂ ಸದಸ್ಯ ಕೆ.ಶ್ರೀಕಾಂತ್, ಉಮೇಶ್ ಸಾಲ್ಯಾನ್, ಪುರುಷೋತ್ತಮ ಭಟ್, ಮಹಾಲಿಂಗೇಶ್ವರ ಭಟ್, ಭಾಸ್ಕರ್, ಸತ್ಯಶಂಕರ, ಶ್ಯಾಮ್ ಭಟ್ ಉಪಸ್ಥಿತರಿದ್ದರು.







